ಶಿಕ್ಷಣ ಇಲಾಖೆ ಅಧಿಕಾರಿಗಳು ಒಬ್ಬೊಬ್ಬ ವಿದ್ಯಾರ್ಥಿಯನ್ನಾದರೂ ದಾಖಲಿಸಲು ಶ್ರಮಿಸಲಿ: ಮಧು ಬಂಗಾರಪ್ಪ

KannadaprabhaNewsNetwork |  
Published : Jun 17, 2025, 12:33 AM ISTUpdated : Jun 17, 2025, 12:34 AM IST
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳ ಜವಾಬ್ದಾರಿಗಳ ಕುರಿತು ತಿಳಿಸಿದರು. ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿ.ಪಂ.ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಇದ್ದರು.  | Kannada Prabha

ಸಾರಾಂಶ

ಶಿಕ್ಷಣ ಇಲಾಖೆಯಲ್ಲಿ 6 ಸಾವಿರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಯಿದ್ದು, ಒಬ್ಬೊಬ್ಬರು ಒಂದು ಮಗುವನ್ನು ಸರ್ಕಾರಿ ಶಾಲೆಗೆ ದಾಖಲಿಸಿದರೆ, ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಹೆಚ್ಚಳವಾಗುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಶಿಕ್ಷಣ ಇಲಾಖೆಯಲ್ಲಿ 6 ಸಾವಿರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಯಿದ್ದು, ಒಬ್ಬೊಬ್ಬರು ಒಂದು ಮಗುವನ್ನು ಸರ್ಕಾರಿ ಶಾಲೆಗೆ ದಾಖಲಿಸಿದರೆ, ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಹೆಚ್ಚಳವಾಗುತ್ತದೆ. ಈ ಕುರಿತು ಅಧಿಕಾರಿಗಳು ಒಮ್ಮೆ ಯೋಚಿಸಿ ನೋಡಿ. ಮಕ್ಕಳ ದಾಖಲಾತಿ ಕಡೆ ಗಮನ ನೀಡಿ, ಮುತುವರ್ಜಿ ವಹಿಸಿ ಕೆಲಸ ಮಾಡಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶವು ನಿಗದಿತ ಗುರಿ ತಲುಪಬೇಕೆನ್ನುವುದು ಮುಖ್ಯಮಂತ್ರಿಯವರ ಆಶಯವಾಗಿದೆ.

ಶಾಲಾ ದಾಖಲಾತಿ ಹಾಗೂ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಗೊಳಿಸುವ ದಿಸೆಯಲ್ಲಿ ನೀವು ಕೆಲಸ ಮಾಡಿ. ಇದೇ ಸರ್ಕಾರಕ್ಕೆ ನೀವು ನೀಡುವ ಬಹುದೊಡ್ಡ ಕೊಡುಗೆ ಎಂದರು.

ಅಧಿಕಾರಿಗಳು ಉತ್ತಮ ಫಲಿತಾಂಶಕ್ಕೆ ಈಗಿನಿಂದಲೇ ಕಾರ್ಯಯೋಜನೆ ರೂಪಿಸಬೇಕು. ಹಂತ-ಹಂತವಾಗಿ ಅದನ್ನು ಕಾರ್ಯರೂಪಕ್ಕೆ ತರಬೇಕು. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಅಡಿಪಾಯ ಹಾಕಿದಂತಾಗುತ್ತದೆ. ಕೊನೆಯ ಸಮಯದಲ್ಲಿ ಗೊಂದಲದಲ್ಲಿ ಅನುಷ್ಠಾನಗೊಳಿಸುವುದಲ್ಲ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಎಲ್ಲಾ ಶಾಲೆಗಳಿಗೂ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಿದೆ. ಇದರಿಂದ ಕಂಪ್ಯೂಟರ್ ಶಿಕ್ಷಣವೂ ಲಭಿಸುತ್ತಿದೆ. ಸಂಜೆಯ ವೇಳೆಯಲ್ಲಿ ವಿಶೇಷ ತರಗತಿ ನಡೆಸಲು ಅನುಕೂಲವಾಗುತ್ತಿದೆ. ಈ ಕುರಿತು ಸಾಕಷ್ಟು ಪ್ರಚಾರ ಮಾಡಬೇಕು. ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಹೊಂದಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮನೆಗೆ ಹೋಗಿ ಕರೆತರುವ ಕೆಲಸ ಮಾಡಬೇಕು. ಮುಖ್ಯವಾಗಿ ಉನ್ನತ ಅಧಿಕಾರಿಗಳು ಶಾಲೆ ಬಿಟ್ಟ ಮಕ್ಕಳ ಮನೆಗೆ ಭೇಟಿ ನೀಡಿ, ಅವರನ್ನು ತಮ್ಮ ಸರ್ಕಾರಿ ವಾಹನ(ಕಾರ್) ಮೂಲಕ ಕರೆತಂದರೆ ಆ ಮಗುವಿಗೆ ನಾನು ವಿದ್ಯಾಭ್ಯಾಸ ಪಡೆಯಬೇಕೆಂಬ ಹಂಬಲ ಹುಟ್ಟಿಕೊಳ್ಳುತ್ತದೆ. ನಂತರ ಕರೆತಂದ ಅಧಿಕಾರಿಯೂ ಸಹ ಆ ಮಗುವಿನ ಮೇಲೆ ಹೆಚ್ವಿನ ಕಾಳಜಿ ಕುರಿತು ವಿಚಾರಿಸ ತೊಡಗುತ್ತಾನೆ. ಇದರಿಂದ ಸುತ್ತ-ಮುತ್ತಲಿನ ಪೋಷಕರು ಸಹ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಮುಂದೆ ಬರುತ್ತಾರೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಜನರು ಗುಳೆ ಹೋಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿಯೇ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳ ಪ್ರಯೋಜನ ಅವರು ಪಡೆಯುವಂತರಾಗಬೇಕು. ಇದರಿಂದ ಆ ಕುಟುಂಬದ ಮಕ್ಕಳು ಸಹ ಶಾಲೆ ತಪ್ಪಿಸುವುದಿಲ್ಲ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್ ಶಂಕರ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಶೇ.94ರಷ್ಟು ಪಠ್ಯಪುಸ್ತಕ ಸರಬರಾಜು ಮಾಡಲಾಗಿದೆ. ಜಿಲ್ಲೆಯಲ್ಲಿ 8 ಸಾವಿರ (9 ಮತ್ತು 10 ನೇ ತರಗತಿ) ವಿದ್ಯಾರ್ಥಿಗಳು ಎನ್.ಎಸ್.ಕ್ಯೂ.ಎಫ್ ಐಟಿ ವಿಷಯ ಓದುತ್ತಿದ್ದಾರೆ ಎಂದು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 633 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಕಳೆದ ವರ್ಷ 362 ಶಾಲೆಗಳ ಆಸ್ತಿ ನೋಂದಣಿ ಮಾಡಲಾಗಿದೆ. ಅದರಲ್ಲಿ 265 ಶಾಲಾ ಆಸ್ತಿ ನೋಂದಣಿ ಬಾಕಿ ಇದ್ದು, ಇದಕ್ಕೆ ಡಿಡಿಪಿಐ ಮತ್ತು ಡಿಡಿಪಿಯು ಅಧಿಕಾರಿಗಳು ಹೊಣೆಗಾರಿಕೆ ಹೊಂದಬೇಕು. ಆಯಾ ವ್ಯಾಪ್ತಿಯ ತಹಶೀಲ್ದಾರ್ ಅವರ ಜೊತೆ ಸಹಭಾಗಿತ್ವ ಹೊಂದಿ ನೋಂದಣಿಗೆ ಆದ್ಯತೆ ವಿಷಯವಾಗಿ ಪರಿಗಣಿಸಲು ಸೂಚಿಸಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿಯವರ ನಿರ್ದೇಶನದಂತೆ, ಶಿಕ್ಷಣ ಇಲಾಖೆಯನ್ನು ಕೆಡಿಪಿ ಸಭೆಯಲ್ಲಿ ಮುಖ್ಯ ವಿಷಯವಾಗಿ ಚರ್ಚಿಸಬೇಕು. ಎಲ್ಲಾ ಮೂಲಭೂತ ಸೌಕರ್ಯಗಳಿಗೆ ಈ ಇಲಾಖೆಗೆ ಸಾಕಷ್ಟು ಅನುದಾನ ಸರ್ಕಾರ ನೀಡುತ್ತಿದೆ. ಜಿಲ್ಲೆಯಲ್ಲಿ ಸಾಕಷ್ಟು ಕಾರ್ಖಾನೆ ವಲಯಗಳಿದ್ದು, ಅವುಗಳಿಂದ ಬರುವ ಸಿಎಸ್‌ಆರ್ ಅನುದಾನವನ್ನು ಶಾಲೆಗಳ ಅಭಿವೃದ್ಧಿಗೆ ಬಳಸಬೇಕು. ಅವರಿಂದ ಯಾವುದೇ ರೀತಿಯಲ್ಲಾದರೂ ದಾನ ಪಡೆಯಬೇಕು ಎಂದು ಹೇಳಿದರು.

“ನನ್ನ ಶಾಲೆ-ನನ್ನ ಜವಾಬ್ದಾರಿ” ಕಾರ್ಯಕ್ರಮದಡಿ ಜಿಲ್ಲೆಯ 719 ಶಾಲೆಗಳಲ್ಲಿ ವಿವಿಧ ಶಾಲೆಗಳು ಸೇರಿ 718 ವಾಟ್ಸ್ ಆಪ್ ಗುಂಪುಗಳನ್ನು ರಚಿಸಲಾಗಿದೆ. ಅದೇರೀತಿಯಾಗಿ “ನಮ್ಮ ಶಾಲೆ- ನನ್ನ ಕೊಡುಗೆ” ಕಾರ್ಯಕ್ರಮದಡಿ ಜಿಲ್ಲೆಯ 719 ಶಾಲೆಗಳಲ್ಲಿ 206 ಶಾಲೆಗಳು ಕೊಡುಗೆ ಸ್ವೀಕೃತವಾಗಿವೆ ಎಂದು ಡಾ. ಆಕಾಶ್ ಶಂಕರ್ ಸಭೆಗೆ ತಿಳಿಸಿದರು.

ಇದಕ್ಕೆ ಸಚಿವರು ಪ್ರತಿಕ್ರಿಯಿಸಿ, ಈ ಹಿಂದೆ ಅದೇ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳಿಂದ ಶಾಲೆಗಳ ಅಭಿವೃದ್ಧಿಗೆ ದೇಣಿಗೆ ಹಾಗೂ ಕೊಡುಗೆ ಪಡೆಯಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲೆಯ ಶಾಲೆಗಳ ಅಭಿವೃದ್ಧಿ ಕಾಮಗಾರಿ ಮತ್ತು ದುರಸ್ತಿ ಕಟ್ಟಡ ಕಾಮಗಾರಿ, ವಿವಿಧ ಅನುದಾನ ಬಳಕೆಯ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಎಡಿಸಿ ಮಹಮ್ಮದ್ ಝುಬೇರ್, ಡಿಡಿಪಿಐ ಬಿ.ಉಮಾದೇವಿ, ಡಿಡಿಪಿಯು ಟಿ.ಪಾಲಾಕ್ಷಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಪನಿರ್ದೇಕಿ ಲಕ್ಷ್ಮಿಕಿರಣ್ ಸೇರಿದಂತೆ ಜಿಲ್ಲೆಯ ಎಲ್ಲಾ ಬಿಇಓ ಅಧಿಕಾರಿಗಳು, ಸಿಆರ್‌ಪಿ, ಬಿಆರ್‌ಪಿ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ