ಬ್ಯಾಡಗಿ: ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ ಗ್ರಿಡ್ನಲ್ಲಿರುವ ಎರಡೂ ಟ್ರಾನ್ಸ್ಫಾರ್ಮರ್ಗಳು ಸುಟ್ಟು ಹೋಗಿದ್ದು, ರೈತ ಸಂಘದ ಕಾರ್ಯಕರ್ತರು ಶನಿವಾರ ಕೆಲಕಾಲ ಪ್ರತಿಭಟನೆ ನಡೆಸಿದರಲ್ಲದೇ, ಹೆಸ್ಕಾಂ ನಿರ್ಲಕ್ಷ್ಯತನಕ್ಕೆ ಹಿಡಿಶಾಪ ಹಾಕಿದರು.
ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಕೆ ಮಾಡಿದ್ದೇ ಟ್ರಾನ್ಸ್ಫಾರ್ಮರ್ ಸುಟ್ಟು ಹೋಗಲು ಕಾರಣವೆಂದು ಆರೋಪಿಸಿದ ಪ್ರತಿಭಟನಾಕಾರರು, ವಿದ್ಯುತ್ ವಿತರಣೆ ಕೇಂದ್ರದ ಅಧಿಕಾರಿಗಳು ಮಾತ್ರ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದು, ನೀರಾವರಿ ಕೆಲಸಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಬೆಳೆಗಳು ಒಣಗಿ ಹೋಗುವ ಆತಂಕ ಎದುರಾಗಿದೆ ಎಂದರು.
ನೀರಿನಲ್ಲಿ ಹೋಮ: ಸರ್ಕಾರ ಒಟ್ಟು ₹15 ಕೋಟಿಗೂ ಹೆಚ್ಚು ಹಣ ವ್ಯಯಿಸಿ ಗ್ರಿಡ್ ಸ್ಥಾಪಿಸಿದೆ. ಆದರೆ ರೈತರಿಗೆ ವಿದ್ಯುತ್ ಪೂರೈಸಲಾಗದೇ ಇರುವುದರಿಂದ ಸರ್ಕಾರದ ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಇದರಿಂದ 30ಕ್ಕೂ ಹೆಚ್ಚು ಗ್ರಾಮಗಳ ರೈತರು ವಿದ್ಯುತ್ಗಾಗಿ ಪರದಾಡುತ್ತಿದ್ದಾರೆ. ಕೂಡಲೇ 20ಕೆವಿ ವಿದ್ಯುತ್ ಕೇಂದ್ರಗಳಿಂದ ವಿದ್ಯುತ್ ಪೂರೈಸುವಂತೆ ಆಗ್ರಹಿಸಿದರು.ಇಂಧನ ಸಚಿವರು ಕೆ.ಜೆ. ಜಾರ್ಜ್ ಖುದ್ದಾಗಿ ಆಗಮಿಸಿ ಉದ್ಘಾಟಿಸಿದ ಎರಡು ದಿನದಲ್ಲಿ ಟ್ರಾನ್ಸ್ಫಾರ್ಮರ್ ಸುಟ್ಟು ಹೋಗಿದೆ. ನಿಮ್ಮ ಸರ್ಕಾರದ ಕಾರ್ಯವೈಖರಿ ಪ್ರಶ್ನಿಸಬಾರದೇಕೆ? ಈ ಘಟನೆ ಹೆಸ್ಕಾಂ ಸೇರಿದಂತೆ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ. ಹೆಸ್ಕಾಂ ಅಧಿಕಾರಿಗಳು ಸೋಮವಾರದೊಳಗೆ ಸರಿಪಡಿಸದಿದ್ದರೆ ಫೆ. 25ರಂದು ಚಿಕ್ಕಬಾಸೂರು ವಿದ್ಯುತ್ ವಿತರಣೆ ಕೇಂದ್ರದ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಈ ವೇಳೆ ಈಶ್ವರ ಅಜಗೊಂಡ್ರ, ವರುಣ ಮಲ್ಲಿಗಾರ, ಲಿಂಗರಾಜ ತಿಳವಳ್ಳಿ, ಮುನಾಫ್ಸಾಬ ಅಜ್ಜನವರ, ಪಿ.ಎಸ್. ಮಕಾಂದಾರ, ಸಿದ್ದರಾಮಗೌಡ್ರ ಚನ್ನಗೌಡ್ರ, ಫಕ್ಕೀರೇಶ ಅಜಗೊಂಡ್ರ, ಶರಣು ಕಣಗಲಬಾವಿ, ವೀರೇಶ ನಿಟ್ಟೂರು, ರೇವಣೆಪ್ಪ ನಿಟ್ಟೂರು ಇತರರಿದ್ದರು.