ನೌಕರರು ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಿ

KannadaprabhaNewsNetwork |  
Published : Jul 10, 2024, 12:33 AM IST
ಕಾರ್ಯಕ್ರಮದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಮಾತನಾಡಿದರು. | Kannada Prabha

ಸಾರಾಂಶ

ವಿವಿಧ ಇಲಾಖೆಗಳಿಂದ ಜಾರಿಯಾಗಿರುವ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಲಿ. ಈ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವಾಗ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು.

ಗದಗ: ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು. ಅವುಗಳನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನೌಕರನ ನೈತಿಕ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ್ ಭಟ್ ಹೇಳಿದರು.

ಅವರು ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಕರಣಗಳ ವಿಲೇವಾರಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಕುರಿತು ಸಭೆ ಉದ್ಘಾಟಿಸಿ ಆ ನಂತರ ನಡೆದ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿವಿಧ ಇಲಾಖೆಗಳಿಂದ ಜಾರಿಯಾಗಿರುವ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಲಿ. ಈ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವಾಗ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು. ಒಂದು ವೇಳೆ ಸೌಲಭ್ಯ ತಲುಪಿಸುವಾಗ ವಿನಾಕಾರಣ ವಿಳಂಬ ಮಾಡಿದರೆ ಅಥವಾ ಸೌಲಭ್ಯ ಒದಗಿಸದೇ ಇದ್ದಲ್ಲಿ ಅಂತಹ ವ್ಯಕ್ತಿಯ ಹಕ್ಕುಗಳನ್ನು ಮೊಟಕುಗೊಳಿಸಿದಂತಾಗಿ ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ. ನೋಂದ ವ್ಯಕ್ತಿಗಳು ಪ್ರಕರಣ ದಾಖಲಿಸಿದ ಮೇಲೆ ಶೀಘ್ರದಲ್ಲಿ ಇತ್ಯರ್ಥವಾಗಬೇಕು. ಪ್ರಕರಣ ಇತ್ಯರ್ಥಪಡಿಸುವಾಗ ಸಂಬಂಧಿತ ಅಧಿಕಾರಿಗಳಿಂದ ವರದಿ ಪಡೆದು ತನಿಖೆ ನಡೆಸಲಾಗುವುದು ಎಂದರು.

ಸಾರ್ವಜನಿಕರು ಸರ್ಕಾರಿ ಇಲಾಖೆಗಳಿಗೆ ಮಾಹಿತಿ ಕೇಳಿದಾಗ ಕೆಲವೊಂದು ಸಂದರ್ಭದಲ್ಲಿ ಕಾನೂನು ತೊಡಕುಗಳು ಉಂಟಾಗಿದ್ದರೂ ಸಂಯಮದಿಂದ ಮಾತನಾಡಿಸಿ, ಸಮಸ್ಯೆ ಬಗೆಹರಿಸಿಕೊಳ್ಳಬೇಕಾಗುತ್ತದೆ. ಕೇಳಿದ ಮಾಹಿತಿ ಗನುಗುಣವಾಗಿ ಶೀಘ್ರವಾಗಿ ವರದಿ ಆಯೋಗಕ್ಕೆ ಸಲ್ಲಿಸಬೇಕು. ಕೆಲಸದೊತ್ತಡದಲ್ಲಿಯೂ ಸಹ ಸೌಜನ್ಯದಿಂದ ವರ್ತಿಸಬೇಕಾಗುತ್ತದೆ. ದೂರುಗಳು ಬಂದಾಗ ಸೂಕ್ತ ಮಾಹಿತಿ ಒದಗಿಸಿ ಇನ್ನಷ್ಟು ದೂರುಗಳು ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಈ ಮೊದಲು ದೂರು ಕೊಟ್ಟವರು ಪರಿಹಾರಕ್ಕಾಗಿ ಬೆಂಗಳೂರಿಗೆ ಹೋಗುವ ಪರಿಪಾಠ ಇತ್ತು. ಆದರೆ ಇದೀಗ ಜಿಲ್ಲಾ ಮಟ್ಟದಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳು ಯಾವ ರೀತಿ ಸಾರ್ವಜನಿಕರಿಗೆ ತಲುಪುತ್ತಿವೆ ಎನ್ನುವುದರ ಕುರಿತು ಪರಿಶೀಲನೆ ನಡೆಸಲು ವಿವಿಧ ಜಿಲ್ಲೆಗಳಲ್ಲಿ ಆಯೋಗದಿಂದ ಪ್ರವಾಸ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ವಂಟಿಗೋಡಿ ಮಾತನಾಡಿ, ಒಬ್ಬ ವ್ಯಕ್ತಿ ಜನನದಿಂದ ಬರುವ ಎಲ್ಲ ಹಕ್ಕುಗಳು ಮಾನವ ಹಕ್ಕುಗಳಾಗುತ್ತದೆ. ಬದುಕುವ ಹಕ್ಕು,ಸಮಾನತೆ ಹಕ್ಕು, ಗೌರವಯುತವಾಗಿ ಬಾಳುವ ಹಕ್ಕು,ಗೌರವಯುತ ಹುದ್ದೆ ಅಲಂಕರಿಸುವ ಹಕ್ಕು, ಅಭಿವ್ಯಕ್ತಿ ಹಕ್ಕು ಈ ಮೊದಲಾದ ಹಕ್ಕುಗಳೇ ಸಂವಿಧಾನದ ಮೂಲಭೂತ ಹಕ್ಕುಗಳನ್ನಾಗಿ ಮಾಡಲಾಗಿದೆ. ಈ ಹಕ್ಕುಗಳಿಗೆ ಧಕ್ಕೆಯಾದಾಗ ಅವುಗಳನ್ನು ಮೊಟಕುಗೊಳಿಸಿದಂತಾಗುತ್ತದೆ. ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಆಯಾ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲೆಯ ವಿವಿಧ ಇಲಾಖೆಯ ಹಾಸ್ಟೆಲ್‍ಗಳಲ್ಲಿನ ವಿದ್ಯಾರ್ಥಿಗಳಿಗೆ ಆಸ್ಪತ್ರೆಗಳಲ್ಲಿನ ರೋಗಿಗಳಿಗೆ ಹಾಗೂ ಕಾರಾಗೃಹದಲ್ಲಿನ ಬಂಧಿಗಳಿಗೆ ಮೂಲಭೂತ ಸೌಲಭ್ಯ ಒದಗಿಸುವುದು ಇಲಾಖೆಯ ಮುಖ್ಯಸ್ಥರ ಆದ್ಯ ಕರ್ತವ್ಯವಾಗಿದೆ. ಅದೇ ರೀತಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರಿಗೂ ಸಹ ಮೂಲಭೂತ ಸೌಲಭ್ಯ ಒದಗಿಸಬೇಕಾಗುತ್ತದೆ. ಕಾರ್ಮಿಕ ಅಧಿಕಾರಿಗಳು ಅಂತಹ ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು. ಅಲ್ಲಿ ಏನಾದರೂ ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ಸಂಬಂಧಿತ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಪೊಲೀಸ್‌ ಇಲಾಖೆ ಹಾಗೂ ವಸತಿ ನಿಲಯಕ್ಕೆ ಸಂಬಂಧಿತ ಪ್ರಕರಣಗಳ ಕುರಿತು ಇಲಾಖೆಯವರು ಆಯೋಗಕ್ಕೆ ವರದಿ ಸಲ್ಲಿಸುವಾಗ ಅಲ್ಲಿನ ಸಿಸಿ ಟಿವಿ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ ಪೂಜಾರ್ ಮಾತನಾಡಿ, ಗದಗ ಜಿಲ್ಲೆಯಲ್ಲಿ ಮಾನವ ಹಕ್ಕು ಉಲ್ಲಂಘನೆಯಾದ 14 ಪ್ರಕರಣಗಳು ವಿವಿಧ ಹಂತದ ತನಿಖೆಯಲ್ಲಿವೆ. ಮಾನವೀಯತೆಯೇ ಮಾನವ ಹಕ್ಕು ಆಯೋಗದ ಧ್ಯೇಯವಾಗಿದ್ದು ಕಾನೂನಿನಡಿ ಸರ್ವರಿಗೂ ಸಮಾನ ಹಕ್ಕು ಒದಗಿಸಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಯ ಆದ್ಯ ಕರ್ತವ್ಯವಾಗಿದೆ ಎಂದರು.

ಈ ವೇಳೆ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಎ.ದಿನೇಶ ಸಂಪತ್‍ರಾಜ್, ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಎಂ.ಬಿ. ಸಂಕದ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎಸ್.ಜಿ. ಪಲ್ಲೇದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಇದ್ದರು. ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ. ಎಂ. ಸ್ವಾಗತಿಸಿದರು. ಪ್ರಾ.ಬಿ.ಜಿ. ಗಿರಿತಿಮ್ಮಣ್ಣವರ ನಿರ್ವಹಿಸಿದರು. ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ ವಂದಿಸಿದರು. ಸಂವಾದದ ನಂತರ ಮಾನವ ಹಕ್ಕು ಆಯೋಗಕ್ಕೆ ಸಲ್ಲಿಸಿದ ಜಿಲ್ಲೆಯ ಒಟ್ಟು 14 ಪ್ರಕರಣಗಳ ವಿಚಾರಣೆ ನಡೆಸಿದರು. ಇದರಲ್ಲಿ ಪೊಲೀಸ್‌ ಇಲಾಖೆ, ಗದಗ-ಬೆಟಗೇರಿ ನಗರಸಭೆ, ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿತ ಪ್ರಕರಣಗಳ ವಿಚಾರಣೆ ಜರುಗಿತು. ನಂತರ ಸಾರ್ವಜನಿಕರು ಇದೇ ಸಂದರ್ಭದಲ್ಲಿ ತಮ್ಮ ಅಹವಾಲು ಸಲ್ಲಿಸಿದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ