ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡ ಸ್ಥಳಕ್ಕೆ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಭೇಟಿ ನೀಡಿ ಪರಿಶೀಲಿಸಿದರು.
ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನದ ಸಂಗತಿ. ಕರ್ತವ್ಯದಲ್ಲಿದ್ದ ವೈದ್ಯರು ಮತ್ತು ಸಿಬ್ಬಂದಿ ಸಮಯಪ್ರಜ್ಞೆಯಿಂದ ಕಾರ್ಯ ನಿರ್ವಹಿಸಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ನಿಮ್ಮೆಲ್ಲರ ಸಮಯಪ್ರಜ್ಞೆಗೆ ಅಭಿನಂದಿಸುತ್ತೇನೆ ಎಂದು ಶ್ಲಾಘಿಸಿದರು.
ಅವಘಡದಿಂದ ಹಾನಿಗೊಳಗಾದ ಆಪರೇಷನ್ ಥಿಯೇಟರ್ ಹಾಗೂ ವೈದ್ಯಕೀಯ ಉಪಕರಣಗಳು ಲಕ್ಷಾಂತರ ರು. ಮೌಲ್ಯದ್ದಾಗಿದ್ದು, ಘಟನೆಯಲ್ಲಿ ಬಹುಮೌಲ್ಯದ ವೈದ್ಯಕೀಯ ಉಪಕರಣ, ಸಲಕರಣೆಗಳು ನಾಶವಾಗಿವೆ. ಇಡೀ ಘಟನೆಗೆ ನಿಖರ ಕಾರಣ ಪತ್ತೆಹಚ್ಚಿ ಸಮಗ್ರ ತನಿಖೆ ನಡೆಸುವತ್ತ ಅಧಿಕಾರಿಗಳು ಮುಂದಾಗಬೇಕು. ಜಿಲ್ಲಾ ಸಚಿವರು, ಆರೋಗ್ಯ ಸಚಿವರಿಗೂ ಈ ಬಗ್ಗೆ ಒತ್ತಾಯಿಸುತ್ತೇನೆ ಎಂದು ತಿಳಿಸಿದರು.ಆಸ್ಪತ್ರೆಯಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆ ಮತ್ತಷ್ಟು ಬಲಪಡಿಸಿ. ಇಂತಹ ಘಟನೆಗಳು ಪುನಃ ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಆದಷ್ಟು ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸೂಚಿಸಿದರು.