ಭಾವನಾತ್ಮ ಸಂಬಂಧ ಗಟ್ಟಿಗೊಳಿಸುವ ಶಿಕ್ಷಣ ಅಗತ್ಯವಿದೆ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ

KannadaprabhaNewsNetwork |  
Published : Jul 15, 2025, 11:45 PM IST
೧೫ ಟಿವಿಕೆ ೩ - ತುರುವೇಕೆರೆ ಪಟ್ಟಣದ ಮೂಲೇಶಂಕರೇಶ್ವರ ದೇವಾಲಯದ ಆವರಣದಲ್ಲಿ ವಿದ್ಯಾ ಶಂಕರ ಕೌಶಲ ತರಬೇತಿ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರವನ್ನು ತುಮಕೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸಿದರು | Kannada Prabha

ಸಾರಾಂಶ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಪಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ತಾಲೂಕು ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದೆ. ಇಲಾಖೆಯೊಂದಿಗೆ ಸಮುದಾಯ ಕೈ ಜೋಡಿಸಿದರೆ ಇನ್ನೂ ಹೆಚ್ಚಿನ ಸಾಧನೆ ಮಾಡಬಹುದು.

ಕನ್ನಡಪ್ರಭ ವಾರ್ತೆ ತುರುವೇಕೆರೆ

ಭಾರತ ಬುದ್ದಿವಂತಿಕೆ ಹಾಗೂ ಕೌಶಲ್ಯದಲ್ಲಿ ಪಾರಮ್ಯ ಮೆರೆದಿದೆ. ಇದರೊಂದಿಗೆ ಮಾನವೀಯ ನೆಲೆಯಲ್ಲಿ ಭಾವನಾತ್ಮಕ ಸಂಬಂಧಗಳನ್ನು ಗಟ್ಟಿಗೊಳಿಸುವ ಶಿಕ್ಷಣ ಇಂದಿನ ತುರ್ತು ಅಗತ್ಯವಾಗಿದೆ ಎಂದು ತುಮಕೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಪಟ್ಟಣದ ಮೂಲೆಶಂಕರೇಶ್ವರ ದೇವಾಲಯದ ಆವರಣದಲ್ಲಿ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಮೂಲೆ ಶಂಕರೇಶ್ವರ ದೇವಾಲಯ ಸಮಿತಿ, ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ವಿದ್ಯಾ ಶಂಕರ ಕೌಶಲ್ಯ ತರಬೇತಿ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬುದ್ದಿವಂತಿಕೆ ಹಾಗೂ ಕೌಶಲ್ಯಗಳು ಸಮುದಾಯದ ಹಿತಕ್ಕಿಂತ ಸ್ವಾರ್ಥ ಸಾಧನೆಗೆ ಬಳಕೆಯಾಗುವುದೇ ಹೆಚ್ಚಾಗಿದೆ. ಅವುಗಳ ಹರಿವು ಮತ್ತು ಉಪಯೋಗ ವ್ಯಾವಹಾರಿಕ ಉದ್ದೇಶಗಳಿಗೆ ಮೀಸಲಾಗುತ್ತಿದೆ. ಶಿಕ್ಷಣ ಕೇವಲ ಇಂತಹ ಅಡ್ಡದಾರಿಯ ಕೌಶಲ್ಯಗಳನ್ನು ಕಲಿಸುವ ಕಾರ್ಯಾಗಾರ ಎನಿಸಬಾರದು. ಶಿಕ್ಷಣ ವ್ಯಕ್ತಿಯೊಬ್ಬನ ಸಮಗ್ರ ವ್ಯಕ್ತಿತ್ವವನ್ನು ರೂಪಿಸುವ, ಜ್ಞಾನದ ಅನಂತ ಶಾಖೆಗಳನ್ನು ಶೋಧಿಸುವ, ಅನುಸಂಧಾನದ ನಿರಂತರ ಪ್ರಕ್ರಿಯೆಯಾಗಬೇಕು. ಅದಕ್ಕೆ ಪ್ರತಿಯೊಬ್ಬ ಶಿಕ್ಷಕನೂ ಶತಶತಮಾನಗಳ ದೂರದೃಷ್ಟಿಯುಳ್ಳ ಪ್ರವಾದಿಯಾಗಬೇಕು ಎಂದರು.

ಶಿಕ್ಷಣ ವ್ಯವಸ್ಥೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಸರ್ಕಾರಗಳ ಪಾಲಿಗೆ ಶಿಕ್ಷಣ ಇಲಾಖೆ ಒಂದು ಅನುತ್ಪಾದಕ ಕ್ಷೇತ್ರ ಎನಿಸಿರುವುದು ದುರಂತ. ಪ್ರಜೆಗಳನ್ನು ಪ್ರಜ್ಞಾವಂತರನ್ನಾಗಿ ಮಾಡುವ ಶಿಕ್ಷಣಕ್ಕೆ ಸಿಗಬೇಕಾದ ಪ್ರಾಮುಖ್ಯ ಸಿಗುತ್ತಿಲ್ಲ. ಇಂತಹ ಹೊತ್ತಿನಲ್ಲಿ ದೂರದ ಅಮೇರಿಕಾದಿಂದ ಬಂದ ಗುರುರಾಜ್, ಬಾಲಕೃಷ್ಣ ಸಹೋದರರು ಶಿಕ್ಷಣದ ಕಾಯಕಲ್ಪಕ್ಕೆ ಕೈಜೋಡಿಸಿರುವುದು ಅನುಕರಣೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಆರ್.ಎ.ಚೇತನ್ ರಾಮ್ ಮಾತನಾಡಿ, ವಿದ್ಯಾರ್ಥಿಗಳು ಸವಾಲನ್ನು ಎದುರಿಸಲು ಮಾನಸಿಕವಾಗಿ ಸಿದ್ಧರಾಗಿದ್ದರೆ, ತಮ್ಮ ಕರ್ತವ್ಯಕ್ಕೆ ಬದ್ಧರಾಗಿದ್ದರೆ ಅವರು ಬುದ್ಧನಂತೆ ಜ್ಞಾನದ ಸಾಕ್ಷಾತ್ಕಾರ ಮಾಡಿಕೊಳ್ಳಬಹುದು. ಜ್ಞಾನ, ಕೌಶಲ್ಯ, ಮನೋಭಾವದಲ್ಲಿ ಬದಲಾವಣೆಯಾದರೆ ತಾನಾಗೇ ಪರಿಸರ ಬದಲಾವಣೆ ಆಗುತ್ತದೆ. ವ್ಯಕ್ತಿಯ ವ್ಯಕ್ತಿತ್ವ ಹಿರಿದಾಗಿ ಬೆಳೆದರೆ ಯಾವುದೇ ಸಮಸ್ಯೆ ಅದರ ಮುಂದೆ ನಗಣ್ಯವಾಗುತ್ತದೆ ಎಂದು ಹಲವು ನಿದರ್ಶನಗಳನ್ನು ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಪಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ತಾಲೂಕು ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದೆ. ಇಲಾಖೆಯೊಂದಿಗೆ ಸಮುದಾಯ ಕೈ ಜೋಡಿಸಿದರೆ ಇನ್ನೂ ಹೆಚ್ಚಿನ ಸಾಧನೆ ಮಾಡಬಹುದು ಎಂದರು.

ವಾಸವಿ ಸತೀಶ್ ಪ್ರಾರ್ಥಿಸಿದರು. ಗುರುರಾಜ್ ಸ್ವಾಗತಿಸಿದರು. ಬಾಲಕೃಷ್ಣ ವಂದಿಸಿದರು. ಆನಂದರಾಜ್ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದ ನಂತರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳಲ್ಲಿ ಕೌಶಲ್ಯ ತರಬೇತಿ ತರಗತಿಗಳನ್ನು ಹಮ್ಮಿಕೊಳ್ಳಲಾಗಿತ್ತು.

PREV

Latest Stories

ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ
ಶಾಲೆಯಲ್ಲಿನ ಕಲುಷಿತ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥ
ರಾಷ್ಟ್ರೀಯ ಲೋಕ ಅದಾಲತ್: 58.67 ಲಕ್ಷ ಕೇಸ್ ಇತ್ಯರ್ಥ