ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ । ಇತ್ತೀಚಿನ ಘಟನೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದ ಅಧಿಕಾರಿಗಳು
ಪಟ್ಟಣದಲ್ಲಿ ಕಳೆದ ಕೆಲ ದಿನಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಲವು ಘಟನೆಗಳು ನಡೆದಿರುವ ಹಿನ್ನೆಲೆ ರಾಜ್ಯ ಪೊಲೀಸ್ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಹಾಗೂ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭಟ್ಕಳ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ವಿವಿಧ ಠಾಣೆಗಳ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಇತ್ತೀಚೆಗೆ ನಡೆದ ಘಟನೆಗಳ ಕುರಿತು ಸಮಗ್ರ ಮಾಹಿತಿ ಪಡೆದರು.
ಮೇ 24ರಂದು ಪೊಲೀಸರ ಸಮ್ಮುಖದಲ್ಲಿ ನಡೆದ ಪುನರ್ನಿರ್ಮಿತ ಮುರಿನಕಟ್ಟೆ ಧ್ವಂಸ ಪ್ರಕರಣ, ಬಳಿಕ ಕೆಲ ಸಂಘಟನೆಗಳ ಮುಖಂಡರಿಂದ ನೀಡಲಾದ ಕೋಮು ಪ್ರಚೋದನಾ ಹೇಳಿಕೆಗಳು, ಎರಡು ದಿನಗಳ ಹಿಂದೆ ವಿಭಿನ್ನ ಕೋಮಿನ ಯುವಕ-ಯುವತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಡೆದ ನೈತಿಕ ಪೊಲೀಸ್ಗಿರಿ, ಯುವಕನ ಮೇಲಿನ ಹಲ್ಲೆ, ಯುವತಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪ ಹಾಗೂ ಪ್ರತಿಭಟನೆಯ ಹೆಸರಿನಲ್ಲಿ ಪೊಲೀಸ್ ಠಾಣೆಗೆ ತೆರಳಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಬೆದರಿಕೆ ಒಡ್ಡಿದ ಪ್ರಕರಣಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.ಭಟ್ಕಳದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಪದೇ ಪದೇ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುವ ಸಮಾಜಘಾತುಕ ಶಕ್ತಿಗಳನ್ನು ಗುರುತಿಸಿ ಕಾನೂನು ಕ್ರಮ ಜರುಗಿಸಬೇಕು. ಯಾವುದೇ ಒತ್ತಡಕ್ಕೂ ಮಣಿಯದೆ ಆರೋಪಿಗಳನ್ನು ಕಾನೂನಿನ ಮುಂದೆ ಹಾಜರುಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.