ಕನ್ನಡಪ್ರಭ ವಾರ್ತೆ ಕುಶಾಲನಗರ
ಶಿಕ್ಷಣವು ಮನುಷ್ಯನ ವ್ಯಕ್ತಿತ್ವದ ವಿಕಸನಕ್ಕೆ ಭದ್ರ ಬುನಾದಿ ಅಗಿದೆ ಎಂದು ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡಮಿ ಸದಸ್ಯ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಹೇಳಿದರು.ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾಲೇಜು ವಾರ್ಷಿಕೋತ್ಸವ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ಹಾಗೂ ಸಮಾನ ಶಿಕ್ಷಣ ದೊರೆಯಬೇಕು ಎಂಬುದನ್ನು ಅಳವಡಿಸಿದರು. ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂದು ಹೋರಾಟ ನಡೆಸಿದರು. ಈ ಮಹನೀಯರ ಹೋರಾಟದ ಫಲದಿಂದ ಪ್ರಸಕ್ತ ದಿನಗಳಲ್ಲಿ ಮಹಿಳೆಯರು ಸಬಲೀಕರಣ ಹೊಂದಲು ಸಾಧ್ಯವಾಗಿದೆ. ಎಲ್ಲ ರಂಗಗಳಲ್ಲೂ ಮಹಿಳೆ ದಿಟ್ಟತನದಿಂದ ಮುಂದೆ ಹೋಗಲು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಭಾವನೆಗಳನ್ನು ರೂಪಿಸಿಕೊಳ್ಳಬೇಕು:
ಈಗಿನ ದಿನಗಳಲ್ಲಿ ಎರಡು ರೀತಿಯ ಶಿಕ್ಷಣ ವ್ಯವಸ್ಥೆ ಇದ್ದು, ಪಠ್ಯ ಕೇಂದ್ರೀಕೃತ ಶಿಕ್ಷಣ ಹಾಗೂ ಸಾಮಾಜಿಕ ಸಾಂಸ್ಕೃತಿಕ ಶಿಕ್ಷಣ ಲಭ್ಯವಿದೆ. ವಿದ್ಯಾರ್ಥಿ ಈ ಎರಡನ್ನು ರೂಢಿಸಿಕೊಳ್ಳಬೇಕು. ಕೇವಲ ಬುದ್ದಿ ಬೆಳೆಸಿಕೊಳ್ಳುವುದು ಮುಖ್ಯವಲ್ಲ ಜೊತೆಗೆ ಭಾವನೆಗಳನ್ನು ರೂಪಿಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಪ್ರಬುದ್ಧನಾಗಿ ಬೆಳೆಯಲು ಸಾಧ್ಯ ಎಂದರು.ಕಾಲೇಜಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಮನೋವಿಕಾಸಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಾಜೇಗೌಡ ಮಾತನಾಡಿ, ಮುಂದಿನ ಶೈಕ್ಷಣಿಕ ಸಾಲಿನಿಂದ ಕಾಲೇಜಿನಲ್ಲಿ ವಿಜ್ಞಾನ ಪದವಿ ಕೋರ್ಸ್ ಆರಂಭಿಸಬೇಕು ಎಂಬ ಬೇಡಿಕೆಯನ್ನು ಶಾಸಕ ಮಂತರ್ ಗೌಡ ಅವರಿಗೆ ಮನವಿ ಮಾಡಲಾಗಿದೆ.ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದ್ದಾರೆ.
ಕ್ರೀಡಾ ಚಟುವಟಿಕೆಗಳಲ್ಲು ಮುಂದೆ ಬರಬೇಕು:ಬಿಎಸ್ಸಿ ಕೋರ್ಸ್ ಆರಂಭವಾದರೆ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳಿಗೆ ತುಂಬ ಅನುಕೂಲವಾಗಲಿದೆ. ದೂರದ ನಗರ ಪ್ರದೇಶಗಳಿಗೆ ಹೋಗುವುದು ಹಾಗೂ ಆರ್ಥಿಕ ಹೊರೆ ಕೂಡ ಕಡಿಮೆಯಾಗಲಿದೆ ಎಂದರು. ಕಾಲೇಜಿನಲ್ಲಿರುವ ಕಂಪ್ಯೂಟರ್ ವಿಭಾಗ ಇದೆ. ಈ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಕಂಪ್ಯೂಟರ್ ಜ್ಞಾನ ಬೆಳೆಸಿಕೊಳ್ಳಬೇಕು. ಅದೇ ರೀತಿ ಕ್ರೀಡಾ ಚಟುವಟಿಕೆಗಳಲ್ಲು ಮುಂದೆ ಬರಬೇಕು ಎಂದು ಸಲಹೆ ನೀಡಿದರು.
ಕಾಲೇಜು ಸುತ್ತಲೂ ತಡೆಗೋಡೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.ನಿವೃತ್ತ ಪ್ರಾಂಶುಪಾಲ ಬಿ.ಎಂ.ಪ್ರವೀಣ್ ಕುಮಾರ್ ಮಾತನಾಡಿ, ಜಿಲ್ಲೆಯ ಪ್ರತಿಷ್ಠಿತ ಸರ್ಕಾರಿ ಕಾಲೇಜು ಆದ ಕುಶಾಲನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದು, ತುಂಬ ಸಂತಸ ತಂದಿದೆ. ಮಾರ್ಚ್ ನಲ್ಲಿ ನಿವೃತ್ತಿಯಾಗಿದ್ದೇನೆ. ಈ ಕಾಲೇಜಿನಲ್ಲಿ ಉತ್ತಮ ಫಲಿತಾಂಶ ಬಂದಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿ ಸಂಚಾಲಕ ಪ್ರೊ. ರಮೇಶ್ಚಂದ್ರ ಅವರು ಕಾಲೇಜು ವರದಿ ವಾಚಿಸಿದರು.ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸುಷ್ಮ ಕೃಷ್ಣ, ಬಿ.ಕೆ.ಚೇತನ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಟಿ.ಎಂ.ಸುಧಾಕರ್, ಎನ್.ಎಸ್.ಎಸ್ ಅಧಿಕಾರಿ ಡಾ.ಬಿ.ಕೆ.ಕುಮಾರ್, ಕ್ರೀಡಾ ವಿಭಾಗದ ಸಂಚಾಲಕರಾದ ಜಯಂತಿ, ಕೆ.ಟಿ.ಕುಸುಮಾ,
ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಸುನೀಲ್ ಕುಮಾರ್, ಡಾ.ರಶ್ಮಿ,, ಕಚೇರಿ ಅಧೀಕ್ಷಕರು ಮೋಹನ್ ಕುಮಾರ್ ಇದ್ದರು.ಇದೇ ಸಂದರ್ಭ ವಿವಿಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು .
ಉಪನ್ಯಾಸಕಿ ಕೆ.ಆರ್.ವಂದನಾ ಸ್ವಾಗತಿಸಿದರು. ಉಪನ್ಯಾಸಕಿ ಕುಸುಮಾ ನಿರೂಪಿಸಿದರು. ಅರ್ಪಿತಾ ಮತ್ತು ತಂಡದವರು ನಾಡಗೀತೆ ಹಾಡಿದರು.ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.