ಎಲ್ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವುದೇ ಸರ್ಕಾರಿ ಪಬ್ಲಿಕ್ ಶಾಲೆಗಳ ಮುಖ್ಯ ಉದ್ದೇಶವಾಗಿದೆ. ಇದರಿಂದ ಮಕ್ಕಳ ಕಲಿಕಾ ಮಟ್ಟ ವೃದ್ಧಿಯಾಗಲಿದೆ. ಅಲ್ಲದೆ ಈ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಹೊಂದಿರುವುದಲ್ಲದೆ ಖಾಸಗಿ ಶಾಲೆಗಳಲ್ಲಿನ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವು
ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದೇ ನನ್ನ ಮುಖ್ಯ ಗುರಿ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.
ತಾಲೂಕಿನಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವಂತೆ ಶಾಸಕರು ಸರ್ಕಾರಕ್ಕೆ ಮಾಡಿದ್ದ ಮನವಿ ಮೇರೆಗೆ ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ತಾಲೂಕಿನ ಪಾತಪಾಳ್ಯ ಹಾಗೂ ಚಾಕವೇಲು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದಾಗಿ ಹೇಳಿದರು.
ಶಾಸಕರಿಗೆ ಸನ್ಮಾನ:
ಈ ಹಿನ್ನೆಲೆಯಲ್ಲಿ ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಂಜಿರೆಡ್ಡಿ, ಉಪ ಪ್ರಾಂಶುಪಾಲ ವೆಂಕಟೇಶ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶ್ರೀನಿವಾಸ್ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ತಾಲೂಕಿನ ಸರ್ವತೋಮುಖ ಅಭಿವೃದ್ದಿಯ ಜೊತೆಗೆ ಬಡವರ ಮಕ್ಕಳ ಶೈಕ್ಷಣಿಕ ಅಭಿವೃದ್ದಿಪಡಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಬಾಗೇಪಲ್ಲಿ ತಾಲೂಕಿನಲ್ಲಿ ಹೊಸದಾಗಿ ಮೂರು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆ. ತಮ್ಮ ಮನವಿಗೆ ಸ್ಪಂದಿಸಿರುವ ಸರ್ಕಾರ ತಾಲೂಕಿನಲ್ಲಿ 3 ಶಾಲೆಗಳನ್ನು ತೆರೆಯಲು ಅನುಮತಿ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು. ಪ್ರತಿ ಶಾಲೆಗೆ 4 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಹೇಳಿದರು.
ಖಾಸಗಿ ಶಾಲೆಗಳಿಗೆ ಪೈಪೋಟಿ
ಎಲ್ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವುದೇ ಈ ಶಾಲೆಗಳ ಮುಖ್ಯ ಉದ್ದೇಶವಾಗಿದೆ. ಇದರಿಂದ ಮಕ್ಕಳ ಕಲಿಕಾ ಮಟ್ಟ ವೃದ್ಧಿಯಾಗಲಿದೆ. ಖಾಸಗಿ ಶಾಲೆಗಳಿಗೆ ಪರ್ಯಾಯವಾಗಿ ಈ ಶಾಲೆಗಳು ಕಾರ್ಯನಿರ್ವಹಿಸಲಿವೆ. ಅಲ್ಲದೆ ಈ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಹೊಂದಿರುವುದಲ್ಲದೆ ಖಾಸಗಿ ಶಾಲೆಗಳಲ್ಲಿನ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದ ಅವರು ವಿವರಿಸಿದರು.
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಗಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ. ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಅಭಿವೃದ್ದಿಹೊಂದಬೇಕೆಂದರು. ಈ ಸಂದರ್ಭದಲ್ಲಿ ಶಿಕ್ಷಕರು ಸಾರ್ವಜನಿಕರು ಹಾಗೂ ಪೋಷಕರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.