ಕನ್ನಡಪ್ರಭ ವಾರ್ತೆ ಹನೂರು
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಹಳ ದಿನಗಳ ನಂತರ ಹನೂರು ಕ್ಷೇತ್ರಕ್ಕೆ ಬಂದಿದ್ದೇನೆ. ನಾನು ಉಪಮುಖ್ಯಮಂತ್ರಿಯಾಗಿ ಇಡೀ ರಾಜ್ಯದಲ್ಲಿ ಬರಗಾಲದ ವೀಕ್ಷಣೆ ಮಾಡುತ್ತಿದ್ದೇನೆ. ನಿನ್ನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ, ಹುಣಸೂರು ಭಾಗಕ್ಕೆ ಹೋಗಿದ್ದೆ. ಎಲ್ಲಿ ನೋಡಿದರೂ ಬೆಳೆಗಳು ಒಣಗಿ ನಾಶವಾಗಿವೆ. ಚಾಮರಾಜನಗರ ಜಿಲ್ಲೆಯಲ್ಲೂ ಇದೇ ಪರಿಸ್ಥಿತಿ ಇದೆ ಎಂದರು.
ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಜನರಿಗೆ ಕುಡಿಯುವ ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ. ರೈತರು ಸಂಕಷ್ಟದಲ್ಲಿದ್ದಾರೆ. ಒಂದು ರೀತಿಯಲ್ಲಿ ಹಾಹಾಕಾರ ಪ್ರಾರಂಭವಾಗಿದೆ. ಇನ್ನೂ 15 ದಿನ, ಒಂದು ತಿಂಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಬಹುದು. ಸರ್ಕಾರ ಈ ಬಗ್ಗೆ ಗಂಭೀರವಾಗಿ ಗಮನ ಹರಿಸುತ್ತಿದೆ. ರೈತರಿಗೆ ಮತ್ತು ಜನರಿಗೆ ನೆರವಾಗಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸಂಪುಟದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.2028ರಲ್ಲಿ ನರೇಂದ್ರ ಅವರನ್ನು ಗೆಲ್ಲಿಸಲೇಬೇಕು:
ರಾಜುಗೌಡರು ಗೌರವಯುತ ಕುಟುಂಬದಿಂದ ಬಂದವರು. ನಾನು ವೀರಪ್ಪ ಮೊಯ್ಲಿ ಸಂಪುಟದಲ್ಲಿ ಅವರ ತಂದೆಯವರ ಜತೆ ಸಚಿವನಾಗಿದ್ದೆ. ಕಳೆದ ಬಾರಿ ಅವರ ಮಗ ನರೇಂದ್ರ ಅವರನ್ನು ಗೆಲ್ಲಿಸಬೇಕು ಎಂದುಕೊಂಡಿದ್ದೆವು, ಆದರೆ ಕೆಲವು ಕಾರಣಗಳಿಂದ ಆಗಲಿಲ್ಲ. 2028ರಲ್ಲಿ ನರೇಂದ್ರ ಅವರನ್ನು ಗೆಲ್ಲಿಸಲೇಬೇಕು. ನೀವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.