ಅಕ್ರಮ ಮರಳು ಸಾಗಾಟ ತಡೆಗೆ ನಿಯಮ ಜಾರಿ

KannadaprabhaNewsNetwork |  
Published : Sep 25, 2024, 12:48 AM IST
ಪೋಟೋ: 24ಎಸ್‌ಎಂಜಿಕೆಪಿ08ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಅಕ್ರಮ ಗಣಿಗಾರಿಕೆ ಹಾಗೂ ಮರಳು ಸಾಗಾಣಿಕೆ, ದಾಸ್ತಾನು ತಡೆಗಟ್ಟುವ ಕುರಿತು ಜಿಲ್ಲೆಯಾದ್ಯಂತ ಏಕ ರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್‌ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ನಿಯಮವನ್ನು ಜಾರಿಗೊಳಿಸಲು ಆಯಾ ತಾಲೂಕುಗಳ ತಹಸೀಲ್ದಾರರು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ತಕ್ಷಣದ ಕ್ರಮ ಕೈಗೊಳ್ಳಲು ಸಮಿತಿ ರಚಿಸಿ, ವರದಿ ಪಡೆದು, ಸಕಾಲಿಕ ಕ್ರಮಗಳನ್ನು ಸೂಚಿಸಲಾಗಿದೆ ಎಂದು ತಿಳಿಸಿದರು.

ಅಕ್ರಮ ಗಣಿಗಾರಿಕೆ ಹಾಗೂ ಸ್ಥಳೀಯ ವಿರೋಧಗಳ ನಡುವೆಯೂ ಕ್ವಾರಿಗಳನ್ನು ನಡೆಸುತ್ತಿರುವ, ನಿಯಮ ಮೀರಿ ಕ್ವಾರಿಗಳನ್ನು ನಿರ್ವಹಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಪೂರ್ವದಲ್ಲಿ ಆಯಾ ಇಲಾಖೆಯ ಭೂವಿಜ್ಞಾನಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸುವಂತೆ ಸಲಹೆ ನೀಡಿದರು.

ಸರ್ಕಾರಿ ಇಲಾಖೆಗಳ ಕಟ್ಟಡ ನಿರ್ಮಾಣ, ಕಾಮಗಾರಿಗಳಿಗಾಗಿ ಮೀಸಲಿರಿಸಲಾದ ಕ್ವಾರಿಗಳಲ್ಲಿ ಬಳಸಲಾದ ಮರಳಿನ ಪ್ರಮಾಣವನ್ನು ಗಮನಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಂತಹ ಕ್ವಾರಿಗಳಲ್ಲಿ ಮರಳನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಹಲವು ದೂರುಗಳು ಕೇಳಿ ಬರುತ್ತಿವೆ. ಒಂದು ವೇಳೆ ಅಂತಹ ಪ್ರಮಾಣ ಎಸಗಿರುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಅಲ್ಲದೇ ಗಣಿ ಇಲಾಖೆಯ ಅಧಿಕಾರಿಗಳು ಕ್ವಾರಿ ನಿಗಧಿಪಡಿಸಿದ ಇಲಾಖೆಯ ಅಧಿಕಾರಿಗಳು ಬಳಸಿದ ಮರಳಲಿನ ಪ್ರಮಾಣ ಹಾಗೂ ಸರ್ಕಾರಕ್ಕೆ ಸಲ್ಲಿಸಿದ ರಾಯಧನದ ಮಾಹಿತಿ ಪಡೆದುಕೊಳ್ಳುವಂತೆಯೂ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈವರೆಗೆ ಸರ್ಕಾರದ ಇಲಾಖೆಗಳಿಗೆ ಕಾಯ್ದಿರಿಸಿದ ಕ್ವಾರಿಗಳಿಂದ ಮರಳನ್ನು ಪಡೆದ ಇಲಾಖೆಗಳ ಅಧಿಕಾರಿಗಳು ಎಂ-ಸ್ಯಾಂಡ್ ಬಳಸಿರುವ ಹಾಗೂ ಬಳಸದಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಿ, ಮುಂದಿನ ದಿನಗಳಲ್ಲಿ ಕೋರಿಕೆಯ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಡಿಸಿ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಗಳ ಗುತ್ತಿಗೆದಾರರು ಪಡೆದಿರುವ ಕ್ವಾರಿಗಳಲ್ಲಿ ಬಳಸಿರುವ ಮರಳಿನ ಪ್ರಮಾಣದ ಹಾಗೂ ಸಲ್ಲಿಸಿರುವ ರಾಯಧನದ ಕುರಿತು ಮಾಹಿತಿ ಪಡೆದುಕೊಳ್ಳುವುದಲ್ಲದೇ ಜಿಲ್ಲಾ ಟಾಸ್ಕ್‌ಫೋರ್ಸ್‍ನ ಅನುಮತಿಯಿಲ್ಲದೇ ನೆರೆಯ ಜಿಲ್ಲೆಗಳಿಗೆ ಸಾಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಸ್ಥಳೀಯ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಅಥವಾ ಕೃತಕ ಅಭಾವ ಸೃಷ್ಠಿಸದಂತೆ ವಿಶೇಷ ಗಮನಹರಿಸುವಂತೆ ತಿಳಿಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಅಬ್ಬಲಗೆರೆ ಗ್ರಾಮ ಹಾಗೂ ಹುಣಸೋಡು ಮತ್ತಿತರ ಸುತ್ತಮುತ್ತಲ ಗ್ರಾಮಗಳ ವಸತಿ ಯೋಜನೆ ಮತ್ತು ಇನ್ನಿತರೆ ಉದ್ದೇಶಗಳಿಗೆ ಭೂಪರಿವರ್ತನೆ ಅಥವಾ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡದಂತೆ ಸ್ಥಳೀಯ ಜನಪ್ರತಿನಿಧಿಗಳು ಆಕ್ಷೇಪಣೆ ಸಲ್ಲಿಸಿದ್ದು, ಸಂಬಂಧಿಸಿದ ಇಲಾಖಾಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಹಿರಿಯ ಭೂವಿಜ್ಞಾನಿ ಪಿ.ಕೆ.ನಾಯ್ಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಜೆಸ್ಟಿಕ್‌ನಲ್ಲಿ ಸಿಂಗಾಪುರ ಮೀರಿಸುವ ಪ್ರಾಜೆಕ್ಟ್‌ ಮೆಜೆಸ್ಟಿಕ್‌
ಬೀಗ ಹಾಕಿದ ಮನೆಗಳಿಗೆ ಕನ್ನಹಾಕುತ್ತಿದ್ದ ಐವರು ಕಳ್ಳರ ಸೆರೆ