ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಎಪಿಎಂಸಿ ಮಾರುಕಟ್ಟೆಗೆ ತರಕಾರಿ ಪೂರೈಕೆ ಕಡಿಮೆಯಾಗಿದೆ. ಪರಿಣಾಮ, ನುಗ್ಗೆಕಾಯಿ ದರ 700 ರು., ಟೊಮೆಟೋ ದರ ನೂರರ ಗಡಿ ಸಮೀಪಿಸಿದ್ದರೆ ಬಹುತೇಕ ಎಲ್ಲ ತರಕಾರಿಗಳ ಬೆಲೆಯೂ ಗಗನಕ್ಕೇರಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಕೆಜಿಗೆ 15- 20 ಇದ್ದ ಈರುಳ್ಳಿ ಬೆಲೆ 30- 40 ರುಪಾಯಿಗೆ, ಕೆಜಿಗೆ 50 ಇದ್ದ ಟೊಮೆಟೋ ಬೆಲೆ 90 ರುಪಾಯಿಗೆ ಏರಿದೆ.
ಟೊಮೆಟೊ ದರ ಕೆಜಿಗೆ ₹90ಬೆಳ್ಳುಳ್ಳಿಯ ಬೆಲೆ ಒಂದು ಕೆಜಿಗೆ 50- 150 ರು. ಮತ್ತು ಅಗತ್ಯ ಕೊತ್ತಂಬರಿ ಮತ್ತು ಕರಿಬೇವಿನ ಸೊಪ್ಪು ಕ್ರಮವಾಗಿ 40- 100 ರು. ಮತ್ತು 10 ರಿಂದ 25 ರು.ಗಳಿಗೆ ಏರಿಕೆಯಾಗಿದೆ. ಉತ್ತಮ ಗುಣಮಟ್ಟದ ಪ್ರಥಮ ದರ್ಜೆ ಟೊಮೆಟೋ 14 ಕೆಜಿಗಳ ಬಾಕ್ಸ್ ಒಂದಕ್ಕೆ 1300 ರು. ವರೆಗೂ ಮಾರಾಟವಾಗಿದೆ. ಹಾಪ್ ಕಾಮ್ಸ್ನಲ್ಲಿ ಟೊಮೆಟೋ ಕೆಜಿಗೆ 90ಕ್ಕೆ ಮಾರಾಟವಾಗಿದ್ದರೆ, ದಿತ್ವಾ ಚಂಡಮಾರುತದ ಪರಿಣಾಮ ಜಿಲ್ಲೆಯ ರೈತರಿಂದ ತರಕಾರಿ ಕಡಿಮೆ ಪೂರೈಕೆಯಾಗುತ್ತಿದೆ.
ಅವರೆಯಲ್ಲಿ ಸೊಗಡಿನ ಕೊರತೆ
ಇನ್ನು ಚಳಿಗಾಲದ ನೆಚ್ಚಿನ ಸೊಗಡವರೆ ಬೆಳೆ ಮಾರುಕಟ್ಟೆಗೆ ಇನ್ನೂ ಬಂದಿಲ್ಲ. ತೋಟದ ಅವರೆ ಕಡಿಮೆ ಪ್ರಮಾಣದಲ್ಲಿ ಬಂದಿದ್ದರೂ ಸೊಗಡು ಇರದ ಕಾರಣಕ್ಕೆ ಹೆಚ್ಚಿನ ಗ್ರಾಹಕರು ಇಷ್ಟಪಡುತ್ತಿಲ್ಲ, ಈ ಕಾರಣದಿಂದ ಬೆಲೆ ಹೆಚ್ಚಳಗೊಂಡಿದ್ದು, ಸದ್ಯದ ದರ ಪ್ರತಿ ಕೆಜಿಗೆ 80- 90 ರು. ಗಳಾಗಿವೆ. ಡಿಸೆಂಬರ್ ಅಂತ್ಯ, ಸಂಕ್ರಾಂತಿ ವೇಳೆಗೆ ಸ್ಥಳೀಯ ಹೊಲದ ಅವರೆ ಬರಲಿದ್ದು, ಆಗಿನ ಬೆಲೆ ಕಾದುನೋಡಬೇಕು ಎಂದು ಅವರೆ ವ್ಯಾಪಾರಿ ರಾಮಕೃಷ್ಣಪ್ಪ ಹೇಳುತ್ತಾರೆ.