ಒತ್ತುವರಿ ಕೇಸ್‌: ಎಚ್ಡಿಕೆಗೆ ತಾತ್ಕಾಲಿಕ ರಿಲೀಫ್‌

KannadaprabhaNewsNetwork |  
Published : Jun 19, 2025, 11:49 PM ISTUpdated : Jun 20, 2025, 10:03 AM IST
ಎಚ್‌.ಡಿ.ಕುಮಾರಸ್ವಾಮಿ | Kannada Prabha

ಸಾರಾಂಶ

ಎಚ್‌.ಡಿ.ಕುಮಾರಸ್ವಾಮಿ ಅವರು ಒತ್ತುವರಿ ಮಾಡಿದ್ದಾರೆ ಎನ್ನಲಾದ 14 ಎಕರೆ ಜಮೀನನ್ನು ಒತ್ತುವರಿ ತೆರವುಗೊಳಿಸುವ ಸಂಬಂಧ  ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

  ಬೆಂಗಳೂರು :  ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಒತ್ತುವರಿ ಮಾಡಿದ್ದಾರೆ ಎನ್ನಲಾದ 14 ಎಕರೆ ಜಮೀನನ್ನು ಒತ್ತುವರಿ ತೆರವುಗೊಳಿಸುವ ಸಂಬಂಧ ಹಿರಿಯ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ.

ಎಸ್‌ಐಟಿ ರಚನೆ ಅಕ್ರಮ ಎಂದು ಆಕ್ಷೇಪಿಸಿ ಎಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್‌.ಇಂದಿರೇಶ್‌ ಅವರ ಪೀಠ ಈ ಆದೇಶ ಮಾಡಿದೆ. ಪ್ರತಿವಾದಿಗಳಾಗಿರುವ ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ರಾಮನಗರ ತಹಸೀಲ್ದಾರ್‌ಗೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ ಅರ್ಜಿ ವಿಚಾರಣೆ ಮುಂದೂಡಿತು.

ರಾಜ್ಯ ಸರ್ಕಾರ ಜ.28ರಂದು ಎಸ್‌ಐಟಿ ರಚಿಸಿರುವ ಆದೇಶದ ನಂತರ ಔಪಚಾರಿಕವಾಗಿ ಅಧಿಸೂಚನೆ ಪ್ರಕಟಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ರಚಿಸಿರುವ ಆದೇಶ ಮತ್ತು ನಂತರ ಕುಮಾರಸ್ವಾಮಿ ಅವರಿಗೆ ಜಾರಿ ಮಾಡಿರುವ ಸಮನ್ಸ್‌ಗೆ ಮುಂದಿನ ವಿಚಾರಣೆ ವರೆಗೆ ತಡೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಕುಮಾರಸ್ವಾಮಿ ಪರ ವಾದಿಸಿದ ಹಿರಿಯ ವಕೀಲ ಉದಯ್‌ ಹೊಳ್ಳ ಅವರು, ಎಸ್‌ಐಟಿ ರಚಿಸಿದ ಬಳಿಕ ಅಧಿಸೂಚನೆ ಹೊರಡಿಸದೆ ಕುಮಾರಸ್ವಾಮಿ ಅವರಿಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಹೀಗಾಗಿ, ಎಸ್‌ಐಟಿ ರಚನೆ ಆದೇಶ ಮತ್ತು ಅರ್ಜಿದಾರರ ವಿರುದ್ಧ ಮೇ 29ರಂದು ನೀಡಿರುವ ಸಮನ್ಸ್‌ ರದ್ದುಪಡಿಸಬೇಕು ಎಂದು ಕೋರಿದರು. ಕುಮಾರಸ್ವಾಮಿ ಪರವಾಗಿ ವಕೀಲ ಎ.ವಿ.ನಿಶಾಂತ್‌ ವಕಾಲತ್ತು ವಹಿಸಿದ್ದಾರೆ.

ಕೇತಗಾನಹಳ್ಳಿಯ ಸರ್ವೇ ನಂಬರ್‌ 8, 9, 10, 16, 17 ಮತ್ತು 79ರಲ್ಲಿನ ಸುಮಾರು 14 ಎಕರೆ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಒತ್ತುವರಿ ತೆರವುಗೊಳಿಸುವ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸೂಚಿಸಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ಜ.28ರಂದು ಸರ್ಕಾರ ಆದೇಶಿಸಿತ್ತು. ಸಮಿತಿ ರಚನೆಯನ್ನು ಪ್ರಶ್ನಿಸಿರುವ ಕುಮಾರಸ್ವಾಮಿ ಅವರು, ಸರ್ಕಾರ ಎಸ್‌ಐಟಿ ರಚಿಸಿ ಆದೇಶಿಸಿದ ಬಳಿಕ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ, ಎಸ್‌ಐಟಿ ರಚಿಸಿರುವ ಸರ್ಕಾರದ ಆದೇಶದ ನಂತರ ಕಂದಾಯ ಇಲಾಖೆಯ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳನ್ನು ಅಕ್ರಮ ಎಂಬುದಾಗಿ ಘೋಷಿಸಬೇಕು ಮತ್ತು ತಮ್ಮ ವಿರುದ್ಧ ಜಾರಿಗೊಳಿಸಿರುವ ಸಮನ್ಸ್‌ ರದ್ದುಪಡಿಸಬೇಕು ಎಂದು ಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ