ಕನ್ನಡಪ್ರಭ ವಾರ್ತೆ ಚಿತ್ರದುರ್ಗಮಾದಕ ವಸ್ತುಗಳ ವ್ಯಸನ ಯುವಜನತೆಗೆ ಮಾರಕವಾಗಿದೆ. ವ್ಯಸನ ಮತ್ತು ಕಳ್ಳ ಸಾಗಾಣಿಕೆಯನ್ನು ಯುವಜನತೆ ಜಾಗೃತಿ ವಹಿಸಿ ತಡೆಗಟ್ಟಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
ಪ್ರತಿ ವರ್ಷ ಜೂ.26ನ್ನು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಯುವಜನತೆ ವ್ಯಸನದಿಂದ ಹೊರ ತರುವುದು ತುರ್ತು ಅಗತ್ಯಗಳಲ್ಲಿ ಒಂದಾಗಿದೆ. ದೇಶದ ಭವಿಷ್ಯ ರುವಾರಿಗಳಾಗಬೇಕಾದ ಯುವಜನತೆ ಮಾದಕ ವಸ್ತುಗಳ ವ್ಯಸನಿಗಳಾಗುತ್ತಿರುವುದು ಆತಂಕದ ಸಂಗತಿ. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ವಿನಂತಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಜೆ.ಕುಮಾರಸ್ವಾಮಿ ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ತಡೆದು ಭವಿಷ್ಯ ರೂಪಿಸಿಕೊಳ್ಳಬೇಕು. ಪ್ರಪಂಚದ ದೊಡ್ಡ ವ್ಯವಹಾರಗಳಲ್ಲಿ ಡ್ರಗ್ಸ್ ಮೊದಲನೆಯದಾಗಿದೆ. ಡ್ರಗ್ಸ್ ಸೇವನೆಯಿಂದ ಅಪರಾಧಗಳು ಪ್ರಾರಂಭವಾಗುತ್ತವೆ. ಯುವಕರು ವ್ಯಸನಿಗಳಾಗುವುದ ತಡಯಬೇಕು. ವಿದ್ಯಾರ್ಥಿಗಳು ಕೂಡಾ ಮಾದಕ ವಸ್ತುಗಳ ಸೇವನೆಯಿಂದ ದೂರವಿರುವ ಶಪಥ ಮಾಡಬೇಕು. ತಂದೆ-ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕೆಂದು ಕಿವಿಮಾತು ಹೇಳಿದರು.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ಮಾದಕ ವ್ಯಸನಕ್ಕೆ ಒಳಗಾದರೆ ಯುದ್ದವಿಲ್ಲದೇ ದೇಶ ಸರ್ವನಾಶವಾಗುತ್ತದೆ. ಮಾದಕ ವಸ್ತುಗಳು ಮನುಷ್ಯನ ದೇಹ ಮತ್ತು ಮನಸ್ಸು ಹಾಳು ಮಾಡುತ್ತದೆ. ಡ್ರಗ್ಸ್ ಮಾಫಿಯಾ ತಡೆಗಟ್ಟುವ ಸಾಮಾಜಿಕ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಈ ವೇಳೆ ಮನೋವೈದ್ಯ ಡಾ.ಆರ್.ಮಂಜುನಾಥ್ ಉಪನ್ಯಾಸ ನೀಡಿದರು. ಎಸ್ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಪಿ.ಬಿ.ಭರತ್ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಕಾಲೇಜಿನ ಎನ್ಎಸ್ಎಸ್ ಸಂಚಾಲಕ ಡಾ.ನಿರಂಜನ್, ತಾಲೂಕು ಆರೋಗ್ಯಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಇದ್ದರು.