ಕನ್ನಡಪ್ರಭ ವಾರ್ತೆ ಮಂಡ್ಯ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅಪಮಾನ ಉಂಟುಮಾಡುವ ಪದಗಳನ್ನು ಸರ್ಕಾರ ೨೦೧೦ರಲ್ಲಿ ನಿಷೇಧಿಸಿದೆ. ಪರ್ಯಾಯ ಪದಗಳನ್ನು ಬಳಸುವಂತೆ ಸೂಚಿಸಿದೆ. ಆದರೂ ನಿಷೇಧಿತ ಪದಗಳನ್ನು ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬಳಕೆ ಮಾಡುವ ಮೂಲಕ ಸರ್ಕಾರದ ಆದೇಶಕ್ಕೆ ಅಗೌರವ ತೋರುತ್ತಿದ್ದಾರೆ. ಇದು ಪುನರಾವರ್ತನೆಯಾದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.
ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಸಚಿವಾಲಯದ ಕೆಲವು ಅಧಿಸೂಚನೆಗಳು, ಕಂದಾಯ ಇಲಾಖೆಗಳ ಆರ್ಟಿಸಿ ವರದಿ, ಖಾತಾ ಪಟ್ಟಿ ಸೇರಿದಂತೆ ಮತ್ತಿತರ ದಾಖಲೆಗಳಲ್ಲಿ ನಿಷೇಧಿತ ಪದ ಬಳಕೆ ಮಾಡುವ ಮೂಲಕ ಅಪಮಾನ ಮಾಡಿರುವುದಲ್ಲದೇ ಸರ್ಕಾರದ ಆದೇಶ ಉಲ್ಲಂಘಿಸಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಖಂಡಿಸಿದರು.ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿನಾ ಕಾರಣ ಅನ್ಯ ವಿಷಯಗಳ ಬಗ್ಗೆ ಮೂಗು ತೂರಿಸುವುದು ಬಿಟ್ಟು, ತಮ್ಮ ಇಲಾಖೆಗಳಲ್ಲಿ ಆಗುತ್ತಿರುವ ಲೋಪದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿದರು.
ಮೈಸೂರು ವಿಭಾಗೀಯ ಸಂಚಾಲಕ ಅನಿಲ್ಕುಮಾರ, ಜಿಲ್ಲಾಧ್ಯಕ್ಷ ಬಿ.ಆನಂದ್, ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತಾ ಆನಂದ್, ಸುರೇಶ್, ಮುತ್ತುರಾಜ್, ತಮ್ಮಣ್ಣ, ಕುಮಾರ್, ಮೀನಾಕ್ಷಿ ಇತರರಿದ್ದರು.