ಗದಗ/ಬೆಂಗಳೂರು: ಐತಿಹಾಸಿಕ ಲಕ್ಕುಂಡಿಯಲ್ಲಿ ಇರುವ ನೂರೊಂದು ಬಾವಿ, ನೂರೊಂದು ದೇವಾಲಯಗಳನ್ನು ಶೀಘ್ರದಲ್ಲಿಯೇ ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ ಎನ್ಐಎಎಸ್ ಸಂಸ್ಥೆ (ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ) ಸಹಕಾರದೊಂದಿಗೆ ಪತ್ತೆ ಹಚ್ಚಿ ದೇಶಕ್ಕೆ ಅನಾವರಣಗೊಳಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.
ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ(ಯುನೆಸ್ಕೋ) ಸೇರಿಸಲು ಪ್ರಸ್ತಾವನೆ ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಯುನೆಸ್ಕೋ ಪಟ್ಟಿಗೆ ಸೇರಿಸಲು 2024ರ ನವೆಂಬರ್ನಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಭಾಗ- 1ನ್ನು ನಡೆಸಿ 1500ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಅನ್ವೇಷಿಸಲಾಗಿದೆ. ಜತೆಗೆ 2026ರ ಮೇ 2ರಿಂದ ಪ್ರಾಚ್ಯಾವಶೇಷಗಳ ಅನ್ವೇಷಣೆ ಭಾಗ- 2 ನಡೆಸುತ್ತಿದ್ದು, ಈಗಾಗಲೇ ಎರಡನೇ ಹಂತದಲ್ಲಿ 1800ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ದೊರೆತಿವೆ. ಮೊದಲ ಹಂತ ಮತ್ತು ಎರಡನೇ ಹಂತದ ಪ್ರಾಚ್ಯಾವಶೇಷಗಳನ್ನು ಸೇರಿಸಿ ಜೂ. 30ರ ಒಳಗಾಗಿ ದಾಖಲೆಯ ರೀತಿಯ 5000ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಅನ್ವೇಷಿಸಿ ಅವುಗಳನ್ನು ಬಯಲು ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲು ಸಹ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.
ಲಕ್ಕುಂಡಿಯಲ್ಲಿರುವ ದೇವಸ್ಥಾನಗಳಿಗೆ ಹೊಸ ರೂಪ ನೀಡಲು ಈಗಾಗಲೇ ಫೆಬ್ರವರಿ ಮಾಹೆಯಲ್ಲಿ ಪಂಚ ದೇವಾಲಯ ಮತ್ತು ಪಂಚ ಬಾವಿಗಳ ಅನಾವರಣ ಕೈಗೊಂಡಿದ್ದು, ಮೇ 2ರಿಂದ ದಶಬಾವಿ, ದಶ ದೇವಾಲಯಗಳ ಅನಾವರಣ ಕಾರ್ಯವೂ ನಡೆಯುತ್ತಿದ್ದು, ₹10 ಕೋಟಿ ವೆಚ್ಚದಲ್ಲಿ 6 ಸ್ಮಾರಕಗಳನ್ನು ಸಂಪೂರ್ಣವಾಗಿ ಸಂರಕ್ಷಣೆ ಮಾಡಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. 2026- 27ನೇ ಸಾಲಿನ ಕ್ರಿಯಾಯೋಜನೆಯಲ್ಲಿ 10ಕ್ಕಿಂತ ಹೆಚ್ಚು ಸ್ಮಾರಕಗಳನ್ನು ಸಂರಕ್ಷಣೆ ಮಾಡಿ ಅಭಿವೃದ್ಧಿಗೊಳಿಸಲಾಗುವುದು. ಒಟ್ಟಾರೆಯಾಗಿ ಲಕ್ಕುಂಡಿಯನ್ನು ವಿಶ್ವಮಟ್ಟದಲ್ಲಿ ಗುರುತಿಸುವ ಕಾರ್ಯಕ್ಕೆ(ಯುನೆಸ್ಕೋ ಪಟ್ಟಿಗೆ ಸೇರಿಸಲು) ಮತ್ತಷ್ಟು ಉಪಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.ಇಸ್ರೋ ಮಾಜಿ ಅಧ್ಯಕ್ಷ ಡಾ. ಕಿರಣ ಕುಮಾರ್ ಮಾತನಾಡಿ, ಲಕ್ಕುಂಡಿ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾಗುವುದು ಅಗತ್ಯವಾಗಿದೆ. ಆ ದಿಸೆಯಲಿ ಪ್ರಯತ್ನ ಸ್ವಾಗತಾರ್ಹ. ಸ್ಯಾಟಲೈಟ್ ತಂತ್ರಜ್ಞಾನ ಬಳಸಿ ಲಕ್ಕುಂಡಿಯಲ್ಲಿರುವ 101 ಬಾವಿ ಹಾಗೂ 101 ದೇವಾಲಯಗಳನ್ನು ಅನಾವರಣಗೊಳಿಸುವ ಪ್ರಯತ್ನಕ್ಕೆ ಕೈಜೊಡಿಸುವುದಾಗಿ ತಿಳಿಸಿದರು.
ಸಭೆಯಲ್ಲಿ 2023ರಿಂದ ಇಲ್ಲಿಯವರೆಗೆ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಕುರಿತು ಪ್ರಾಧಿಕಾರದ ಆಯುಕ್ತ ಡಾ: ಶರಣು ಗೋಗೇರಿ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದರು. 101 ಬಾವಿ 101 ದೇವಾಲಯಗಳನ್ನು ಪತ್ತೆ ಹಚ್ಚುವಲ್ಲಿ ಸ್ಯಾಟಲೈಟ್ ತಂತ್ರಜ್ಞಾನದ ಬಳಕೆ ಕುರಿತು ಎನ್ಐಎಎಸ್ ಸಂಸ್ಥೆಯ ಪ್ರೊ. ಎಂ.ಬಿ. ರಜನಿ ಪ್ರಾತ್ಯಕ್ಷಿಕೆ ನೀಡಿದರು.ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಪ್ರವಾಸೋದ್ಯಮ ಇಲಾಖೆ ಆಯುಕ್ತ ಅಕ್ರಂ ಪಾಷಾ, ಇಸ್ರೋದ ವಿಜ್ಞಾನಿ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪ್ರೊ. ರಾಮನಗೌಡ ನಾಡಗೌಡರ, ಅ.ಧ. ಕಟ್ಟಿಮನಿ. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ ಡಾ. ಆರ್. ಶೇಜೇಶ್ವರ, ಸ್ಮಿತಾ ರೆಡ್ಡಿ ಸೇರಿದಂತೆ ಇಸ್ರೋ ಹಾಗೂ ಎನ್ಐಎಎಸ್ ಸಂಸ್ಥೆಯ ವಿಜ್ಞಾನಿಗಳು, ಸಂಶೋಧಕರು ಸೇರಿದಂತೆ ಮೊದಲಾದವರು ಇದ್ದರು.