ಲೀಡ್‌ ಪ್ಯಾಕೇಜ್….ಎರಡನೇ ದಿನವೂ ಬರ ಪರಿಸ್ಥಿತಿ ಅಧ್ಯಯನ

KannadaprabhaNewsNetwork |  
Published : Aug 09, 2026, 01:30 AM IST
08ಕೆಪಿಆರ್‌ಸಿಆರ್‌ 01:  | Kannada Prabha

ಸಾರಾಂಶ

Minister Dr. Ajay Dharm Singh, who has initiated a review of the drought situation, assessed conditions across various taluks of the district for the second consecutive day on Saturday, gathering information from farmers, elected representatives, and officials.

-ಸಚಿವ ಡಾ.ಅಜಯ್‌ ಧಮ್‌ರ್ ಸಿಂಗ್‌ ಅವರಿಂದ ಜಿಲ್ಲಾದ್ಯಂತ ಸಂಚಾರ । ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳಿಗೆ ತಾಕೀತು

------

ಕನ್ನಡಪ್ರಭ ವಾರ್ತೆ ರಾಯಚೂರು

ಬರ ಅವಲೋಕನ ಆರಂಭಿಸಿರುವ ಸಚಿವ ಡಾ.ಅಜಯ್ ಧರ್ಮ್ ಸಿಂಗ್ ಅವರು 2ನೇ ದಿನವೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ಪರಿಸ್ಥಿತಿಯ ಅವಲೋಕನೆ ನಡೆಸಿ, ರೈತರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಶನಿವಾರ ಮಾಹಿತಿ ಪಡೆದುಕೊಂಡರು.

ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯ ಸರ್ಕಿಟ್ ಹೌಸ್ ನಿಂದ ಶನಿವಾರ ಬೆಳಗ್ಗೆ ನೇರವಾಗಿ ಮಸ್ಕಿ ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿ ತೇವಾಂಶ ಕೊರತೆಯಿಂದ ಬಾಧಿತ ತೊಗರಿ ಬೆಳೆಯ ಕ್ಷೇತ್ರ ವೀಕ್ಷಣೆ ಮಾಡಿ, ನಂತರ ಗುಡದೂರು ಗ್ರಾಮದಲ್ಲಿ ತೇವಾಂಶ ಕೊರತೆಯಿಂದ ಬಾಧಿತ ಸೂರ್ಯಕಾಂತಿ, ತೊಗರಿ ಹಾಗೂ ಹತ್ತಿ ಬೆಳೆಯ ಕ್ಷೇತ್ರ ವೀಕ್ಷಿಸಿದರು. ಅಲ್ಲಿಂದ ಹಸಮಕಲ್ ಗ್ರಾಮದ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಕೆರೆ ವೀಕ್ಷಣೆ ಮಾಡಿದರು.

ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದಲ್ಲಿ ತೇವಾಂಶ ಕೊರತೆಯಿಂದ ಬಾಧಿತ ಹತ್ತಿ ಬೆಳೆಯ ಕ್ಷೇತ್ರ ಹಾಗೂ ಬನ್ನಿಗನೂರು ಗ್ರಾಮದಲ್ಲಿ ತೇವಾಂಶ ಕೊರತೆಯಿಂದ ಬಾಧಿತ ಸೂರ್ಯಕಾಂತಿ ಹಾಗೂ ಹತ್ತಿ ಬೆಳೆಯ ಕ್ಷೇತ್ರ ವೀಕ್ಷಣೆ ಮಾಡಿದರು. ನಂತರ ಮಾನ್ವಿ ತಾಲೂಕಿನ ಹಿರೇಕೊಟ್ಟೆಕಲ್ ಹೋಬಳಿಯ ಪೋತನಾಳ್ ಗ್ರಾಮದಲ್ಲಿ ತೇವಾಂಶ ಕೊರತೆಯಿಂದ ಬಾಧಿತ ಹತ್ತಿ ಬೆಳೆಯ ಕ್ಷೇತ್ರ ವೀಕ್ಷಣೆ ಮಾಡಿ, ನೇರವಾಗಿ ಮಾನ್ವಿ ಪ್ರವಾಸ ಮಂದಿರಕ್ಕೆ ಆಗಮಿಸಿ ಮುಖಂಡರೊಂದಿಗೆ ಚರ್ಚಿಸಿದರು.

----ಬಾಕ್ಸ್-----------

ಅಧಿಕಾರಿಗಳೊಂದಿಗೆ ಬರದ ಕುರಿತು ಸಭೆ

ಕನ್ನಡಪ್ರಭ ವಾರ್ತೆ ರಾಯಚೂರು

ಸ್ಥಳೀಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಗಳು, ಮುಂಗಾರು ಹಂಗಾಮಿನ ಬಿತ್ತನೆ ಮತ್ತು ರಸಗೊಬ್ಬರ ಬೇಡಿಕೆಗಳು, ಮೇವಿನ ಲಭ್ಯತೆ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿದರು.

ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸೂಚನೆಯಂತೆ ಬರ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಂಪುಟ ಸಭೆಯ ತೀರ್ಮಾನ ಮತ್ತು ಮುಖ್ಯಮಂತ್ರಿಯ ಆದೇಶದಂತೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಿದ್ಧಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಅಧಿಕಾರಿಗಳು ಧಾವಿಸಿ ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾಮಟ್ಟದ ಮತ್ತು ತಾಲೂಕುಮಟ್ಟದ ಅಧಿಕಾರಿಗಳು, ವಿಶೇಷವಾಗಿ ಕೃಷಿ ಇಲಾಖೆಯ ಎಲ್ಲ ಅಧಿಕಾರಿಗಳು, ಹೋಬಳಿ ಹಾಗೂ ಗ್ರಾಪಂ ಮಟ್ಟಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರೈತರು ಕಷ್ಟದಲ್ಲಿದ್ದು, ಸರ್ಕಾರ ರೈತರ ಪರವಾಗಿದೆ. ಕೇವಲ ತಾಂತ್ರಿಕ ಕಾರಣಗಳನ್ನು ನೆಪವಾಗಿ ಹೇಳದೆ, ಅಗತ್ಯ ಬಿದ್ದಲ್ಲಿ ಮ್ಯಾನುವಲ್ ಆಗಿ ಪರಿಶೀಲಿಸಿ ರೈತರಿಗೆ ಅನುಕೂಲವಾಗುವಂತೆ ಕೆಲಸ ಮಾಡಬೇಕು ಎಂದು ಸಚಿವರು ಸೂಚನೆ ನೀಡಿದರು.

ಕುಡಿಯುವ ನೀರಿನ ಅಭಾವ ನೀಗಿಸಲು ರಾಜ್ಯ ಸರ್ಕಾರವು ಪ್ರತೀ ತಾಲೂಕಿಗೆ 1 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ಈಗಾಗಲೇ ಅಗತ್ಯ ಆ್ಯಕ್ಷನ್ ಪ್ಲಾನ್ ಸಿದ್ಧಪಡಿಸಲಾಗಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 4 ಕೋಟಿ ರು. ಬಿಡುಗಡೆಯಾಗಿದೆ. ನಗರಾಡಳಿತ ವ್ಯಾಪ್ತಿಯಲ್ಲಿ ಇನ್ನೂ ಅಗತ್ಯವಿರುವ 8 ಕೋಟಿ ರು. ತುರ್ತು ಅನುದಾನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೃಷಿ ಮತ್ತು ನರೇಗಾ (ಉದ್ಯೋಗ ಖಾತ್ರಿ) ಯೋಜನೆಗಳ ಮೂಲಕ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಕೆಲಸ ಒದಗಿಸಬೇಕು. ರಾಜ್ಯದ ಜನರು ಉದ್ಯೋಗ ಅರಸಿ ನೆರೆ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ರಸಗೊಬ್ಬರ ಮತ್ತು ಬೀಜಗಳ ದಾಸ್ತಾನು ಸಮರ್ಪಕವಾಗಿರಬೇಕು. ಕೆಲವು ಅಧಿಕಾರಿಗಳು ಖಾಸಗಿಯವರೊಂದಿಗೆ ಶಾಮೀಲಾಗಿ ಕೃತಕ ಅಭಾವ ಸೃಷ್ಟಿಸಿ, ಅಧಿಕ ಬೆಲೆಗೆ, ನೆರೆ ರಾಜ್ಯಗಳಿಗೆ ಅಕ್ರಮವಾಗಿ ರಸಗೊಬ್ಬರ ಮತ್ತು ಬೀಜಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಸಾರ್ವಜನಿಕರ ಹಾಗೂ ರೈತರ ಹಿತ ಕಾಯುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು ದಿನನಿತ್ಯದ ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಆದೇಶಿಸಿದರು.

ಜಿಲ್ಲೆಯ ರೈತರು ಕರ್ನಾಟಕ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ಅಗತ್ಯ ಕ್ರಮವನ್ನು ಸಂಬಂಧಿಸಿದ ಅಧಿಕಾರಿಗಳು ವಹಿಸಬೇಕು. ರಾಯಚೂರು ನಗರ ಪ್ರದೇಶ ಸಹಿತ ಜಿಲ್ಲೆಯ ಗ್ರಾಮೀಣ ಭಾಗಗಳಿಗೆ ಸರಿಯಾಗಿ ಕುಡಿಯುವ ನೀರನ್ನು ಸರಬರಾಜು ಮಾಡಬೇಕು. ನೀರಿನ ಕೊರತೆ ಕಂಡುಬಂದಲ್ಲಿ ಕೂಡಲೇ ಪರ್ಯಾಯ ವ್ಯವಸ್ಥೆ ಮೂಲಕ ಕುಡಿಯುವ ನೀರನ್ನು ಒದಗಿಸಬೇಕು. ಜಿಲ್ಲೆಯ ಪ್ರತಿಯೊಂದು ಹಳ್ಳಿಗಳ ಸಮಸ್ಯೆಗಳ ಪಟ್ಟಿ ಜಿಲ್ಲಾಡಳಿತಕ್ಕೆ ನೀಡಬೇಕು. ಜಿಲ್ಲಾಡಳಿತದಿಂದ ವರದಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಮಾಜಿ ಸಚಿವ, ಎಂಎಲ್ಸಿ ಎನ್‌.ಎಸ್‌.ಭೋಸರಾಜು, ಶಾಸಕರಾದ ಡಾ.ಶಿವರಾಜ ಪಾಟೀಲ್‌ ಪಾಟೀಲ್, ಬಸನಗೌಡ ದದ್ದಲ್, ಆರ್.ಬಸನಗೌಡ ತುರ್ವಿಹಾಳ, ಜಿ.ಹಂಪಯ್ಯ ನಾಯಕ, ಎಂಎಲ್ಸಿ ಬಸನಗೌಡ ಬಾದರ್ಲಿ, ಎಂಪಿ ಕುಮಾರ ನಾಯಕ,ಡಿಸಿ ಪೂವಿತಾ ಎಸ್‌. ಎಸ್ಪಿ, ಆಯುಕ್ತರು, ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದ ಹಾಜರಿದ್ದರು.

-------------------------

ರಾಯಚೂರು: ಶೇ.82ಕ್ಕೂ ಹೆಚ್ಚು ಬೆಳೆಹಾನಿ

ರಾಯಚೂರು: ಎರಡು ದಿನಗಳ ಕಾಲ ಇಡೀ ಜಿಲ್ಲೆಯಲ್ಲಿ ಸಂಚರಿಸಿ ಅಧ್ಯಯನ ಮಾಡಿದ್ದು, ಒಂದು ಅಂದಾಜಿನ ಪ್ರಕಾರ ಶೇ.82 ಕ್ಕು ಹೆಚ್ಚು ಪ್ರಮಾಣದಲ್ಲಿ ಬೆಳೆ ಹಾನಿಗೀಡಾಗಿದೆ ಎಂದು ಸಚಿವ ಡಾ.ಅಜಯ ಧರ್ಮಸಿಂಗ್‌ ತಿಳಿಸಿದರು.

ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ್ದು, ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿ, ರೈತರ ಸಂಕಷ್ಟವನ್ನು ಅರಿಯುವ ಪ್ರಯತ್ನ ಮಾಡಿದ್ದೇನೆ ಎಂದರು.

ಜಿಲ್ಲೆಯಲ್ಲಿ ಸುಮಾರು 2.73 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದ್ದು, ಅದರಲ್ಲಿ ಸುಮಾರು 1.77 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆಯಾಗಿದೆ. ಕೆಲ ರೈತರು ಒಂದಕ್ಕಿಂತ ಹೆಚ್ಚು ಬಾರಿ ಬಿತ್ತನೆ ಮಾಡಿದ್ದಾರೆ. ಮಳೆ ಬಾರದ ಕಾರಣ ಎಲ್ಲಾ ಬೆಳೆಗಳು ಹಾಳಾಗಿವೆ ಹಾಗಾಗಿ ಈ ವರದಿಯನ್ನು ಬರುವ ಸಚಿವ ಸಂಪುಟದ ಸಭೆಯಲ್ಲಿ ಸರಕಾರದ ಗಮನಕ್ಕೆ ತರಲಾಗುವುದು ಎಂದು ಸಚಿವರು ಭರವಸೆ ನೀಡಿದರು.

------ಫೋಟೊ----

08ಕೆಪಿಆರ್‌ಸಿಆರ್‌ 01

ರಾಯಚೂರಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸಚಿವ ಡಾ.ಅಜಯ ಧರ್ಮ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ನಡೆದ ಬರ ಸನ್ನಿವೇಶದ ಸಭೆ ನಡೆಯಿತು. ಮಾಜಿ ಸಚಿವ, ಎಂಎಲ್ಸಿ ಎನ್‌.ಎಸ್‌.ಭೋಸರಾಜು, ಶಾಸಕರಾದ ಡಾ.ಶಿವರಾಜ ಪಾಟೀಲ್‌ ಪಾಟೀಲ್, ಬಸನಗೌಡ ದದ್ದಲ್, ಆರ್.ಬಸನಗೌಡ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಬಾಟಮ್‌...ಕುಡಿವ ನೀರಿನ ಕೊರತೆಯಾಗದಂತೆ ನಿಗಾವಹಿಸಿ: ಸಿದ್ದು ಪಾಟೀಲ್‌