ಬೀಚ್‌ಗಳಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ: ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ದೂರು

KannadaprabhaNewsNetwork | Published : Jun 4, 2025 12:47 AM
ಬೀಚ್‌ಗಳಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ, ಮೂಲ್ಕಿಯ ಕೆಲವು ಪ್ರದೇಶಗಳಲ್ಲಿ ಕೃತಕ ನೆರೆ, ವಿದ್ಯುತ್‌ ಸಮಸ್ಯೆ, ಕಾರ್ನಾಡು ಸೇರಿ ಕೆಲವು ಪ್ರದೇಶಗಳಲ್ಲಿ ಗಾಂಜಾ ವ್ಯಸನಿಗಳ ಕಾಟ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಮೂಲ್ಕಿ ನಗರ ಪಂಚಾಯತ್‌ ಸಮುದಾಯ ಭವನದಲ್ಲಿ ನಡೆದ ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ಚರ್ಚೆ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಬೀಚ್‌ಗಳಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ, ಮೂಲ್ಕಿಯ ಕೆಲವು ಪ್ರದೇಶಗಳಲ್ಲಿ ಕೃತಕ ನೆರೆ, ವಿದ್ಯುತ್‌ ಸಮಸ್ಯೆ, ಕಾರ್ನಾಡು ಸೇರಿ ಕೆಲವು ಪ್ರದೇಶಗಳಲ್ಲಿ ಗಾಂಜಾ ವ್ಯಸನಿಗಳ ಕಾಟ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಮೂಲ್ಕಿ ನಗರ ಪಂಚಾಯತ್‌ ಸಮುದಾಯ ಭವನದಲ್ಲಿ ನಡೆದ ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ಚರ್ಚೆ ನಡೆಯಿತು.

ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್‌ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಭಾಗಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ ಬಪ್ಪನಾಡು ಬಳಿಯಿಂದ ಮೂಲ್ಕಿ ವರೆಗೆ ಸರ್ವೀಸ್ ರಸ್ತೆ ಮಂಜೂರಾಗಿದ್ದು, ಕಾಮಗಾರಿ ಕೂಡಲೇ ನಡೆಸಲಾಗುವುದುದೆಂದು ಹೇಳಿದರು.

ಸದಸ್ಯ ಯೋಗೀಶ್ ಕೋಟ್ಯಾನ್ ಮಾತನಾಡಿ, ಮೂಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ಹೆದ್ದಾರಿ ದಾಟಲು ಅಪಾಯಕಾರಿಯಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮೂಲ್ಕಿಯಿಂದ ಉಡುಪಿ ಕಡೆಗೆ ಹೋಗುವ ಮೂಲ್ಕಿ ಪರಿಸರದ ವಾಹನ ಸವಾರರಿಗೆ ಹೆಜಮಾಡಿ ಟೋಲ್‌ನಲ್ಲಿ ರಿಯಾಯಿತಿ ಬಗ್ಗೆ ಸದಸ್ಯರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಯನ್ನು ಆಗ್ರಹಿಸಿದರು.

ಮಳೆಗಾಲದಲ್ಲಿ ಮಾರಕ ರೋಗಗಳ ಬಗ್ಗೆ ಎಚ್ಚರಿಕೆಯಿಂದ ಇದ್ದು, ಸ್ವಚ್ಛತೆ ಕಾಪಾಡುವಂತೆ ಮೂಲ್ಕಿಯ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣ ಹೇಳಿದರು.

ಸರ್ಕಾರಿ ಆಸ್ಪತ್ರೆಯ ಎದುರು ಭಾಗದಲ್ಲಿ ಬಸ್ ತಂಗುದಾಣ ನಿರ್ಮಾಣದ ಬಗ್ಗೆ ಚರ್ಚೆ ನಡೆಯಿತು.

ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಸಸಿಹಿತ್ಲು, ಬಪ್ಪನಾಡು, ಕೊಳಚಿಕಂಬಳ ಬೀಚ್‌ಗಳಲ್ಲಿ ಡ್ರಗ್ಸ್ ವ್ಯಸನಿಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ ಉಮಾನಾಥ ಕೋಟ್ಯಾನ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಿತ್ರಾಪುನಲ್ಲಿ ಉಪ್ಪು ನೀರಿನ ಸಮಸ್ಯೆ ಬಗ್ಗೆ ಸದಸ್ಯರಾದ ಯೋಗೀಶ್ ಕೋಟ್ಯಾನ್, ರಾಧಿಕಾ ಕೋಟ್ಯಾನ್ ಪ್ರಸ್ತಾಪಿಸಿ, ಕೃಷಿ ಹಾನಿ ತಡೆಗೆ ಕಿಂಡಿ ಅಣೆಕಟ್ಟು ದುರಸ್ತಿ ಕಾರ್ಯ ನಡೆಸಲು ಒತ್ತಾಯಿಸಿದರು.ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುವಾಗ ವಾರ್ಡ್‌ನ ಸದಸ್ಯರ ಗಮನಕ್ಕೆ ತರಬೇಕು ಎಂದು ಸದಸ್ಯ ಪುತ್ತುಭಾವ ಹೇಳಿದರು.

ವ್ಯಾಪಾರ ಉದ್ಯಮಿಗಳಿಗೆ ಘನ ತ್ಯಾಜ್ಯ ಸೇವಾ ಶುಲ್ಕ ಹೆಚ್ಚಳದ ಬಗ್ಗೆ ಸಭೆಯಲ್ಲಿ ಅನುಮೋದಿಸಲಾಯಿತು.

ನಗರ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀ, ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷರಾಜ್‌ ಶೆಟ್ಟಿ ಜಿ.ಎಂ., ಪಂಚಾಯಿತಿ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಮುಖ್ಯಾಧಿಕಾರಿ ಮಧುಕರ್‌, ಕಾರ್ಯಕಲಾಪ ನಡೆಸಿಕೊಟ್ಟರು.