ಕನ್ನಡಪ್ರಭ ವಾರ್ತೆ ಮೈಸೂರು
ಏಕಲವ್ಯ ಮಾದರಿ ವಸತಿ ಶಾಲೆಗಳ ರಾಷ್ಟ್ರೀಯ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಜ.8 ರಿಂದ 12 ರವರೆಗೆ ಆಯೋಜಿಸಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕ್ರೀಡಾ ಹಾಗೂ ಯುವಸಬಲೀಕರಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಮಂಜುನಾಥ್ ಪ್ರಸಾದ್ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಶನಿವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಸಚಿವ ಅರ್ಜುನ್ ಮುಂಡಾ ಸೇರಿದಂತೆ ರಾಜ್ಯದ ವಿವಿಧ ಸಚಿವರು, ಗಣ್ಯ ವ್ಯಕ್ತಿಗಳು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದರು.
ದೇಶದ ವಿವಿಧ ರಾಜ್ಯಗಳಿಂದ 4500 ಕ್ರೀಡಾಪಟುಗಳು, 1500 ಶಾಲಾ ಶಿಕ್ಷಕರು, ಸಿಬ್ಬಂದಿ ಸೇರಿದಂತೆ ಸುಮಾರು 6000 ಜನ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಏಕಲವ್ಯ ಮಾದರಿ ವಸತಿ ಶಾಲೆಯು ಕೇಂದ್ರ ಸರ್ಕಾರ ನಡೆಸುತ್ತಿರುವ ಶಾಲೆಗಳಾಗಿದ್ದು, 20 ಕೋಟಿ ವೆಚ್ಚ ಅನುದಾನದಲ್ಲಿ ಸದರಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ಈ ಬಾರಿ ಆಯೋಜಿಸಲಾಗುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅವರು ಸೂಚಿಸಿದರು.ಅಂದಾಜು 5 ಕ್ರೀಡಾಂಗಣಗಳಲ್ಲಿ, ಏಕಕಾಲದಲ್ಲಿ ಕ್ರೀಡಾ ಸ್ಪರ್ಧೆಗಳು ಜರುಗಲಿದ್ದು, ಕ್ರೀಡಾಪಟುಗಳ ಸಂಚಾರಕ್ಕೆ ವಾಹನಗಳನ್ನು ಒದಗಿಸುವ ಕುರಿತು, ಕ್ರೀಡಾಂಗಣಗಳ ಸ್ವಚ್ಛತೆ, ಊಟದ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ, ಆಂಬುಲೆನ್ಸ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಪೋಲಿಸ್ ಬಂದೋಬಸ್ತ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಅವರು ತಿಳಿಸಿದರು.
ಮೈಸೂರಿಗೆ ಆಗಮಿಸುವ ಕ್ರೀಡಾಪಟುಗಳಿಗೆ ಮೈಸೂರಿನ ಸಂಸ್ಕೃತಿ ಪರಂಪರೆಯನ್ನು ಪರಿಚಯಿಸುವ ವ್ಯವಸ್ಥೆ ಆಗಬೇಕು. ದೀಪಾಲಂಕಾರ ಹಾಗೂ ಚಾಮುಂಡಿಬೆಟ್ಟ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ಅವರು ಸೂಚಿಸಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಡಾ. ಜಿತೇಂದ್ರ ಶೆಟ್ಟಿ ಮಾತನಾಡಿ, ಕ್ರೀಡಾಕೂಟದಲ್ಲಿ 10 ಗುಂಪು ಕ್ರೀಡಾ ಸ್ಪರ್ಧೆಗಳನ್ನು ಹಾಗೂ 18 ಅಥ್ಲೆಟಿಕ್ಸ್ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಕ್ರೀಡೆ ನಡೆಯುವ ಸ್ಥಳ, ಸಮಯ, ಕೆಲಸಗಳಿಗೆ ನಿಯೋಜಿಸಲ್ಪಟ್ಟ ನೋಡಲ್ ಅಧಿಕಾರಿಗಳ ವಿವರ ಎಲ್ಲವನ್ನು ಮುಂಚಿತವಾಗಿಯೇ ತಲುಪಿಸುವ ವ್ಯವಸ್ಥೆ ಆಗುತ್ತದೆ. ಈಗಾಗಲೇ 3500 ಮಕ್ಕಳಿಗೆ ವಿಮೆ ಮಾಡಿಸಲಾಗಿದೆ. ಕ್ರೀಡಾಕೂಟದಲ್ಲಿ ಕೋವಿಡ್ ಸೂಚನೆಗಳನ್ನು ಪಾಲಿಸಲಾಗುವುದು. ಪ್ರತಿಯೊಂದು ರಾಜ್ಯಕ್ಕೂ ನೋಡಲು ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ವಿವರಿಸಿದರು.
ಪ್ರಧಾನಿ ವಿಡಿಯೋ ಸಂವಾದ:ಜ.15 ರಂದು ನೈಜ ದುರ್ಬಲ ಬುಡಕಟ್ಟು ಜನಾಂಗದವರ ಜೊತೆ ಪ್ರಧಾನಮಂತ್ರಿಗಳ ವಿಡಿಯೋ ಸಂವಾದ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದೆ. ಪ್ರಧಾನ ಮಂತ್ರಿಗಳು ನೈಜ ದುರ್ಬಲ ಬುಡಕಟ್ಟು ಜನಾಂಗದ (ಜೇನು ಕುರುಬ ಮತ್ತು ಕೊರಗ) ಜನರ ಜೊತೆ ನೇರ ಸಂಭಾಷಣೆ ನಡೆಸುವರು ಎಂದರು.
ದೇಶದಲ್ಲಿ ನೈಜ ದುರ್ಬಲ ಬುಡಕಟ್ಟು ಜನಾಂಗದ ಸಂಖ್ಯೆ 20 ಲಕ್ಷವಿದ್ದು, ರಾಜ್ಯದಲ್ಲಿ 70 ಸಾವಿರ ಜನಸಂಖ್ಯೆ ಇದೆ. ಆದಿವಾಸಿ ದುರ್ಬಲ ಬುಡಕಟ್ಟು ಜನಾಂಗದ ಅಭಿವೃದ್ಧಿ ಯೋಜನೆಯಡಿ 24 ಸಾವಿರ ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದ್ದು, ಸದರಿ ಯೋಜನೆಯು ಆದಿವಾಸಿಗಳ ಮನೆ ನಿರ್ಮಾಣ, ರಸ್ತೆ ನಿರ್ಮಾಣ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ, ಶಾಲೆ, ವಿದ್ಯಾರ್ಥಿ ನಿಲಯ, ಆಸ್ಪತ್ರೆ ನಿರ್ಮಾಣ, ಅಂಗನವಾಡಿ ನಿರ್ಮಾಣ, ಸಮುದಾಯ ಭವನ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿದೆ ಎಂದರು.ಈ ಕುರಿತು ಪ್ರಧಾನ ಮಂತ್ರಿಗಳು ನಡೆಸಲಿರುವ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ 50 ರಿಂದ 75 ಆದಿವಾಸಿ ಜನರು ಭಾಗವಹಿಸಲಿದ್ದು, ಸಕಲ ಸಿದ್ಧತೆಗಳನ್ನು ಮಾಡುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಪರಿಶಿಷ್ಟ ವರ್ಗಗಳ ಇಲಾಖೆಯ ನಿರ್ದೇಶಕ ಕಲ್ಲೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಲೋಕನಾಥ್, ಡಿಸಿಪಿ ಎಸ್. ಜಾಹ್ನವಿ, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ, ಯೋಜನಾ ನಿರ್ದೇಶಕ ಮುನಿರಾಜು, ವಾರ್ತಾ ಇಲಾಖೆಯ ಉಪ ನಿರ್ದೇಶಕ ಡಿ. ಅಶೋಕ್ ಕುಮಾರ್ ಮೊದಲಾದವರು ಇದ್ದರು.