ಎಸ್‌ಸಿ ಒಳ ಮೀಸಲಾತಿಗೆ ಡಿಎಸ್‌ಎಸ್ ತಮಟೆ ಚಳವಳಿ

KannadaprabhaNewsNetwork |  
Published : Sep 13, 2024, 01:35 AM IST

ಸಾರಾಂಶ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆಯಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ನೇತೃತ್ವದಲ್ಲಿ ತಮಟೆ ಚಳವಳಿ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಕ್ಕಿದೆಯೆಂಬ ಸುಪ್ರೀಂ ಕೋರ್ಟ್ ನ ಐತಿಹಾಸಿಕ ತೀರ್ಪಿನ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯವ್ಯಾಪಿ ಕರೆಯ ಮೇರೆಗೆ ನಗರದಲ್ಲಿ ಗುರುವಾರ ಡಿಎಸ್‌ಎಸ್ ಜಿಲ್ಲಾ ಘಟಕ ತಮಟೆ ಚಳವಳಿ ನಡೆಸಿತು.

ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ಇತರರ ನೇತೃತ್ವದಲ್ಲಿ ತಮಟೆ ಭಾರಿಸುತ್ತಾ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ನಂತರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕುಂದುವಾಡ ಮಂಜುನಾಥ, ಸರ್ವೋಚ್ಛ ನ್ಯಾಯಾಲಯದ 7 ನ್ಯಾಯಾಧೀಶರನ್ನು ಒಳಗೊಂಡ ಸಂವಿಧಾನ ಪೀಠವು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಅಧಿಕಾರ ಆಯಾ ರಾಜ್ಯ ಸರ್ಕಾರಕ್ಕೆ ಇದೆ ಎಂಬ ತೀರ್ಪು ನೀಡಿದ್ದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆ. ಈ ತೀರ್ಪನ್ನು ರಾಜ್ಯ ಸರ್ಕಾರ ತಕ್ಷಣ ಅನುಷ್ಠಾನಗೊಳಿಸಿ, ಒಳ ಮೀಸಲಾತಿ ನೀಡಬೇಕು. ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪಿನ ಮೂಲಕ ಪರಿಶಿಷ್ಟ ಜಾತಿಯ ಶೋಷಿತ ಸಮುದಾಯಗಳಲ್ಲಿ ಹೊಸ ಭರವಸೆ ಮೂಡಿಸಿದೆ ಎಂದರು.

30 ವರ್ಷಗಳಿಂದ ಡಿಎಎಸ್‌ಎಸ್ ಕೈಗೊಂಡ ನಿರಂತರ ಹೋರಾಟಕ್ಕೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಜಯ ಸಿಕ್ಕಂತಾಗಿದೆ. ಒಳ ಮೀಸಲಾತಿ ವ್ಯವಸ್ಥೆಯಲ್ಲಿ ಇದು ಅತ್ಯಂತ ಮುಖ್ಯ, ಮಹತ್ವದ ಹೆಜ್ಜೆಯೂ ಆಗಲಿದೆ. ಹಿಂದೆ ಇದೇ ವಿಚಾರದಲ್ಲಿ ಪರಸ್ಪರ ವಿರುದ್ಧ ತೀರ್ಪುಗಳನ್ನು ನ್ಯಾಯಾಲಯಗಳು ನೀಡಿದ್ದವು. ಈಗ ಸಿಜೆಐ ಡಿ.ವೈ.ಚಂದ್ರಚೂಡರ ನೇತೃತ್ವದ 7 ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಈ ವಿಚಾರದಲ್ಲಿದ್ದಂತಹ ಎಲ್ಲಾ ಗೊಂದಲ ಪರಿಹರಿಸಿದೆ ಎಂದು ಅವರು ಹೇಳಿದರು.

ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿದ್ದು, ಮೀಸಲಾತಿ ಸಮನಾಗಿ ಹಂಚಿಕೆಯಾಗಿಲ್ಲ. ಪರಿಶಿಷ್ಟರ ಮೀಸಲಾತಿಯನ್ನು 4 ಗುಂಪುಗಳ ವರ್ಗೀಕರಣಕ್ಕಾಗಿ 3 ದಶಕಗಳಿಂದ ನಿರಂತರ ಹೋರಾಟ ನಡೆಯುತ್ತಿತ್ತು. ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಿಸಿ, ಒಳ ಮೀಸಲಾತಿ ಕಲ್ಪಿಸುವಂತೆ ನಿರಂತರ ಹೋರಾಟ ನಮ್ಮದಾಗಿತ್ತು. ಸಂವಿಧಾನ ಪೀಠದ ತೀರ್ಪಿನಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡುವ ಸಂವಿಧಾನಬದ್ಧ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗೆ ಇದೆಯೆಂಬುದಾಗಿ ಸ್ಪಷ್ಟವಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಅನುಷ್ಟಾನಕ್ಕೆ ತರಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ದಾವಣಗೆರೆ ತಾಲೂಕು ಸಂಚಾಲಕ ಹನುಮಂತಪ್ಪ ಅಣಜಿ, ಹರಿಹರ ಸಂಚಾಲಕ ಪಿ.ಜೆ.ಮಹಾಂತೇಶ, ಜಿಲ್ಲಾ ಸಂಘಟನಾ ಸಂಚಾಲಕ ಹನುಮಂತಪ್ಪ ಬೇತೂರು, ತಾಲೂಕು ಸಂಘಟನಾ ಸಂಚಾಲಕರಾದ ನಾಗರಾಜ ಬಿ.ಚಿತ್ತಾನಹಳ್ಳಿ, ಮಹಿಳಾ ಸಂಚಾಲಕರಾದ ಕೆ.ವಿಜಯಲಕ್ಷ್ಮಿಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ