ಹಗರಿಬೊಮ್ಮನಹಳ್ಳಿ: ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಪ್ರಬಲ ಸಂಘಟನೆ ಮೂಲಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಜೆಡಿಎಸ್ನೊಂದಿಗೆ ಚುನಾವಣೆ ಮೈತ್ರಿ ಇದ್ದರೂ ಕ್ಷೇತ್ರದ ಮತದಾರರಲ್ಲಿ ಬಿಜೆಪಿಗೆ ಹೆಚ್ಚಿನ ಒಲವಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವು ಸುಲಭವಾಗಲಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಜಿಲ್ಲಾ ಉಪಾಧ್ಯಕ್ಷ ಮತ್ತು ಈ ಭಾಗದ ಮುಖಂಡರಾದ ಬಲ್ಲಾಹುಣಸಿ ರಾಮಣ್ಣನವರ ನೇತೃತ್ವದಲ್ಲಿ ಹೆಚ್ಚಿನ ಶ್ರಮ ವಹಿಸಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಬೇಕು ಎಂದು ಸಲಹೆ ನೀಡಿದರು.
ಪಕ್ಷ ಯಾವತ್ತಿಗೂ ಕಾರ್ಯಕರ್ತರನ್ನು ಕೈ ಬಿಡುವುದಿಲ್ಲ. ಪಕ್ಷದ ಸಂಘಟನೆ ಜವಾಬ್ದಾರಿ ನಿರ್ವಹಿಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವು ಸಾಧಿಸುವಂತೆ ಬಲ್ಲಾಹುಣಸಿ ರಾಮಣ್ಣ ಅವರಿಗೆ ಸೂಚಿಸಿದರು. ಇದೇ ವೇಳೆ ವಿಜಯೇಂದ್ರ ಅವರನ್ನು ಮುಖಂಡರು ಮತ್ತು ಕಾರ್ಯಕರ್ತರು ಶಾಲು ಹೊದಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ವಿಭಾಗ ಸಹ ಪ್ರಭಾರಿ ಚನ್ನಬಸವನಗೌಡ ಪಾಟೀಲ್, ಶಾಸಕ ಕೃಷ್ಣಾನಾಯ್ಕ, ನಗರ ಘಟಕದ ಅಧ್ಯಕ್ಷ ಮಂಜುನಾಥ್ ಪಾಟೀಲ್, ಮುಖಂಡರು, ಕಾರ್ಯಕರ್ತರು ಇದ್ದರು.