ಕಾರಟಗಿ: ಕನಕಗಿರಿ ಕ್ಷೇತ್ರದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಮಕ್ಕಳ ಕಲಿಕೆ ಗುಣಮಟ್ಟ ಹೆಚ್ಚಿಸಲು ಸರ್ಕಾರಿ ಶಾಲೆಗಳ ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಜತೆಗೆ ಅಮೂಲಾಗ್ರಹ ಬದಲಾವಣೆಗೆ ಹೊಸ ಯೋಜನೆ ರೂಪಿಸಲಾಗುತ್ತಿದೆ ಎಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷ ಬಿ. ಶರಣಯ್ಯಸ್ವಾಮಿ ಹೇಳಿದರು.
ಕ್ಷೇತ್ರದ ಸರ್ಕಾರಿ ಶಾಲೆಗಳ ಸಮಸ್ಯೆ ನಿವಾರಣೆ, ಮಕ್ಕಳ ಹಾಜರಾತಿ, ಶಿಕ್ಷಕರ ಒಳಗೊಳ್ಳುವಿಕೆ, ಶಿಕ್ಷಕರ ಕೊರತೆ ನಿವಾರಣೆ ಜತೆಗೆ ಪ್ರತಿ ಹಳ್ಳಿಗಳಲ್ಲಿನ ಮಕ್ಕಳ ಕಲಿಕೆಯ ಗುಣಮಟ್ಟ ಹೆಚ್ಚಿಸುವ ಕುರಿತು ಗಂಭೀರವಾಗಿ ಚಿಂತನೆ ನಡೆಸಿದ್ದು, ಮೊದಲ ಹಂತವಾಗಿ ನುರಿತ ಶಿಕ್ಷಣ ತಜ್ಞರು, ನುರಿತ ಅನುಭವಿ ಶಿಕ್ಷಕರನ್ನು ಸೇರಿಸಿ ಶಾಲೆ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಹಂತ ಹಂತವಾಗಿ ಜಾರಿ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.
ಶಾಲಾ ವಿದ್ಯಾರ್ಥಿಗಳಿಗಾಗಿ ಇಲಾಖೆಯ ಯೋಜನಾ ಕಾರ್ಯಕ್ರಮದಡಿಯಲ್ಲಿ ರೂಪಿಸಿದ ವಿಸ್ತೃತ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳಲ್ಲಿನ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುತ್ತದೆ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಹೊರ ತರಲು ಶಿಕ್ಷಕರಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮವೂ ವಿನೂತನವಾಗಿದ್ದು, ಸಾಂಸ್ಕೃತೀಕ ಹಾಗೂ ಸಾಹಿತ್ಯಕವಾಗಿ ಕ್ಲಸ್ಟರ್, ಬ್ಲಾಕ, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಸ್ಪರ್ಧೆ ರೂಪಿಸಲಾಗುತ್ತಿದೆ. ಇದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಸಾಮಾನ್ಯ ವೇದಿಕೆಯಾಗಿದ್ದು ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಲು ಮೆಚ್ಚುಗೆ ಪ್ರಮಾಣ ಪತ್ರ ಹಾಗೂ ಬಹುಮಾನ ನೀಡಲಾಗುತ್ತದೆ ಎಂದರು.ಪುರಸಭೆ ಅಧ್ಯಕ್ಷೆ ರೇಖಾ ರಾಜಶೇಖರ ಆನೆಹೊಸೂರು ಮಾತನಾಡಿ,ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಪೂರಕವಾದ ವಾತಾವರಣ ಸೃಷ್ಠಿಸುವ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಬಹಳ ಮುಖ್ಯ ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮ ವಿದ್ಯಾರ್ಥಿಗಳ ವ್ಯಕ್ತಿತ್ವದ ಅಭಿವೃದ್ಧಿಗೆ ಸಹಾಯವಾಗುವದರೊಂದಿಗೆ ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುತ್ತದೆ. ಅಲ್ಲದೆ ಮಕ್ಕಳಲ್ಲಿನ ಗುಪ್ತ ಪ್ರತಿಭೆ ಹೊರ ತರುತ್ತದೆ. ಹಾಗೆಯೇ ಶಾಲೆಗಳ ಅಭಿವೃದ್ಧಿಗೆ ಮಕ್ಕಳ ಬೆಳವಣಿಗೆಗೆ ಶಿಕ್ಷಕರ ಪಾತ್ರ, ಪರಿಶ್ರಮ ಮಹತ್ವದಾಗಿದೆ ಎಂದರು.
ಖಾಸಗಿ ಶಿಕ್ಷಣ ಸಂಸ್ಥೆಗಳು ಅಧ್ಯಕ್ಷ ಶರಣಪ್ಪ ಅಂಗಡಿ, ಮುಖ್ಯಗುರು ಶ್ಯಾಮಸುಂದರ್, ಬಸಯ್ಯಮಠ,ನಾಗಮ್ಮ, ರಾಮು ಸೇರಿದಂತೆ ಕ್ಲಸ್ಟರ್ನ ೨೫ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಇದ್ದರು.