ರಾಣಿಬೆನ್ನೂರು: ನ್ಯಾಯಾಲಯ ನೀಡಿದ ತೀರ್ಪನ್ನು ನಿರ್ಲಕ್ಷಿಸಿ ಇಂದಿರಾ ಗಾಂಧಿ ತಮ್ಮ ಅಧಿಕಾರ ಉಳಿಸಿಕೊಳ್ಳುವ ಆಸೆಯಿಂದ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ ಪರಿಣಾಮ ದೇಶದ ಜನರು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಯಿತು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ತುರ್ತು ಪರಿಸ್ಥಿತಿ ಘೋಷಿಸಿದ ಸಂದರ್ಭದಲ್ಲಿ ಮೂರು ದಿನಗಳ ಕಾಲ ಪತ್ರಿಕೆಗಳು ಸಹ ಮುದ್ರಣವಾಗದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ರಾಮಕೃಷ್ಣ ಹೆಗಡೆ, ಎಲ್.ಕೆ. ಆಡ್ವಾಣಿ, ಅಟಲ್ ಬಿಹಾರಿ ವಾಜಪೇಯಿ, ಜಾರ್ಜ್ ಫರ್ನಾಂಡಿಸ್, ಯಡಿಯೂರಪ್ಪ ಸೇರಿದಂತೆ ಅನೇಕರು ಜೈಲುವಾಸ ಅನುಭವಿಸಿದರು. ಹಂದಿಗಳು ಇರದಂತಹ ಸ್ಥಿತಿಯಲ್ಲಿ ಅವರನ್ನು ಇರಿಸಿದರು. ದೇಶದ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಇದನ್ನು ನೆನಸಿಕೊಳ್ಳಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಂವಿಧಾನ ಬದಲಾವಣೆ ತಂದಿದೆ. ದೇಶದ ಸಂವಿಧಾನ ಮೂಲಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಹೇರಲಾಗಿದೆ. ಹೀಗಾಗಿ ಇದರ ಬಗ್ಗೆ ಜನರಿಗೆ ತಿಳಿಸಿ ಪ್ರಜಾಪ್ರಭುತ್ವದ ಉಳಿಸಿ ಎಂದರು.
ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ನಾನು ಹಾಗೂ ಅನಂತಕುಮಾರ ಅಧ್ಯಯನ ಮಾಡುತ್ತಿದ್ದ ಸಮಯದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಯಿತು. ಇದರ ಬಗ್ಗೆ ಹೋರಾಟ ಮಾಡಲು ತೀರ್ಮಾನ ಮಾಡಲಾಯಿತು. ಇಂದಿರಾ ಅಂದರೆ ಅಂದರ್ ಆಗುತ್ತಿದ್ದರು. ನಾವು ರಸ್ತೆ ತಡೆ ಮಾಡಿದ ಸಮಯದಲ್ಲಿ ಕೆಲವರು ಬಸ್ಗೆ ಬೆಂಕಿ ಹಚ್ಚಿದರು. ಅದು ದೇಶದಲ್ಲಿ ದೊಡ್ಡ ಸುದ್ದಿಯಾಯಿತು.ಪಾರ್ಲಿಮೆಂಟ್ನಲ್ಲಿ ಚರ್ಚೆಯಾಗದೇ ರಾತ್ರೋರಾತ್ರಿ ಸಹಿ ಹಾಕಿಸಿ, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಯಿತು. ಆಡ್ವಾಣಿ, ಯಡಿಯೂರಪ್ಪ, ವಾಜಪೇಯಿ ಜೈಲಿನಲ್ಲಿದ್ದರು. ಹೇಳದೇ ಕೇಳದೆ ಜೈಲಿಗೆ ಹಾಕುವ ಪರಿಸ್ಥಿತಿ ತಂದರು. ಆರ್ಎಸ್ಎಸ್ ಹಾಗೂ ಜನಸಂಘದ ಕಾರ್ಯಕರ್ತರ ಮೇಲೆ ಹೆಚ್ಚು ಕೇಸ್ ದಾಖಲಿಸಲಾಯಿತು. ಇಂದಿನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿದ್ದರು. ಗುಲಾಮಗಿರಿ ಕಾಂಗ್ರೆಸ್ನಲ್ಲಿ ಆಳವಾಗಿದೆ. ಸಿದ್ದರಾಮಯ್ಯ ಅವರು ತುರ್ತು ಪರಿಸ್ಥಿತಿಯಲ್ಲಿ ಎಲ್ಲಿದ್ದರು? ಅಧಿಕಾರದ ಆಸೆಗಾಗಿ ಕುಟುಂಬದ ರಕ್ಷಣೆಗೆ ನಿಂತಿದ್ದಾರೆ. ಅಂಥವರು ಸಂವಿಧಾನದ ಬಗ್ಗೆ ಮಾತನಾಡುತ್ತಿದ್ದಾರೆ. ತುಷ್ಟೀಕರಣ ರಾಜಕಾರಣ ಮಾಡಲು ಹೊರಟವರು ಇವರು. ಸಿದ್ದರಾಮಯ್ಯ ಅವರೇ ನಿಮಗೇ ಅಂಬೇಡ್ಕರ್ ಸಂವಿಧಾನ ಬೇಕಾ? ಇಂದಿರಾ ಗಾಂಧಿ ಸಂವಿಧಾನ ಬೇಕಾ ಎಂದು ಪ್ರಶ್ನಿಸಿದರು.
ಅಧಿಕಾರ ಶಾಶ್ವತವಲ್ಲ, ಅಧಿಕಾರದ ಅವಧಿಯಲ್ಲಿ ಜನಪರ ಕೆಲಸಗಳು ಕೈಹಿಡಿಯುತ್ತವೆ. 2026ಕ್ಕೆ ಮಧ್ಯಂತರ ಚುನಾವಣೆ ಬಂದು ಕಮಲ ಅಧಿಕಾರಕ್ಕೆ ಬರಲಿದೆ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಸಚಿವ ಬಿ.ಸಿ. ಪಾಟೀಲ, ಮಾಜಿ ಶಾಸಕ ಅರುಣಕುಮಾರ ಪೂಜಾರ, ತುರ್ತು ಪರಿಸ್ಥಿತಿ 50 ವರ್ಷ ರಾಜ್ಯ ಸಮಿತಿ ಸಂಚಾಲಕ ಮಹೇಂದ್ರ ಕೌತಾಳ, ತುರ್ತು ಪರಿಸ್ಥಿತಿ ಸಮಯದಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸಿದ ರಾಮಕೃಷ್ಣ ತಾಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಇದೇ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸಿದ ರಾಮಕೃಷ್ಣ ತಾಂಬೆ ಹಾಗೂ ರವೀಶ ಕರ್ನೂರ ಅವರನ್ನು ಸನ್ಮಾನಿಸಲಾಯಿತು.