ಚನ್ನಪಟ್ಟಣ: ಯಾವುದೇ ಸ್ಪರ್ಧೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ಅದರಲ್ಲೂ ರಸಪ್ರಶ್ನೆಗಳಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾಬವೃದ್ಧಿಯಾಗಲಿದೆ ಎಂದು ಬಾಲು ಪಬ್ಲಿಕ್ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯ ಚೆಟ್ಟಿ ತಿಳಿಸಿದರು.
ಜಿಲ್ಲೆಯ ಎಲ್ಲ ತಾಲೂಕಿನ ಶಾಲೆಗಳ ಕಾರ್ಯದರ್ಶಿಗಳು ಹಾಗೂ ಹಿತೈಷಿಗಳ ಸಹಕಾರದಿಂದ ಈ ಬಾರಿಯ ರಸಪ್ರಶ್ನೆ ಕಾರ್ಯಕ್ರಮ ಯಶಸ್ವಿಯಾಗಿದೆ. ವಿದ್ಯಾರ್ಥಿಗಳು ಆಸಕ್ತಿಯಿಂದ ತಯಾರಿ ನಡೆಸಿ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಸೋಲು ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವುದು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬಾಲು ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿ ಬಾಲಸುಬ್ರಮಣ್ಯಂ ಮಾತನಾಡಿ, ರಸಪ್ರಶ್ನೆ ಕಾರ್ಯಕ್ರಮ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪೂರಕವಾಗುವ ಜತೆಗೆ ವಿದ್ಯಾರ್ಥಿಗಳಿಗೆ ಆಸಕ್ತಿದಾಯಕವಾಗಿಯೂ ಇರಬೇಕೆಂಬ ನಿಟ್ಟಿನಲ್ಲಿ ಕಳೆದ ಮೂರು ತಿಂಗಳಿನಿಂದ ಪ್ರಯತ್ನ ನಡೆಸಿ ಪ್ರಶ್ನೆಗಳನ್ನು ತಯಾರಿಸಲಾಗಿದೆ. ತಾಲೂಕು ಮಟ್ಟದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಿ ಅದರಲ್ಲಿ ವಿಜೇತರಾದ ತಂಡಗಳನ್ನು ಒಗ್ಗೂಡಿಸಿ ಜಿಲ್ಲಾಮಟ್ಟದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಿದ್ದು, ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ ಎಂದರು.ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮೊದಲ ಹಾಗೂ ಎರಡನೇ ಸ್ಥಾನ ಪಡೆದ ತಂಡಗಳಿಗೆ ನಗರದ ಚನ್ನಾಂಬಿಕ ಪಿಯು ಕಾಲೇಜು ಹಾಗೂ ಆಕ್ಸ್ಫರ್ಡ್ ಕಾಲೇಜಿನಲ್ಲಿ ಶೇ.೧೦೦ರಷ್ಟು ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ದೊರೆಯಲಿದೆ. ಅಂತೆಯೇ ಎರಡರಿಂದ ಎಂಟನೇ ಸ್ಥಾನ ಗಳಿಸಿದ ತಂಡಗಳಿಗೆ ಶೇ.೫೦ರಷ್ಟು ರಿಯಾಯಿತಿ ದೊರೆಯಲಿದೆ ಎಂದು ಘೋಷಿಸಿದರು.
ಬಾಕ್ಸ್...........
ಬಾಲು ಪಬ್ಲಿಕ್ ಶಾಲೆ ಹಾಗೂ ದಿ ವೈಸ್ ಮಂಕಿ ಸಹಯೋಗದೊಂದಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮಾಗಡಿ ವಾಸವಿ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಮೊದಲ ಬಹುಮಾನ ಪಡೆದರೆ, ರಾಮನಗರದ ಶಾಂತಿನಿಕೇತನ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಹಾಗೂ ಚನ್ನಪಟ್ಟಣದ ದಿವ್ಯಚೇತನ ಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನ ಗಳಿಸಿದರು. ರಾಮನಗರದ ಹೋಲಿ ಕ್ರೆಸೆಂಟ್ ಶಾಲೆ, ಶಾಂತಿನಿಕೇತನ ಶಾಲೆ, ಚನ್ನಪಟ್ಟಣದ ಬಾಲು ಪಬ್ಲಿಕ್ ಶಾಲೆ, ಸ್ಪ್ರಿಂಗ್ಫೀಲ್ಡ್ ಪಬ್ಲಿಕ್ ಶಾಲೆ, ಸೆಂಟ್ ಜೋಸೆಫ್ ಶಾಲೆ, ದಿವ್ಯಚೇತನ ಶಾಲೆ, ಕನಕಪುರದ ಬ್ಲಾಸಮ್ ಶಾಲೆ, ಮಾಗಡಿಯ ವಾಸವಿ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರಶ್ನೆಗಳು ಎಸ್ಸೆಸ್ಸೆಲ್ಸಿ ಪಠ್ಯಕ್ರಮದಲ್ಲೆ ಆಧರಿಸಿದ್ದು, ಇಂಗ್ಲಿಷ್, ಕನ್ನಡ, ಹಿಂದಿ, ಸಮಾಜ ವಿಜ್ಞಾನ, ವಿಜ್ಞಾನ, ಗಣಿತ, ಸಾಮಾನ್ಯ ಜ್ಞಾನ, ಪರಿಸರ ಜ್ಞಾನ ಒಳಗೊಂಡ ೮ಸುತ್ತುಗಳನ್ನು ಒಳಗೊಂಡಿತ್ತು.
ಚನ್ನಪಟ್ಟಣದ ಬಾಲು ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ವೆಸ್ಟ್ ಫಾರ್ ನಾಲೆಡ್ಜ್ ೨೦೨೪ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು.