ಸ್ವ ಉದ್ಯೋಗದಿಂದ ಆರ್ಥಿಕ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ: ಡಾ. ವೀರೇಂದ್ರ ಹೆಗ್ಗಡೆ

KannadaprabhaNewsNetwork | Published : Aug 23, 2024 1:02 AM

ಕೆನರಾ ಬ್ಯಾಂಕ್ ಮಂಗಳೂರು ವೃತ್ತದ ಮಹಾಪ್ರಬಂಧಕ ಸುಧಾಕರ ಕೊಠಾರಿ ಮಾತನಾಡಿ ಇಂದು ಮಹಿಳೆಯರು ಕೂಡಾ ಸ್ವಯಂ ಉದ್ಯೋಗದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಸ್ವ ಉದ್ಯೋಗದಿಂದ ಆರ್ಥಿಕ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಗುರುವಾರ ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ತರಬೇತಿ ಪಡೆದವರು ಸ್ಥಳೀಯ ಸಂಪನ್ಮೂಲ ಹಾಗೂ ಬೇಡಿಕೆಗಳಿಗೆ ಅನುಗುಣವಾಗಿ ಸ್ವ- ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸುವಂತೆ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರು ಸಕಾಲಿಕ ಮಾಹಿತಿ, ಮಾರ್ಗದರ್ಶನ ಮತ್ತು ಪ್ರೇರಣೆ ನೀಡಬೇಕು. ಯಾವುದೇ ಸಮಸ್ಯೆಗಳು, ಸವಾಲುಗಳು ಉಂಟಾದಾಗ ಅದನ್ನು ಪರಿಹರಿಸಲು ಸಹಕರಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಕೆನರಾ ಬ್ಯಾಂಕ್ ಪ್ರಧಾನ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ಶುಭಾಶಂಸನೆ ಮಾಡಿ, ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ಸಮಾಜದ ಆರ್ಥಿಕ ಪ್ರಗತಿಗೆ ರುಡ್‌ಸೆಟ್ ಸಂಸ್ಥೆಗಳ ಸೇವೆ, ಕೊಡುಗೆ ಅಮೂಲ್ಯವಾಗಿದೆ. ಬಡವರು ಮತ್ತು ಅವಕಾಶ ವಂಚಿತರು ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರ ಸೇವೆಯನ್ನು ಅವರು ಶ್ಲಾಘಿಸಿದರು.

ಕೆನರಾ ಬ್ಯಾಂಕ್‌ನ ಮುಖ್ಯ ಮಹಾಪ್ರಬಂಧಕ ಕೆ.ಜೆ. ಶ್ರೀಕಾಂತ್ ಮಾತನಾಡಿ, ಕೇಂದ್ರ ಸರ್ಕಾರವು ಆರ್ಥಿಕ ಪ್ರಗತಿಗೆ ಆದ್ಯತೆ ನೀಡುತ್ತಿದ್ದು ಬ್ಯಾಂಕ್‌ಗಳಲ್ಲಿ ಸಾಲ ಮಂಜೂರಾತಿಯನ್ನು ಸರಳಗೊಳಿಸಲಾಗಿದೆ. ಸ್ವಯಂ ಉದ್ಯೋಗ ಮಾಡುವವರು ವ್ಯಕ್ತಿತ್ವ ವಿಕಸನದೊಂದಿಗೆ ಉತ್ತಮ ಕೌಶಲವನ್ನೂ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೆನರಾ ಬ್ಯಾಂಕ್ ಮಂಗಳೂರು ವೃತ್ತದ ಮಹಾಪ್ರಬಂಧಕ ಸುಧಾಕರ ಕೊಠಾರಿ ಮಾತನಾಡಿ ಇಂದು ಮಹಿಳೆಯರು ಕೂಡಾ ಸ್ವಯಂ ಉದ್ಯೋಗದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿದರು.

ರುಡ್‌ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಸ್ವಾಗತಿಸಿದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ವಂದಿಸಿದರು. ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು.