ಶಿಕ್ಷಣ ಸಂಸ್ಥೆಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲಿ

KannadaprabhaNewsNetwork |  
Published : Feb 28, 2026, 03:00 AM IST
ಆರ್‌ಸಿಯುನಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಪ್ರೊ. ರಾಜೀವ ಭಾರ್ಗವ ಉದ್ಘಾಟಿಸಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಒಳನೋಟಗಳು, ನೈತಿಕ ತತ್ವಗಳು ಮತ್ತು ದೃಷ್ಟಿಕೋನಗಳು ದೇಶದ ಸಾರ್ವಜನಿಕ ಜೀವನವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದವು. ಅವರ ಸ್ಪಷ್ಟ ಚಿಂತನೆಯ ಮೂಲಕ ಶಿಕ್ಷಣವನ್ನು ಮುಖ್ಯವಾಹಿನಿಗೆ ತಂದು, ಸಾಮಾಜಿಕ ಪಿಡುಗಾದ ಜಾತಿ ತಾರತಮ್ಯವನ್ನು ಹೋಗಲಾಡಿಸಲು ಜವಾಬ್ದಾರಿಯಿಂದ ಶ್ರಮಿಸಿದರು ಎಂದು ಖ್ಯಾತ ಚಿಂತಕ ಪ್ರೊ.ರಾಜೀವ ಭಾರ್ಗವ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಡಾ.ಬಿ.ಆರ್ ಅಂಬೇಡ್ಕರ್ ಅವರ ಒಳನೋಟಗಳು, ನೈತಿಕ ತತ್ವಗಳು ಮತ್ತು ದೃಷ್ಟಿಕೋನಗಳು ದೇಶದ ಸಾರ್ವಜನಿಕ ಜೀವನವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದವು. ಅವರ ಸ್ಪಷ್ಟ ಚಿಂತನೆಯ ಮೂಲಕ ಶಿಕ್ಷಣವನ್ನು ಮುಖ್ಯವಾಹಿನಿಗೆ ತಂದು, ಸಾಮಾಜಿಕ ಪಿಡುಗಾದ ಜಾತಿ ತಾರತಮ್ಯವನ್ನು ಹೋಗಲಾಡಿಸಲು ಜವಾಬ್ದಾರಿಯಿಂದ ಶ್ರಮಿಸಿದರು ಎಂದು ಖ್ಯಾತ ಚಿಂತಕ ಪ್ರೊ.ರಾಜೀವ ಭಾರ್ಗವ ಹೇಳಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಪೀಠ ಹಾಗೂ ಸಮಾಜ ಕಾರ್ಯ ವಿಭಾಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಡಾ.ಬಿ.ಎಸ್.ಜಿರಗೆ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ವಿವೇಚನೆ, ವೈಚಾರಿಕತೆ ಮತ್ತು ಗಣರಾಜ್ಯ, ಡಾ.ಬಿ.ಆರ್.ಅಂಬೇಡ್ಕರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಎಂದೂ ಪ್ರತೀಕಾರ ತೀರಿಸಿಕೊಳ್ಳಲಿಲ್ಲ, ಬದಲಾಗಿ ನ್ಯಾಯದ ಹುಡುಕಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಜಾತಿ ವ್ಯವಸ್ಥೆಯಲ್ಲಿ ತಾರತಮ್ಯ ಆಕಸ್ಮಿಕವಲ್ಲ, ಅದು ಒಂದು ನಿರ್ಮಿತ ವ್ಯವಸ್ಥೆ. ಈ ವ್ಯವಸ್ಥೆಯನ್ನು ಹೋಗಲಾಡಿಸಲು ಮತ್ತು ಸಮಾಜದ ಸುಸ್ಥಿರ ಯೋಗಕ್ಷೇಮವನ್ನು ಕಾಪಾಡಲು ನೈತಿಕ ತತ್ವಗಳೊಂದಿಗೆ ಬೆಸೆದ ರೂಢಿಗಳು ಅತ್ಯಗತ್ಯ ಎಂಬ ತತ್ವವನ್ನು ಅವರು ನಂಬಿದ್ದರು. ಪ್ರಸ್ತುತ ಯುವಸಮೂಹ ಯಾವುದೇ ತರಹದ ತಾರತಮ್ಯಕ್ಕೆ ಆಸ್ಪದ ನೀಡದೆ, ಸಕ್ರಿಯವಾದ ಜ್ಞಾನಾರ್ಜನೆಯಲ್ಲಿ ತೊಡಗಿಕೊಂಡು, ತಮ್ಮ ನೈತಿಕ ಕ್ಷಿತಿಜವನ್ನ ವಿಸ್ತರಿಸಿಕೊಳ್ಳಲು ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಶೈಕ್ಷಣಿಕ ಸಂಸ್ಥೆಗಳು ಕಟ್ಟುನಿಟ್ಟಾಗಿ ತಮ್ಮ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಡಾ.ಸಾಬಿರ್ ಅಹ್ಮದ್ ಮುಲ್ಲಾ ಮಾತನಾಡಿ, ಉತ್ತರ ಕರ್ನಾಟಕದ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಉಪಯುಕ್ತವಾಗುವ ಯೋಜನೆಗಳನ್ನು ರೂಪಿಸಬೇಕು. ಈ ನಿಟ್ಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಕಾರ್ಯಪ್ರವೃತ್ತಿಯಾಗಿದೆ ಎಂದು ಹೇಳಿದರು.

ಅಧ್ಯಕ್ಷೆತೆ ವಹಿಸಿದ್ದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಮಾತನಾಡಿ, ಪ್ರಸ್ತುತ ಕಾಲಮಾನದಲ್ಲಿ ವಿದ್ಯಾರ್ಥಿಗಳು ಕೌಶಲ್ಯಗಳನ್ನು ಪಡೆದು ಸ್ವಾವಲಂಬಿ ಮತ್ತು ಸಮರ್ಥರಾಗುವುದು ಅನಿವಾರ್ಯವಾಗಿದೆ. ವಿದ್ಯಾರ್ಥಿಗಳು ಅಂಕ ಗಳಿಕೆಗಿಂತ ಆಂತರಿಕ ಪ್ರಯಾಣದಲ್ಲಿ ತೊಡಗಿಕೊಂಡು ತತ್ವ ಮತ್ತು ಜ್ಞಾನಕ್ಕೆ ಶರಣಾಗಬೇಕು. ಈ ಆಂತರಿಕ ಪ್ರಯಾಣ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಮತ್ತು ವಿಚಾರಧಾರೆಗಳು ನೆರವಾಗಲಿವೆ ಎಂದು ಹೇಳಿದರು. ಸರಕಾರ ಒಳ್ಳೆಯ ಮೂಲಸೌಕರ್ಯಗಳನ್ನು ಕಲ್ಪಿಸಿದಾಗ ವಿದ್ಯಾರ್ಥಿಗಳು ಸ್ವಾವಲಂಬಿಗಳಾಗುತ್ತಾರೆ ಎಂಬುದನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಪ್ರಾಧ್ಯಾಪಕ ಡಾ.ಜೆ.ಸೋಮಶೇಖರ, ಕುಲಸಚಿವ ಸಂತೋಷ್ ಕಾಮಗೌಡ, ಮೌಲ್ಯಮಾಪನ ಕುಲಸಚಿವ ಪ್ರೊ.ಡಿ.ಎನ್.ಪಾಟೀಲ್, ಹಣಕಾಸು ಅಧಿಕಾರಿ ಎಂ.ಎ.ಸಪ್ನಾ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಪೀಠದ ನಿರ್ದೇಶಕ ಪ್ರೊ.ಅಶೋಕ್ ಡಿಸೋಜಾ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ.ಗಜಾನನ ನಾಯ್ಕ ನಿರೂಪಿಸಿದರು. ಡಾ.ಅಶ್ವಿನಿ ಜಾಮೂನಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಯಲ್ಲಿ ಕುಡಿವ ನೀರಿನ ಬಗ್ಗೆ ಎಚ್ಚರವಿರಲಿ
ಶಾಲಾ ಕಾಲೇಜುಗಳು ಮೊದಲು ನಶಾಮುಕ್ತವಾಗಲಿ:ಡಾ.ಭಗವಾನ್