ಪ್ರಭಾಪ್ರಭುತ್ವದ ಗಟ್ಟಿಗೊಳಿಸಲು ಮಾನವೀಯತೆ ಅಳವಡಿಸಿಕೊಳ್ಳಿ

KannadaprabhaNewsNetwork |  
Published : Sep 16, 2024, 01:45 AM IST
1 | Kannada Prabha

ಸಾರಾಂಶ

ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತ ಇಂದು ಪ್ರಜಾಪ್ರಭುತ್ವದ ಅತೀ ದೊಡ್ಡ ದೇಶವಾಗಿದೆ

ಕನ್ನಡಪ್ರಭ ವಾರ್ತೆ ಮೈಸೂರು

ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮಾನವೀಯತೆ ಹಾಗೂ ಸಹಾಯ ಮಾಡುವ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಕರೆ ನೀಡಿದರು.

ಮೈಸೂರು ಅರಮನೆ ಉತ್ತರ ದ್ವಾರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತ ಇಂದು ಪ್ರಜಾಪ್ರಭುತ್ವದ ಅತೀ ದೊಡ್ಡ ದೇಶವಾಗಿದೆ. ರಾಜ್ಯದ ಬೀದರಿಂದ ಹಿಡಿದು ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸಿ ಇತಿಹಾಸ ಸೃಷ್ಟಿಸುವುದಕ್ಕೆ ಸಾಕ್ಷಿಯಾಗಿದ್ದು, ಇದರ ಉದ್ದೇಶ ಸಂವಿಧಾನವನ್ನು ಇನ್ನೂ ಗಟ್ಟಿಗೊಳಿಸಲು, ಅದರ ಅರಿವು ಮೂಡಿಸುವುದಾಗಿದೆ ಎಂದು ಅವರು ಹೇಳಿದರು.

ಡಾ.ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ನೀಡಿದ್ದಾರೆ. ಅದನ್ನು ನಾವೆಲ್ಲರೂ ನಮಗಾಗಿ ಅರ್ಪಿಸಿಕೊಂಡು ಶಾಸನವಾಗಿ ಒಪ್ಪಿಕೊಂಡಿದ್ದೇವೆ. ಕೈಹಿಡಿದು ನಿಲ್ಲುವುದರೊಂದಿಗೆ, ಪರಸ್ಪರ ಸಹಾಯ ಹಸ್ತ ಚಾಚುವುದನ್ನು ಎಲ್ಲರೂ ಮಾಡಬೇಕು ಎಂದರು.

ಮಾನವ ಸರಪಳಿಯಲ್ಲಿ ದಸರಾ ಆನೆಗಳು ಭಾಗಿ

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿಸಲಾಯಿತು. ಮಾನವ ಸರಪಳಿಯಲ್ಲಿ ಪಾಲ್ಗೊಂಡವರು ಕೈ ಕೈ ಹಿಡಿದುಕೊಂಡು ತಮ್ಮ ಎರಡು ಕೈಗಳನ್ನು ಮೇಲಕ್ಕೆ ಎತ್ತಿ ಹಿಡಿದು ಜೈ ಹಿಂದ್, ಜೈ ಕರ್ನಾಟಕ ಎಂಬ ಘೋಷಣೆಗಳನ್ನು ಕೂಗಿದರು. ಭಾನುವಾರ ಬೆಳಗ್ಗೆ ನಡಿಗೆ ತಾಲೀಮು ಮುಗಿಸಿ ಅರಮನೆಗೆ ವಾಪಸಾಗುತ್ತಿದ್ದ ದಸರಾ ಆನೆಗಳು ಕೂಡ ಸಾಲಿನಲ್ಲಿ ನಿಲ್ಲಿಸಿದ್ದು ವಿಶೇಷವಾಗಿತ್ತು. ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 60 ಸಾವಿರ ಜನರು ಭಾಗವಹಿಸಿದ್ದರು.

ಶಾಸಕರಾದ ಕೆ. ಹರೀಶ್‌ ಗೌಡ, ಡಿ. ರವಿಶಂಕರ್‌, ಡಾ.ಡಿ. ತಿಮ್ಮಯ್ಯ, ಎಂಡಿಎ ಅಧ್ಯಕ್ಷ ಕೆ. ಮರೀಗೌಡ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಹೆಗಡೆ, ಸದಸ್ಯ ಕಾರ್ಯದರ್ಶಿ ಬಿ.ಜಿ. ದಿನೇಶ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್‌, ಎಸ್ಪಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ. ರಂಗೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್‌, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

----

ಕೋಟ್...

ಜಾತಿ ಯಾವುದೇ ಇರಬಹುದು. ಯಾವ ಮನುಷ್ಯನೂ ಅರ್ಜಿ ಹಾಕಿಕೊಂಡು ಹುಟ್ಟಿಲ್ಲ. ನಾವು ಸೃಷ್ಟಿಸಿರುವ ಜಾತಿಯಲ್ಲಿ ಮಾನವೀಯ ಮೌಲ್ಯಗಳಿಗೆ ಮಾನವ ಸಂಬಂಧಗಳಿಗೆ ಹೆಚ್ಚು ಆದ್ಯತೆ ನೀಡೋಣ.

- ತನ್ವೀರ್ ಸೇಠ್, ಶಾಸಕ

----

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮಾನತೆಯನ್ನು ಸಂವಿಧಾನ ನೀಡಿದೆ. ಎಲ್ಲರನ್ನೂ ಒಂದೆಂದು ಕಾಣಬೇಕು. ಎಲ್ಲರ ಹಿತವನ್ನೂ ಕಾಪಾಡಲು ನಾವೆಲ್ಲ ಮುಂದಾಗಬೇಕು.

- ಡಾ.ಡಿ. ತಿಮ್ಮಯ್ಯ, ವಿಧಾನಪರಿಷತ್ ಸದಸ್ಯ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!