ಮುಂದಿನ ದಿನಗಳಲ್ಲಿ ಎಲ್ಲರ. ಮಾರ್ಗದರ್ಶನದಲ್ಲಿ ಉತ್ತಮವಾಗಿ ಕೆಲಸ ಮಾಡಿ
ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ ಅವಿರೋಧ ಆಯ್ಕೆಯಾಗಿರುವುದಕ್ಕೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಅಶೋಕ ರಸ್ತೆಯಲ್ಲಿರುವ ಎಂಸಿಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡಸ್ವಾಮೇಗೌಡ ಅವರು ಕಾಂಗ್ರೆಸ್ ಬೆಂಬಲಿತರಾಗಿ ಕಣಕ್ಕಿಳಿದು ಅವಿರೋಧವಾಗಿ ಆಯ್ಕೆಯಾದರು.
ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ದೊಡ್ಡಸ್ವಾಮೇಗೌಡರಿಗೆ ಕಾಂಗ್ರೆಸ್ ನಿಂದ ಅವಕಾಶ ನೀಡಿ, ಈಗ ಬ್ಯಾಂಕಿನ ಅಧ್ಯಕ್ಷ ಸ್ಥಾನವನ್ನು ನೀಡಿದೆ.
ದೊಡ್ಡಸ್ವಾಮೇಗೌಡರು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕೆ.ಆರ್. ನಗರ ಕ್ಷೇತ್ರದಲ್ಲಿ ಪಕ್ಷಕ್ಕೆ ಆನೆ ಬಲ ಬಂದಂತಾಗಿದ್ದು.
ಸಂಭ್ರಮಾಚರಣೆ- ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ದೊಡ್ಡಸ್ವಾಮೇಗೌಡ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಕೆ.ಆರ್.ನಗರ ಸಾಲಿಗ್ರಾಮ ತಾಲೂಕಿನಾಧ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಿಸಿದರು.
ದೊಡ್ಡಸ್ವಾಮೇಗೌಡ ಸಂತಸ- ನಾನು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆಯಾಗಲು ಅವಕಾಶ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯ ಕಾಂಗ್ರೆಸ್ ಎಲ್ಲ ಶಾಸಕರು, ಮಾಜಿ ಶಾಸಕರು ಮತ್ತು ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕರು ಅಭಿನಂದನೆ ಸಲ್ಲಿಸುವುದಾಗಿ ದೊಡ್ಡಸ್ವಾಮೇಗೌಡ ತಿಳಿಸಿದರು.
ಮುಂದಿನ ದಿನಗಳಲ್ಲಿ ಎಲ್ಲರ. ಮಾರ್ಗದರ್ಶನದಲ್ಲಿ ಉತ್ತಮವಾಗಿ ಕೆಲಸ ಮಾಡಿ ಸರ್ಕಾರದಿಂದ ಬ್ಯಾಂಕಿನ ಮೂಲಕ ದೊರೆಯುವ ಎಲ್ಲ ಸವಲತ್ತುಗಳನ್ನು ಅರ್ಹ ರೈತರ ಮನೆ ಬಾಗಿಲಿಗೆ ತಲುಪಿಸುದಾಗಿ ಹೇಳಿದರು.ಅಭಿನಂದನೆ- ಎಂಸಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರನ್ನು ಶಾಸಕ ಡಿ. ರವಿಶಂಕರ್, ತಾಪಂ ಮಾಜಿಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಉಪಾಧ್ಯಕ್ಷ ಕೆ.ಎಸ್. ಅರವಿಂದ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್. ಮಹೇಶ್, ಪುರಸಭೆ ಮಾಜಿ ಸದಸ್ಯ ನಟರಾಜು, ರಾಜ್ಯ ಕುರಿ ಮತ್ತು ಮೇಕೆ ಸಾಕಾಣಿಕೆದಾರ ಸಂಘಗಳ ಮಹಾ ಮಂಡಳದ ಅಧ್ಯಕ್ಷ ಎಂ. ರಮೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ಪಿ.ಪ್ರಶಾಂತ್, ಮಾಜಿ ಉಪಾಧ್ಯಕ್ಷ ಎಚ್.ಎಚ್. ನಾಗೇಂದ್ರ, ತಾಲೂಕು ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಮಹದೇವನಾಯಕ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ. ಶಿವಣ್ಣ, ನಿರ್ದೇಶಕರಾದ ಬಸವರಾಜು, ಕೆ.ಎಚ್. ಬುಡೀಗೌಡ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಚೀರ್ನಹಳ್ಳಿ ಸಿ.ಟಿ.ಶಿವರಾಜು, ವೆಂಕಟೇಶ್, ವೈ.ಎಸ್. ಜಯಂತ್, ಹೊಸಕೋಟೆ ಗ್ರಾಪಂ ಮಾಜಿ ಅಧ್ಯಕ್ಷ ಸಿ.ಕೆ. ಬಸವರಾಜು, ದೊಡ್ಡೇಕೊಪ್ಪಲು ಗ್ರಾಪಂ ಮಾಜಿ ಅಧ್ಯಕ್ಷ ಬ.ಮ. ಗಿರೀಶ್, ಮಾಜಿ ಸದಸ್ಯ ಎಂ.ಎಸ್. ಅನಂತ್ ಅಭಿನಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.