ಕನ್ನಡಪ್ರಭ ವಾರ್ತೆ ತುಮಕೂರು
ನಗರದಲ್ಲಿ ಶನಿವಾರ ನಡೆದ ಆರ್.ಎಂ.ಆರ್ ಹಳ್ಳಿಕಾರ ಫೌಂಡೇಷನ್ ಟ್ರಸ್ಟ್ ನಿಂದ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಹಳ್ಳಿಕಾರ್ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಆರ್.ಎಂ.ಆರ್ ಹಳ್ಳಿಕಾರ್ ಫೌಂಡೇಷನ್ ಟ್ರಸ್ಟ್ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ವಿಚಾರ ಎಂದರು.
ಹಳ್ಳಿಕಾರ್ ಸಮುದಾಯದವರು ಸ್ವಾಭಿಮಾನಿಗಳು, ಶ್ರಮಜೀವಿಗಳು. ಯಾರ ಮುಂದೆಯೂ ಕೈ ಚಾಚುವುದಿಲ್ಲ, ತಮ್ಮಲ್ಲಿರುವುದನ್ನು ಕಷ್ಟದಲ್ಲಿರುವವರಿಗೆ ಕೊಟ್ಟು ಸಹಾಯ ಮಾಡುವಂತಹ ಗುಣ ಉಳ್ಳವರು. ಟ್ರಸ್ಟ್ ನ ಅಧ್ಯಕ್ಷ ಕೆ.ಎಂ.ನಾಗರಾಜು ಅವರು ಸಮಾಜ ಸೇವಾಕಾರ್ಯಗಳಲ್ಲಿ ತೊಡಗಿಕೊಂಡು ಅಶಕ್ತರಿಗೆ ನೆರವಾಗುತ್ತಾ ಬಂದಿದ್ದಾರೆ. ಈಗ ಸಮುದಾಯದ ವಿದ್ಯಾರ್ಥಿಗಳಿಗೆ ಕೋಟ್ಯಾಂತರ ರು.ಗಳ ವಿದ್ಯಾರ್ಥಿವೇತನ ನೀಡುತ್ತಾ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸಹಾಯ ಮಾಡುತ್ತಾ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಮಕ್ಕಳು ಈ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆದು, ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆದರೆ ಇವರಿಗೂ ಸಂತಸವಾಗುತ್ತದೆ ಎಂದರು.ಹಳ್ಳಿಕಾರ್ ಸಮಾಜದಿಂದ ಶಿಕ್ಷಣ ಸಂಸ್ಥೆ, ವಿದ್ಯಾರ್ಥಿ ನಿಲಯ, ಸಮುದಾಯ ಭವನ ನಿರ್ಮಾಣಕ್ಕೆ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಹಿರಿಯೂರು, ಚಳ್ಳಕೆರೆಯಲ್ಲಿ ಮೂರು ಎಕರೆ ಜಮೀನು ನೀಡಬೇಕು ಎಂದು ಕೋರಿದ್ದಾರೆ. ಖಂಡಿತ ಜಮೀನು ಕೊಟ್ಟು ಕಟ್ಟಡಗಳ ನಿರ್ಮಾಣಕ್ಕೆ ಅನುದಾನವನ್ನೂ ನೀಡುವುದಾಗಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.
ಮಾಜಿ ಸಚಿವ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ರಾಜಕೀಯ ಅಧಿಕಾರ ಪಡೆಯುವ ಅವಕಾಶ ಬಂದರೂ ಕೆ.ಎಂ.ನಾಗರಾಜು ಅವರು ತಿರಸ್ಕಾರ ಮಾಡಿ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಅನೇಕ ನಾಯಕರನ್ನು ತಯಾರು ಮಾಡಿರುವ ಇವರು ರಾಜಕೀಯ ಅಧಿಕಾರದಿಂದ ಹೊರಗುಳಿದಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡುವುದನ್ನು ತಮ್ಮ ಸೇವೆಯ ಆದ್ಯತೆ ಮಾಡಿಕೊಂಡಿರುವುದು ಅಭಿನಂದನೀಯ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಕೆ.ಎಂ.ನಾಗರಾಜು ಮಾತನಾಡಿ, ವಿದ್ಯೆಯನ್ನು ಶ್ರದ್ಧೆ, ಆಸಕ್ತಿಯಿಂದ ಕಲಿತು ತಮ್ಮ ಕುಟುಂಬ, ಮನೆತನದ ಗೌರವವನ್ನು ಎತ್ತಿಹಿಡಿಯಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಅಗತ್ಯವಿದ್ದವರಿಗೆ ಟ್ರಸ್ಟ್ನಿಂದ ವ್ಯವಸ್ಥೆ ಮಾಡುತ್ತೇವೆ. ಹಿಂದುಳಿದ ವರ್ಗದವರಿಗೆ ಅವಕಾಶಗಳು ಕಮ್ಮಿ ಇದ್ದಾಗ ದೇವರಾಜ ಅರಸು, ನಂತರ ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ವರ್ಗದವರಿಗೆ ಶಕ್ತಿ ತುಂಬುವ ಪ್ರಯತ್ನ ಮಾಡಿದರು ಎಂದು ಹೇಳಿದರು.