ಚನ್ನಪಟ್ಟಣ: ಆಟೋಟಗಳಲ್ಲಿ ತೊಡಗಿಸಿಕೊಂಡ ವಿದ್ಯಾಭ್ಯಾಸ ಮಾಡಬೇಕಾದ ಅಪ್ರಾಪ್ತ ಮಕ್ಕಳನ್ನು ಕಾರ್ಮಿಕರನ್ನಾಗಿಸಿ ದುಡಿಸಿಕೊಳ್ಳುವುದು ಅಪರಾಧವಾಗಿದೆ. ಇಂಥ ವಿವಿಧ ಕಾರಣಗಳಿಂದ ಶಾಲೆ ಬಿಟ್ಟು ಕೆಲಸದಲ್ಲಿ ತೊಡಗಿಸಿಕೊಂಡ ಮಕ್ಕಳಿಗೆ ವಿದ್ಯಾಭ್ಯಾಸ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ತಿಳಿಸಿದರು.
ಆಟ ಪಾಠಗಳಲ್ಲಿ ತೊಡಗಿಸಿಕೊಂಡು ಸುಂದರ ಭವಿಷ್ಯ ನಿರ್ಮಿಸಿಕೊಳ್ಳಬೇಕಾದ ಮುಗ್ದ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವುದು ಅಪರಾಧ. ತಮ್ಮ ಮನೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ಕೆಲಸಕ್ಕೆ ಸೇರಿಸಿ ದುಡಿಸುವುದು ಸರಿಯಲ್ಲ. ಇದು ಮಕ್ಕಳ ಭವಿಷ್ಯಕ್ಕೆ ಹಾಗೂ ನಿಮ್ಮ ಕುಟುಂಬದ ಭವಿಷ್ಯಕ್ಕೂ ಮಾರಕ ಎಂಬುದನ್ನು ಪೋಷಕರು ಅರಿಯಬೇಕು ಎಂದರು.
ಅಪ್ರಾಪ್ತ ಮಕ್ಕಳನ್ನು ನೌಕರಿಗೆ ಸೇರಿಸಿಕೊಳ್ಳುವುದರ ಜತೆಗೆ ಕೆಲಸಕ್ಕೆ ಸೇರಿಸಿಕೊಳ್ಳುವುದು ಅಪರಾಧ. ಅಪ್ರಾಪ್ತರು ಜೀತ ಪದ್ಧತಿಯಲ್ಲಿ ಇರುವುದು, ಗ್ಯಾರೇಜ್, ರೇಷ್ಮೆಗಿರಣಿ, ಹೋಟೆಲ್ ಹಾಗೂ ಇತರೆ ಕಡೆ ಕೆಲಸ ಮಾಡುವವರು ಕಂಡು ಬಂದರೆ ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆಗೆ ಅಥವಾ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.ತಾಲೂಕು ವಕೀಲರ ಸಂಘದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಸುನೀಲ್ರಾಜ್ ಅರಸು ಮಾತನಾಡಿ, ಜೀತ ಪದ್ಧತಿ ಸಾಮಾಜಿಕ ಪಿಡುಗಾಗಿದ್ದು, ಕಠಿಣ ಕಾನೂನು ಕ್ರಮಗಳ ನಂತರ ತಗ್ಗಿದೆ. ಅದರಲ್ಲೂ ಆಪ್ರಾಪ್ತ ಮಕ್ಕಳನ್ನು ಜೀತಕ್ಕೆ ಬಳಸಿಕೊಳ್ಳುವುದು ಮಹಾಪರಾಧವಾಗಿದೆ ಎಂದು ಜೀತ ಪದ್ಧತಿ ವಿರುದ್ಧ ಇರುವ ಕಾನೂನುಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಸ್ಥಾಪಕ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯಚಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಕವಿತಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪೊಟೋ೧೦ಸಿಪಿಟಿ೧:ಚನ್ನಪಟ್ಟಣದ ಬಾಲು ಪಬ್ಲಿಕ್ ಶಾಲೆಯಲ್ಲಿ ಕಾನೂನು ಅರಿವು, ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆ ಆಚರಿಸಲಾಯಿತು.