ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಎಲ್ಲೆಂದರಲ್ಲಿ ಕಸ ಎಸೆಯುವುದು ಇತ್ತೀಚಿನ ಬಹಳ ದೊಡ್ಡ ಸಮಸ್ಯೆ. ಕಾಡಿನ ರಸ್ತೆಯಲ್ಲಿ ಕಸವನ್ನು ಎಸೆಯಲು ಅವಿದ್ಯಾವಂತರು ಬರುವುದಿಲ್ಲ. ವಿದ್ಯಾವಂತರೇ ಇಂತಹ ಸಮಸ್ಯೆಗಳಿಗೆ ಕಾರಣ ಎಂದು ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅರಣ್ಯ ಇಲಾಖೆ ಮೂಡುಬಿದಿರೆ ವಲಯ, ಹೊಸಬೆಟ್ಟು ಗ್ರಾಮ ಪಂಚಾಯತ್, ತಾಕೊಡೆ, ಪುಚ್ಚಮೊಗರು ಗ್ರಾಮಸ್ಥರ ಸಹಭಾಗಿತ್ವದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪ್ರಜ್ಞಾವಂತರು ಎಸೆದಿರುವ ಕಸವನ್ನು ಪರಿಸರ ಪ್ರಜ್ಞೆ ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣಾ ತಂಡ, ಸ್ವಸಹಾಯ ಸಂಘಗಳ ಒಕ್ಕೂಟ, ಸ್ಥಳೀಯರೆಲ್ಲರೂ ಸೇರಿಕೊಂಡು ಸ್ವಚ್ಛ ಮಾಡಲು ನಿರ್ಧರಿಸಿರುವುದು ಉತ್ತಮ ಬೆಳವಣಿಗೆ. ಇಲ್ಲಿ ಮತ್ತೆ ತಪ್ಪು ಮರುಕಳಿಸದಂತೆ ನಿಟ್ಟಿನಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಬೇಕು. ಮೂಡುಬಿದಿರೆ ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದು ತಡೆಯಲು ಕಸ ಎಸೆದವರ ಭಾವಚಿತ್ರವನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಕೆಲಸ ಮಾಡಲಾಗುತ್ತಿದೆ. ಇದರಿಂದಾಗಿ ಕಸ ಎಸೆಯುವ ಸಮಸ್ಯೆ ಒಂದಿಷ್ಟು ಕಡಿಮೆ ಆಗಿದೆ ಇಂತಹ ಪ್ರಯತ್ನ ಎಲ್ಲೆಡೆ ಆಗಬೇಕು ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ , ಧರ್ಮಸ್ಥಳ ಮೂಡಬಿದರೆ ಯೋಜನಾಧಿಕಾರಿ ಸುನೀತಾ, ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ, ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ್, ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಅರಣ್ಯಾಧಿಕಾರಿ ಅಶ್ವಿತ್ ಗಟ್ಟಿ, ಮೇಲ್ವಿಚಾರಕರು, ಸ್ಥಳೀಯರಾದ ರಿಕ್ಕಿ, ಮೂಡುಬಿದಿರೆ ವಲಯದ ಒಕ್ಕೂಟದ ಪದಾಧಿಕಾರಿಗಳು,, ಸೇವಾಪ್ರತಿನಿಧಿಗಳು, ಮೇಲ್ವಿಚಾರಕರು ಹಾಜರಿದ್ದರು.