ಕುಸುಮ್- ಬಿ ಹಾಗೂ ಕುಸುಮ್- ಸಿ ಯೋಜನೆಯಡಿ ಸೌರ ವಿದ್ಯುತ್ ಉತ್ಪಾದನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುರಾಜ್ಯದಲ್ಲಿ ದಿನೇ ದಿನೇ ವಿದ್ಯುತ್ ಬೇಡಿಕೆ ಹೆಚ್ಚಾಗಲಾರಂಭಿಸಿದ್ದು, ಪ್ರಸ್ತುತ ಪ್ರತಿದಿನ 17,500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಹೀಗಾಗಿ ಸೌರ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಸುಮ್- ಬಿ ಹಾಗೂ ಕುಸುಮ್- ಸಿ ಯೋಜನೆಯಡಿ ಸೌರ ವಿದ್ಯುತ್ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.ಒಂದು ಮೆಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆಗೆ 4 ಎಕರೆ ಜಾಗ ಬೇಕಾಗುತ್ತದೆ. ಸರ್ಕಾರಿ ಜಾಗ ಇದ್ದರೆ ಸೌರ ವಿದ್ಯುತ್ ತಯಾರಿಕೆಗೆ ಮುಂದೆ ಬರುವವರಿಗೆ ಉಚಿತವಾಗಿ ಜಾಗ ನೀಡಲಾಗುವುದು. ಆದರೆ, ಹೀಗೆ ಪಡೆಯುವ ಜಾಗಕ್ಕೆ ಪ್ರತಿ ವರ್ಷ ಎಕರೆಗೆ ₹25 ಸಾವಿರ ಪಾವತಿಸಬೇಕಾಗುತ್ತದೆ. ಹೀಗೆ ಪಾವತಿಯಾಗುವ ಹಣವನ್ನು ಯಾವ ಗ್ರಾಪಂ ವ್ಯಾಪ್ತಿಯಲ್ಲಿ ಸೌರ ವಿದ್ಯುತ್ ಸ್ಥಾವರ ಆರಂಭವಾಗಿರುತ್ತದೆಯೋ, ಆ ಪಂಚಾಯ್ತಿಗೆ ಹಣ ನೀಡಲಾಗುತ್ತದೆ. ಈ ಹಣವನ್ನು ಸ್ಥಳೀಯ ಅಂಗನ ವಾಡಿ ಹಾಗೂ ಶಾಲೆಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.ಟ್ರಾನ್ಸ್ಫಾರ್ಮರ್ ಕೊರತೆ ಇಲ್ಲ:
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಗಳಿಗೆ ಯಾವುದೇ ಕೊರತೆ ಇಲ್ಲ. ಈಗಾಗಲೇ ಟ್ರಾನ್ಸ್ಫಾರ್ಮರ್ ಬ್ಯಾಂಕ್ಗಳನ್ನು ಸ್ಥಾಪನೆ ಮಾಡಿ ಅಲ್ಲಿ ದಾಸ್ತಾನು ಮಾಡಲಾಗಿದೆ. ಎಲ್ಲಿಯಾದರೂ ಸಮಸ್ಯೆ ಉಂಟಾದಲ್ಲಿ ಟೋಲ್ ಫ್ರೀ ನಂಬರ್ 1912ಗೆ ಕರೆ ಮಾಡಿ ದಲ್ಲಿ ಕರೆ ರೆಕಾರ್ಡ್ ಆಗಲಿದೆ. ಜೊತೆಗೆ 72 ಗಂಟೆಗಳ ಒಳಗಾಗಿ ಟ್ರಾನ್ಸ್ ಫಾರ್ಮರ್ ಆಳವಡಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.ರಾಜ್ಯದಲ್ಲಿ 4.50 ಲಕ್ಷ ಅಕ್ರಮ ಸಂಪರ್ಕ ಪಡೆದಿರುವ ಬೋರ್ ವೆಲ್ ಗಳಿವೆ. ಇವುಗಳ ವಿದ್ಯುತ್ ಸಂಪರ್ಕವನ್ನು ಸಕ್ರಮ ಗೊಳಿಸಬೇಕಾಗಿದೆ. ಹೀಗಾಗಿ ವಿದ್ಯುತ್ ಲೈನ್ ನಿಂದ 500 ಮೀ. ಒಳಗಡೆ ಇರುವ ಕೊಳವೆ ಬಾವಿಗಳಿಗೆ ಸಂಪರ್ಕ ಸಕ್ರಮ ಗೊಳಿಸಲಾಗುವುದು. 500 ಮೀ. ಗಿಂತ ದೂರ ಇರುವ ಕೊಳವೆ ಬಾವಿಗಳಿಗೆ ಕುಸುಮ್- ಬಿ ಯೋಜನೆ ಅಡಿ ಸೌರ ವಿದ್ಯುತ್ ಶಕ್ತಿ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಶೇ. 50 ರಷ್ಟು ಹಾಗೂ ಕೇಂದ್ರ ಸರ್ಕಾರದಿಂದ ಶೇ. 20 ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಫಲಾನುಭವಿಗಳು ಶೇ. 20 ರಷ್ಟು ಹಣ ಪಾವತಿಸಬೇಕಾಗುತ್ತದೆ ಎಂದು ವಿವರಿಸಿದರು.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂಧನ ಇಲಾಖೆ ಪ್ರಗತಿ ಪರಿಶೀಲನ ಸಭೆ ನಡೆಸಿದ್ದೇನೆ. ಎಲ್ಲಿಯೂ ಟ್ರಾನ್ಸ್ ಫಾರ್ಮರ್ಗಳ ಕೊರತೆ ಇರುವ ಬಗ್ಗೆ ಮಾಹಿತಿ ಬಂದಿಲ್ಲ. ಜನರಿಗೆ ಸಮರ್ಪಕವಾಗಿ ವಿದ್ಯುತ್ ಒದಗಿಸುವುದು ಇಂಧನ ಇಲಾಖೆ ಗುರಿಯಾಗಿದೆ ಎಂದರು.ಚಿಕ್ಕಮಗಳೂರು ನಗರದಲ್ಲಿ ರಸ್ತೆಗಳಲ್ಲಿ ಗುಂಡಿ ಬಿದ್ದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಪೈಪ್ ಲೈನ್ ಅಳವಡಿಕೆ ಕಾಮ ಗಾರಿ ನಡೆಯುತ್ತಿರುವುದರಿಂದ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಕೂಡಲೇ ರಸ್ತೆ ಕಾಮಗಾರಿ ಕೈಗೊಳ್ಳಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಶಾಸಕ ಎಚ್. ಡಿ.ತಮ್ಮಯ್ಯ ಮಾತನಾಡಿ, ನಗರದಲ್ಲಿ ಯುಜಿಡಿ ಕಾಮಗಾರಿ ಹಾಗೂ ಅಮೃತ್ ಯೋಜನೆ ಕಾಮಗಾರಿ ಕಳೆದ ಹತ್ತು ವರ್ಷಗಳಿಗಿಂತಲೂ ಹಿಂದಿನಿಂದ ನಡೆಯುತ್ತಿವೆ. ಆದರೆ ಇದುವರೆಗೆ ಕಾಮಗಾರಿ ಮುಕ್ತಾಯಗೊಂಡಿಲ್ಲ. ಇದು ರಸ್ತೆಯ ಅವ್ಯವಸ್ಥೆಗೆ ಕಾರಣವಾಗಿದೆ. ಈಗಾಗಲೇ ನಗರದ ರಸ್ತೆಗಳ ಅಭಿವೃದ್ಧಿಗಾಗಿ ಅಲ್ಪಸಂಖ್ಯಾತರ ಇಲಾಖೆಯಿಂದ ನಾಲ್ಕು ಕೋಟಿ ವಿಶೇಷ ಅನುದಾನ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಅವರ ಒಂದು ಕೋಟಿ ಅನುದಾನ ದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಇದಲ್ಲದೆ ನಗರದ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ₹10 ಕೋಟಿ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರ ಅಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. 26 ಕೆಸಿಕೆಎಂ 5ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಾಸಕ ಎಚ್.ಡಿ. ತಮ್ಮಯ್ಯ, ಡಿಸಿ ಮೀನಾ ನಾಗರಾಜ್ ಇದ್ದರು.