ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಎಚ್.ಎಂ. ರೇವಣ್ಣ

KannadaprabhaNewsNetwork |  
Published : Jul 18, 2026, 01:00 AM IST
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿದರು. | Kannada Prabha

ಸಾರಾಂಶ

ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳ ತಡೆ ಮತ್ತು ದುರುಪಯೋಗ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಗದಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿಮತ್ತು ಗೃಹಜ್ಯೋತಿ ಯೋಜನೆಗಳ ಅನುಷ್ಠಾನವು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಕೇಸ್ವಾನ ಕಾನ್ಫರೆನ್ಸ್ ಹಾಲ್‌ನಲ್ಲಿ ಶುಕ್ರವಾರ ರಂದು ಜರುಗಿದ ವಿಡಿಯೋ ಸಂವಾದದಲ್ಲಿ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳ ತಡೆ ಮತ್ತು ದುರುಪಯೋಗ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಪ್ಪು ಮಾಹಿತಿ ನೀಡಿ ಗ್ಯಾರಂಟಿ ಯೋಜನೆಗಳ ಲಾಭ ಪಡೆದಿರುವುವರಿಂದ ನಿಯಮಾನುಸಾರ ಹಣವನ್ನು ಹಿಂಪಡೆಯಲು ಮತ್ತು ಈ ಪ್ರಕ್ರಿಯೆಯನ್ನು ಎರಡು ವಾರಗಳೊಳಗೆ ಪೂರ್ಣಗೊಳಿಸಬೇಕು. ಗೃಹಜ್ಯೋತಿ ಯೋಜನೆಯಡಿ ಇನ್ನು ಜಾರಿಗೆ ಬಾರದೇ ಬಾಕಿ ಉಳಿದಿರುವ ಗ್ರಾಹಕರ ನೋಂದಣಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ಯಾರಂಟಿ ಯೋಜನೆಗಳ ಯಶಸ್ಸಿನ ಸಂಕೇತವಾಗಿ ಮತ್ತು ಪರಿಸರ ಸಂರಕ್ಷಣೆಯ ಮಹತ್ವ ಸಾರಲು ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಫಲಾನುಭವಿಗಳ ಮೂಲಕ ಕನಿಷ್ಠ ಒಂದು ಬೇವಿನ ಅಥವಾ ಆಲದ ಮರವನ್ನು ನೆಡುವ ವಿಶಿಷ್ಟ ಅಭಿಯಾನವನ್ನು ಹಮ್ಮಿಕೊಂಡು ಪರಿಸರ ಜಾಗೃತಿ ಮೂಡಿಸಲು ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚಿಸಿದರು.

ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ(ಬ್ಯಾಡಗಿ) ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಾವಿನ ಪ್ರಕರಣಗಳ ಸಂಖ್ಯೆ, ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕಾರದ ಮೂಲಕ ಚಾಲನೆ ನೀಡಿ ಜು. 19ಕ್ಕೆ ಮೂರು ವರ್ಷ ತುಂಬುವ ಹಿನ್ನೆಲೆ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ, ರಾಜ್ಯದ ಯೋಜನೆಯ ಫಲಾನುಭವಿಗಳ ಹೆಚ್ಚುವರಿ ಮಾಹಿತಿಯನ್ನು ಪಡೆಯಲು ಎಸ್ಕಾಂ ಸಿಬ್ಬಂದಿ ಗ್ಯಾರಂಟಿ ಸಮಿತಿಗಳು ಸದಸ್ಯರ ಸಹಕಾರದ ಕುರಿತು ಚರ್ಚಿಸಲಾಯಿತು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿಯೋಜನೆಯಡಿ ಗದಗ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 5650 ಗೃಹಲಕ್ಷ್ಮಿ ಫಲಾನುಭವಿಗಳು ಮರಣ ಹೊಂದಿರುವುದು ಪತ್ತೆಯಾಗಿದೆ. ಮರಣ ಹೊಂದಿದವರ ಪೈಕಿ ಒಟ್ಟು 2207 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ತಲುಪಿದೆ. ಫಲಾನುಭವಿಗಳು ಮರಣ ಹೊಂದಿದ ನಂತರವೂ ಅವರ ಖಾತೆಗಳಿಗೆ ಒಟ್ಟು 11978 ಕಂತುಗಳ ಹಣವನ್ನು ಜಮೆಯಾಗಿದೆ. ಮರಣದ ನಂತರ ಜಿಲ್ಲೆಯ ಈ ಖಾತೆಗಳಿಗೆ ಒಟ್ಟು ₹23956000 ವರ್ಗಾವಣೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕೃಷ್ಣಗೌಡ ಪಾಟೀಲ, ಮುಂಡರಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಡಿ.ಡಿ. ಮೊರಾನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಹುಲಿಗೆಮ್ಮ ಜೋಗೇರ, ಹೆಸ್ಕಾಂ ಅಧಿಕ್ಷಕ ಎಂಜಿನಿಯರ್ ನಜ್ಮನ್ನಿಸ್ ಕೆ. ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತರು ಸಮಾಜ ಕಾಯುವ ಯೋಧರು: ಅಶೋಕ ಹಾಸ್ಯಗಾರ
ಮುಂಗಾರು ಮುನಿಸು: ಮರಿಯಮ್ಮನಹಳ್ಳಿ ತಾಂಡಾದ ಸಾವಿರಾರು ಮಂದಿ ಗುಳೆ