ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಕರ್ನಾಟಕ ಸಂಘದ ಕೆವಿಎಸ್ ಭವನದಲ್ಲಿ ನಂಜಮ್ಮ ಮೋಟೇಗೌಡ ಚಾರಿಟಬಲ್ ಅಂಡ್ ಎಜುಕೇಷನ್ ಟ್ರಸ್ಟ್(ಕೊಪ್ಪ) ವತಿಯಿಂದ ನಡೆದ ನಿತ್ಯ ಸಚಿವ ಕೆ.ವಿ.ಶಂಕರಗೌಡ ಶಿಕ್ಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಸ್ವಾತಂತ್ರ್ಯ ನಂತರ ಶೈಕ್ಷಣಿಕ ಚಳವಳಿಯಲ್ಲಿ ಸರ್ಕಾರದ ಜೊತೆ ಜೊತೆಗೆ ಈ ರಾಜ್ಯದಲ್ಲಿ ನೂರಾರು ಶಿಕ್ಷಣ ಸಂಸ್ಥೆಗಳು ತಮ್ಮ ಕಟಿಬದ್ಧತೆಯನ್ನು ಪ್ರದರ್ಶನ ಮಾಡಿವೆ. ಶಿಕ್ಷಣ ಸಂಸ್ಥೆಗಳು ಇಲ್ಲದ್ದರೆ ಸಾಕ್ಷರತೆ ಪ್ರಮಾಣ ಹೆಚ್ಚಳವಾಗುತ್ತಿರಲಿಲ್ಲ. ಸರ್ಕಾರ ಒಂದರಿಂದಲೇ ಶೈಕ್ಷಣಿಕ ಚಳವಳಿಯನ್ನು ಸಮರ್ಥವಾಗಿ ರೂಪಿಸಲು ಸಹ ಸಾಧ್ಯವಾಗುತ್ತಿರಲಿಲ್ಲ ಎಂದು ಪ್ರತಿಪಾದಿಸಿದರು.ದಿ.ಕೆ.ವಿ.ಶಂಕರಗೌಡರು ಪ್ರಾರಂಭ ಮಾಡಿದ ಜನತಾ ಶಿಕ್ಷಣ ಸಂಸ್ಥೆಯು ಸೇರಿದ ಹಾಗೆ ಎಲ್ಲಾ ತಾಲೂಕಿನಲ್ಲಿ ಮತ್ತು ಗ್ರಾಮೀಣ ಪ್ರದೇಶ ಸೇರಿದಂತೆ ಮಂಡ್ಯ ಜಿಲ್ಲೆಯಲ್ಲಿ ನೂರಾರು ಶಿಕ್ಷಣ ಸಂಸ್ಥೆಗಳು ಹುಟ್ಟಿ ಅಕ್ಷರ ದಾಸೋಹ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿವೆ ಎಂದರು.
ಟ್ರಸ್ಟ್ ಅಧ್ಯಕ್ಷ ಕೆ.ಟಿ.ಹನುಮಂತು ಮಾತನಾಡಿ, ಕೆ.ವಿ.ಶಂಕರಗೌಡ ಅವರು ನಮ್ಮನ್ನಗಲಿ 36 ವರ್ಷಗಳು ಕಳೆದಿವೆ. ಆದರೂ ಅವರನ್ನು ಇನ್ನೂ ನೆನಪಿಸಿಕೊಳ್ಳುತ್ತಿದ್ದಾರೆ ಎಂದರೆ ಅವರ ಕಾರ್ಯವೈಖರಿ ಜನಸೇವೆ ಹೇಗಿತ್ತು ಎನ್ನುವುದನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕು. ಹಾಗಾಗಿ ಅವರ ಹೆಸರಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ನಿತ್ಯ ಸಚಿವ ಕೆ.ವಿ.ಶಂಕರಗೌಡ ಶಿಕ್ಷಣ ಪ್ರಶಸ್ತಿಯನ್ನು ಮಹದೇವಪುರ ಆನಂದ ಶಿಕ್ಷಣ ಸಂಸ್ಥೆ ಪರ ಸ್ವೀಕರಿಸಿದ ಅಧ್ಯಕ್ಷ ಗಿಣಿಸ್ವಾಮಿ, ಈ ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್ ನಮ್ಮ ಶಿಕ್ಷಣ ಸಂಸ್ಥೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸುತ್ತಿರುವುದಕ್ಕೆ ಧನ್ಯವಾದ ಹೇಳಿದರು.
ಸಮಾರಂಭದಲ್ಲಿ ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಸಂಘದ ಕಾರ್ಯದರ್ಶಿ ಲೋಕೇಶ್ ಚಂದಗಾಲು, ಲಯನ್ಸ್ ಸಂಸ್ಥೆ ನಾಗರಾಜು ವಿ.ಭೈರಿ, ಆನಂದ ಶಿಕ್ಷಣ ಸಂಸ್ಥೆ ಖಜಾಂಚಿ ಎಂ.ಪಿ.ಸ್ವಾಮಿಗೌಡ ಭಾಗವಹಿಸಿದ್ದರು.