ಬೆಂಗಳೂರು : ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿಯಾಗಿದ್ದು, ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ಖಾನ್ ಹೇಳಿದರು.
ಸೋಮವಾರ ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ದೊಡ್ಡದು. ನಾನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವನಾದ ನಂತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ. ರಾಜ್ಯ ಸರ್ಕಾರ ಬಜೆಟ್ನಲ್ಲಿ ₹1488 ಕೋಟಿ ಶಿಕ್ಷಣಕ್ಕೆ ಮೀಸಲಿಟ್ಟಿದೆ ಎಂದರು.
ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಶಿಕ್ಷಣದ ಮೂರು ಹಂತಗಳಾಗಿದ್ದು, ಉತ್ತಮ ಅಂಕದೊಂದಿಗೆ ದಾಟಿದರೆ ನಿಮಗೆ ಉತ್ತಮ ಭವಿಷ್ಯ ಸಿಗಲಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆ ಮತ್ತು ಕಾಲೇಜುಗಳಲ್ಲಿ ಗುಣಮಟ್ಟ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಬೋಧಕ ವರ್ಗ ಗಮನ ಹರಿಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳನ್ನು ಮಕ್ಕಳಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಕೆಎಂಡಿಸಿಯ 2024-25ನೇ ಸಾಲಿನ ಮೂರು ಹೊಸ ಯೋಜನೆಗಳಿಗೆ ಚಾಲನೆ ನೀಡಿದ ಸಚಿವರು ಕೈಪಿಡಿ ಬಿಡುಗಡೆ ಮಾಡಿದರು. ಅರಿವು ಶಿಕ್ಷಣ ಯೋಜನೆಯಡಿಯಲ್ಲಿ ಪರೀಕ್ಷಾ ಪ್ರಾಧಿಕಾರದ ಜತೆ ಒಪ್ಪಂದಕ್ಕೆ ಸಹಿ ಹಾಕಿ ₹12 ಕೋಟಿ ಚೆಕ್ ಹಸ್ತಾಂತರ ಮಾಡಿದರು.
ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಉರ್ದು ಅಕಾಡೆಮಿ ಅಧ್ಯಕ್ಷ ಮೊಹಮದ್ ಅಲಿ ಖಾಜಿ, ಕೆಎಂಡಿಸಿ ಅಧ್ಯಕ್ಷ ಬಿ.ಕೆ.ಅಲ್ತಾಫ್ ಖಾನ್, ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.
36 ವಿದ್ಯಾರ್ಥಿಗಳಿಗೆ ದ್ವಿ ಚಕ್ರ ವಾಹನ
ಪ್ರತಿಭಾ ಪುರಸ್ಕಾರ ಪಡೆದ 54 ವಿದ್ಯಾರ್ಥಿಗಳ ಪೈಕಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇಕಡ 96ಕ್ಕಿಂತ ಹೆಚ್ಚು ಅಂಕ ಪಡೆದ 36 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ದ್ವಿಚಕ್ರ ವಾಹನ ನೀಡಲಾಗುವುದು. ಅಲ್ಪಸಂಖ್ಯಾತ ನಿರ್ದೇಶನಾಲಯ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.98 ಅಂಕ ಪಡೆಯುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಉನ್ನತ ವ್ಯಾಸಂಗದ ಸಂಪೂರ್ಣ ವೆಚ್ಚ ಭರಿಸುವುದಾಗಿ ಸಚಿವ ಜಮೀರ್ ಅಹಮದ್ ಖಾನ್ ಘೋಷಿಸಿದರು.
ನಗರದಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹಮದ್ಖಾನ್ ಅವರು ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.