ಕನ್ನಡಪ್ರಭ ವಾರ್ತೆ ಯಾದಗಿರಿ
ಪ್ರತಿ ಹೆಕ್ಟೇರ್ ಮಳೆಯಾಶ್ರಿತ- ಒಣಬೇಸಾಯಕ್ಕೆ 8,500 ರುಪಾಯಿಗಳು ನೀರಾವರಿಗೆ 17 ಸಾವಿರ ರುಪಾಯಿಗಳನ್ನು ಮತ್ತು ಬಹುವಾರ್ಷಿಕ ಹಾಗೂ ತೋಟಗಾರಿಕೆ ಬೆಳೆಗಳಿಗೆ 22,500 ರು.ಗಳವರೆಗೆ ಪರಿಹಾರ ನೀಡಲು ಸರ್ಕಾರ ನಿಗದಿಪಡಿಸಿದೆ.
ಕೇಂದ್ರ ಸರ್ಕಾರದಿಂದ ಇತ್ತೀಚೆಗಷ್ಟೆ ಬಿಡುಗಡೆಯಾದ ಹಣವನ್ನು ರಾಜ್ಯ ಸರ್ಕಾರ ರೈತರ ಖಾತೆಗಳಿಗೆ ಜಮೆಯಾಗುವಂತೆ ಬಿಡುಗಡೆ ಮಾಡಿತ್ತು. ಆದರೆ, ಕೆಲವು ಬ್ಯಾಂಕುಗಳಲ್ಲಿ ಈ ಪರಿಹಾರ ಹಣವನ್ನು ರೈತರ ಉಳಿತಾಯ ಖಾತೆಗಳಿಗೆ ಜಮೆ ಮಾಡದೆ, ಅವರ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳುತ್ತಿರುವುದು ಕಂಡು ಬಂದಿದೆ. ಹುಣಸಗಿಯ ಪ್ರಗತಿ ಕೃಷ್ಣಾ ಬ್ಯಾಂಕಿನಲ್ಲಿ ಇಂತಹ ಕಾರಣಗಳಿಂದ ರೈತರು ಪ್ರತಿಭಟನೆಗಿಳಿದಿದ್ದಾರೆ.ಎನ್ಡಿಆರ್ಎಫ್ ನಿಯಮಾವಳಿ ಪ್ರಕಾರ ಹಣ ಬಿಡುಗಡೆಯಾಗಿ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡುವ ಪ್ರಕ್ರಿಯೆ ಎಲ್ಲೆಡೆ ಆರಂಭವಾಗಿದೆ. ಆದರಿಲ್ಲಿ, ಬ್ಯಾಂಕುಗಳು ಉಳಿತಾಯ ಖಾತೆ ಬಂದ್ ಮಾಡಿ, ಪರಿಹಾರದ ಹಣ ಸಾಲದ ಖಾತೆಗಳಿಗೆ ಜಮೆ ಮಾಡುತ್ತಿರುವುದು ರೈತರಲ್ಲಿ ಆಕ್ರೋಶ ಮೂಡಿಸಿದೆ. ಗ್ರಾಮದ ಹನುಮಂತರಾಯ, ಪರಮಣ್ಣ, ಯೆಲ್ಲಪ್ಪ ಮುಂತಾದವರು ಪರಿಹಾರಕ್ಕಾಗಿ ಪರದಾಡುತ್ತಿದ್ದಾರೆ.
ಈ ಹಿಂದೆಯೂ ಕೂಡ ಯಾದಗಿರಿ ಜಿಲ್ಲೆಯಲ್ಲಿ ವಿಧವಾ ವೇತನ, ವೃದ್ಧಾಪ್ಯ ವೇತನದಂತಹ ಪಿಂಚಣಿ ಹಾಗೂ ಪರಿಹಾರ ಹಣವನ್ನು ಬ್ಯಾಂಕುಗಳು ಸಾಲದ ಖಾತೆಗಳಿಗೆ ಜಮೆ ಮಾಡಿಕೊಂಡಿದ್ದು ಚರ್ಚಗೆ ಗ್ರಾಸವಾಗಿತ್ತು. ಬ್ಯಾಂಕುಗಳು ಈ ನೀತಿ ಕ್ರಿಮಿನಲ್ ಅಪರಾಧದಂತೆ ಎಂದು ಅಂದಿನ ಕಂದಾಯ ಸಚಿವರಾಗಿದ್ದ ಆರ್. ಅಶೋಕ್ ಅವರು ಅಧಿವೇಶನದಲ್ಲಿ ಪ್ರತಿಕ್ರಿಯಿಸಿ, ಅಂತಹ ಬ್ಯಾಂಕುಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದರು.
ಬೆಳೆ ಪರಿಹಾರ, ಬೆಳೆ ವಿಮೆ, ಪಿಎಂ ಕಿಸಾನ್ ಯೋಜನೆ, ಉದ್ಯೋಗ ಖಾತ್ರಿ ಯೋಜನೆ, ರೇಷನ್ ಕಾರ್ಡ್ ಹಣ ಸೇರಿದಂತೆ ಇನ್ನಿತರ ಯೋಜನೆಯ ಹಣ ಉಳಿತಾಯ ಖಾತೆಗೆ ಜಮಾ ಆದರೆ ಅದನ್ನು ಸಾಲದ ಖಾತೆಗೆ ಹಣ ಜಮಾ ಮಾಡಿಕೊಳ್ಳುತ್ತಿರುವದು ಎಷ್ಟರ ಮಟ್ಟಿಗೆ ಸರಿ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-ಮಹಾದೇವಪ್ಪ ತಳ್ಳಳ್ಳಿ, ಸಿದ್ದಾಪೂರ ಗ್ರಾಮಸ್ಥ, ಯಾದಗಿರಿ ಜಿಲ್ಲೆ ಸುಮಾರು 25-30ಕ್ಕೂ ಹೆಚ್ಚು ರೈತರಿಗೆ ಬಂದಿರುವ ಬರ ಪರಿಹಾರ ಹಣವನ್ನು ನೀಡುವಲ್ಲಿ ಬ್ಯಾಂಕ್ ನಿರಾಕರಿಸಿವೆ. ಪಿಎಂ ಕಿಸಾನ್ ಹಣ, ಬರ ಪರಿಹಾರ ಹಣ, ಉದ್ಯೋಗ ಖಾತ್ರಿ ಹಣವನ್ನೂ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳುತ್ತಿವೆ. ಹೀಗಾದರೆ, ಬದುಕು ಹೇಗೆ ಸಾಗಬೇಕು?