- ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟೀಯ ಜಂತು ಹುಳು ನಿವಾರಣಾ ದಿನಾಚರಣೆ
ಜಂತುಹುಳುಗಳು ಮಕ್ಕಳ ಆರೋಗ್ಯಕ್ಕೆ ಮಾರಕವಾಗದಿರಲಿ ಎಂದು ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು ಕರೆ ನೀಡಿದರು.
ಮಂಗಳವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಾಯಕ ಸರ್ಕಾರಿ ಅಭಿಯೋಜನ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಇನ್ನರ್ ವೀಲ್ ಸಂಸ್ಥೆ ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಮತ್ತು ಸೈಬರ್ ಕ್ರೈಂ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಂತುಹುಳುಗಳು ಪರಾವಲಂಬಿಯಾಗಿದ್ದು ಮನುಷ್ಯರ ಹೊಟ್ಟೆಗೆ ಸೇರಿ ಮಾನವರಿಗೆ ಅಪೌಷ್ಟಿಕತೆ ಮತ್ತು ರಕ್ತ ಹೀನತೆ ಉಂಟುಮಾಡುತ್ತದೆ. 6 ತಿಂಗಳಿಗೆ ಒಮ್ಮೆ ಜಂತು ಹುಳು ನಿವಾರಕ ಮಾತ್ರೆ ಸೇವಿಸಿದರೆ ಆರೋಗ್ಯದಿಂದ ಜೀವಿಸಲು ಸಾಧ್ಯ ಎಂದರು.ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಸೈಬರ್ ಕ್ರೈಂ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು. ಪ್ರತಿ ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅರಿವು ಪಡೆದು ಸಮಾಜದಲ್ಲಿ ಅಹಿತಕರ ಘಟನೆ ನಡೆಯದಂತೆ ಉತ್ತಮ ಆರೋಗ್ಯಕರ ಜೀವನ ನಡೆಸಬೇಕು. ಜೀತ ಪದ್ಧತಿ ತೊಲಗಿಸಲು ಎಲ್ಲರೂ ಕೈಜೋಡಿಸಲು ಕರೆ ನೀಡಿದರು. ಸರ್ಕಾರಿ ಆಸ್ಪತ್ರೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಮಹೇಂದ್ರಕಿರೀಟಿ ಮಾತನಾಡಿ, ಫೆ.10 ರಂದು ರಾಷ್ಟ್ರಾದಾ ದ್ಯಂತ ರಾಷ್ಟ್ರೀಯ ಜಂತುಹುಳು ನಿವಾರಣ ದಿನವನ್ನಾಗಿ ಆಚರಿಸಲಾಗುತ್ತಿದೆ. ಒಂದು ವರ್ಷದಿಂದ 19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಮಾತ್ರೆ ನೀಡುವ ಮೂಲಕ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾ ಡಿಸುವ ಅಭಿಯಾನವನ್ನು ಸರ್ಕಾರ ಹಮ್ಮಿಕೊಂಡಿದೆ. ಪ್ರತಿ ಆರು ತಿಂಗಳಿಗೆ ಒಮ್ಮೆ ಎಲ್ಲರೂ ಜಂತುಹುಳು ನಿವಾರಣ ಮಾತ್ರೆ ತೆಗೆದುಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಕ್ಷೇತೇರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ಮಾತನಾಡಿ, ವಿದ್ಯಾರ್ಥಿಗಳು ನೈತಿಕತೆ ಉಳಿಸಿಕೊಂಡು, ಪೋಷಕರ ಮಾರ್ಗದರ್ಶನದಂತೆ ನಿರ್ಧಿಷ್ಟ ಗುರಿ ಹೊಂದಿ ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು. ಸರ್ಕಾರದ ಎಲ್ಲಾ ಕಾರ್ಯಕ್ರಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಾಯವಾಗಲಿದೆ ಎಂದರು. ವಕೀಲ ಕಾರ್ತಿಕೇಯನ್ ಸೈಬರ್ ಕ್ರೈಂ ಅಪರಾಧಗಳ ಬಗ್ಗೆ ಮಾಹಿತಿ ನೀಡಿದರು.ತಾಲೂಕು ವಕೀಲರ ಸಂಘದ ಅಧ್ಯಕ್ಷ ಜಯಪ್ರಕಾಶ್, ಸಹಾಯಕ ಸರ್ಕಾರಿ ಅಭಿಯೋಜಕ ಜಿ.ಬಿ.ನೇಕಾರ್ ಮಾತನಾಡಿದರು.ಕಟ್ಟಿನಮನೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ವಿನಯ್, ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಕ್ಷಮ, ಶಿಕ್ಷಣ ಇಲಾಖೆ ಸೇವ್ಯಾನಾಯಕ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಭವ್ಯಸಂತೋಷ್, ಕಾರ್ಯದರ್ಶಿ ನೀತಾಪ್ರದೀಪ್, ಸದಸ್ಯೆ ಡಾ.ಸ್ವಪ್ನಾಲಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ,ಆಪ್ತ ಸಮಾಲೋಚಕಿ ನಾಗಲತಾ, ತಾಲೂಕು ಹಿರಿಯ ಪ್ರಾಥಮಿಕ ಸುರಕ್ಷತಾ ಅಧಿಕಾರಿ ಡೈಸಿ ಇದ್ದರು.ಈ ಸಂದರ್ಭದಲ್ಲಿ ಮಕ್ಕಳಿಗೆ ಜಂತುಹುಳು ನಿವಾರಣ ಮಾತ್ರೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.