ಕನ್ನಡಪ್ರಭ ವಾರ್ತೆ ತುಮಕೂರುಮಹಿಳೆಯರು ಶುಚಿತ್ವಕ್ಕೆ ಒತ್ತು ನೀಡುವ ಮೂಲಕ ದೈಹಿಕ ಆರೋಗ್ಯ ಕಾಪಾಡಿಕೊಳ್ಳುಬೇಕು. ಮಾನಸಿಕ ಖಿನ್ನತೆಗೆ ಒಳಗಾಗದೇ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸದಾ ಸಿದ್ಧರಿರಬೇಕು ಎಂದು ಸ್ತ್ರೀರೋಗ ತಜ್ಞೆ ಡಾ. ಗಿರಿಜಾ ಸಂಜಯ್ ತಿಳಿಸಿದರು.
ಹೆಣ್ಣು ಮಕ್ಕಳಿಗೆ ಮುಟ್ಟು, ಮತ್ತು ಋತುಚಕ್ರದ ಬಗ್ಗೆ ಕಿಳರಿಮೆ, ಹಿಂಜರಿಕೆ ಬೇಡ. ಆ ಸಂದರ್ಭಗಳಲ್ಲಿ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನವಹಿಸಬೇಕು. ಆರೋಗ್ಯದ ಬಗೆಗಿನ ನಿರ್ಲಕ್ಷ್ಯ ಭವಿಷ್ಯದಲ್ಲಿ ದೈಹಿಕ ಸಮಸ್ಯೆಗಳಿಗೆ ದಾರಿ ಮಾಡಿಕೊಟ್ಟಂತೆ ಎಂದರು.
ಸ್ತ್ರೀ ರೋಗ ತಜ್ಞೆ ಡಾ. ನಳಿನಿ ಮಾತನಾಡಿ, ಋತುಚಕ್ರ ಮತ್ತು ಇತರೆ ಮಹಿಳಾ ಸಂಬಂಧಿ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಮಾಣದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಕೆ ಕಡಿಮೆ ಮಾಡಬೇಕು. ಪ್ಲಾಸ್ಟಿಕ್ ಉತ್ಪನ್ನಗಳ ಹೆಚ್ಚಿನ ಬಳಕೆಯೂ ಮಹಿಳೆಯರಿಗೆ ಭವಿಷ್ಯದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ನಾಚಿಕೆ, ಅಂಜಿಕೆಯಿಂದ ಮಹಿಳೆಯರು ತಮ್ಮ ಆರೋಗ್ಯ ಸಮಸ್ಯೆಗಳ ಬಗ್ಗೆ ಯಾರೊಂದಿಗೂ ಹಂಚಿಕೊಳ್ಳದೇ ಇರುವುದು ಕೂಡ ಆಪತ್ತು ತರುವ ಸಾಧ್ಯತೆ ಹೆಚ್ಚಿದೆ ಎಂದರುಡಾ. ಅಪರ್ಣಾ ಮಾತನಾಡಿ, ವಿದ್ಯಾರ್ಥಿನಿಯರಿಗೆ ಶುಚಿತ್ಚ ಮತ್ತು ಆರೋಗ್ಯ ಕಾಳಜಿಯ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಯೌವನದಲ್ಲಿ ನಾವು ಹೇಗೆ ಆರೋಗ್ಯವನ್ನು ಕಾಪಾಡಿಕೊಳ್ಳುತ್ತೇವೆ ಎನ್ನವುದರ ಮೇಲೆ ನಮ್ಮ ಭವಿಷ್ಯದ ಆರೋಗ್ಯ ನಿಂತಿದೆ. ಹೆಣ್ಣು ಮಕ್ಕಳು ಎಂತಹ ಸಂದರ್ಭದಲ್ಲೂ ತಮ್ಮ ಆರೋಗ್ಯ ಸಮಸ್ಯೆಗಳನ್ನು ಬಚ್ಚಿಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ವಿವಿ ಕಲಾ ಕಾಲೇಜಿನ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥೆ ಡಾ .ಸಿ. ಶೋಭಾ, ಸ್ತ್ರೀ ರೋಗ ತಜ್ಞೆ ಡಾ. ಅನಿತಾ ಉಪಸ್ಥಿತರಿದ್ದರು.