ಕನ್ನಡಪ್ರಭ ವಾರ್ತೆ ಹಾವೇರಿ
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಜಿಲ್ಲಾ ಸಮಿತಿಯು ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನದ ಲೋಗೊ ಅನಾವರಣಗೊಳಿಸಿ ಮಾತನಾಡಿದರು.
ಉದ್ಯೋಗ ಸೃಷ್ಟಿಯ ಭರಾಟೆಯೊಂದಿಗೆ ಸರ್ಕಾರಗಳು ಕಾರ್ಪೋರೇಟ್ ಕುಳಗಳು ಹಾಗೂ ಬಂಡವಾಳಿಗರಿಗೆ ಕೈಗಾರಿಕಾ ಸ್ಥಾಪಿಸಲು ಭೂಮಿ ನೀಡುತ್ತಿವೆ. ಆದರೆ ಆ ಕಂಪೆನಿಗಳು ಕೈಗಾರಿಕೆ ಆರಂಭಿಸದೇ ಇರುವುದರಿಂದ ಉದ್ಯೋಗ ಸೃಷ್ಟಿ ಬರೀ ಭಾಷಣದಲ್ಲಿ ಉಳಿಯುತ್ತದೆ. ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಉದ್ಯೋಗ ಒದಗಿಸಲು ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರಬೇಕು. ಉದ್ಯೋಗ ಕೊಡಲಾಗದಿದ್ದರೆ, ನಿರುದ್ಯೋಗಿ ಯುವಜನರಿಗೆ ಮಾಸಿಕ ₹10 ಸಾವಿರ ನಿರುದ್ಯೋಗ ಭತ್ಯೆಕೊಡಬೇಕು ಎಂದು ಒತ್ತಾಯಿಸಿದರು.ದೇಶದಲ್ಲಿ ನಿರುದ್ಯೋಗ ಪ್ರಮಾಣ ವಿಪರೀತವಾಗಿ ಏರುತ್ತಿದೆ. ಉದ್ಯೋಗ ಸೃಷ್ಟಿಸಲು ವಿಫಲವಾದ ಕೇಂದ್ರ ಸರ್ಕಾರ ಕೇವಲ ಭಾವನಾತ್ಮಕ ವಿಷಯಗಳನ್ನು ಮುನ್ನಲೆಗೆ ತಂದು ರಾಜಕೀಯ ಲಾಭಕ್ಕೆ ಹವಣಿಸುತ್ತಿರುವುದು ಜನತೆಗೆ ಎಸಗುತ್ತಿರುವ ದ್ರೋಹವಾಗಿದೆ. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ನೀಡಿದ ಮಾಹಿತಿಯಂತೆ ಕೇಂದ್ರ ಸರ್ಕಾರದಡಿ 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಭರ್ತಿಗೊಳಿಸಲು ಇಚ್ಚಾಶಕ್ತಿ ಪ್ರದರ್ಶಿಸುತ್ತಿಲ್ಲ ಎಂದರು.
ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೂ ಕೇವಲ ಹಿಂದಿನ ವರ್ಷ ಉತ್ತೀರ್ಣರಾದವರಿಗೆ ಈ ಯೋಜನೆಯನ್ನು ಅನ್ವಯಿಸಿರುವುದರಿಂದ ಪದವಿ ಮುಗಿಸಿ ಐದು-ಹತ್ತು ವರ್ಷಗಳಿಂದ ಕೆಲಸ ಸಿಗದ ನಿರುದ್ಯೋಗಿಗಳಿಗೆ ಇದರಿಂದ ಯಾವುದೇ ಆಸರೆ ಸಿಗುವುದಿಲ್ಲ. ಸರ್ಕಾರ ಯುವನಿಧಿ ಗ್ಯಾರಂಟಿ ಯೋಜನೆಯನ್ನು ವೈಜ್ಞಾನಿಕವಾಗಿ ಪರಿಷ್ಕರಿಸಿ, ಅಧ್ಯಯನ ಮುಗಿಸಿ ಕನಿಷ್ಠ 10 ವರ್ಷದಿಂದ ಕೆಲಸ ಸಿಗದಿರುವ ನಿರುದ್ಯೋಗಿ ಯುವಜನರಿಗೆ ಈ ಸೌಲಭ್ಯವನ್ನು ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.ಡಿವೈಎಫ್ಐ ಜಿಲ್ಲಾ ಸಂಚಾಲಕ ನಾರಾಯಣ ಕಾಳೆ ಮಾತನಾಡಿ, ರಾಜ್ಯದಲ್ಲಿ ಶಾಲೆ, ಕಾಲೇಜು ಹಾಗೂ ವಿವಿಧ ಇಲಾಖೆಗಳಲ್ಲಿ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗುತ್ತಿಗೆ, ಹೊರಗುತ್ತಿಗೆ ಇತ್ಯಾದಿ ಹೆಸರಿನಲ್ಲಿ ನೌಕರರು ಸೇವೆ ಸಲ್ಲಿಸುತ್ತಿದ್ದು ಅವರ ಕಾಯಮಾತಿಗೆ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸಂಕಷ್ಟವನ್ನೆದುರಿಸುತ್ತಿದ್ದಾರೆ. ಕೂಡಲೇ ಸರ್ಕಾರ ಇವರೆಲ್ಲರಿಗೂ ಸೇವಾಭದ್ರತೆ ಒದಗಿಸಬೇಕು ಎಂದರು.
ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯಡಿ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನವನ್ನು ಫೆ.25ರಿಂದ ಮೂರು ದಿನಗಳ ಕಾಲ ಮಂಗಳೂರಿನಲ್ಲಿ ಹಮ್ಮಿಕೊಂಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಯ್ದ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಂಡು ಈ ಮೇಲ್ಕಂಡ ವಿಷಯಗಳ ಕುರಿತು ಚರ್ಚಿಸಿ ನಿರ್ಣಯ ಹಾಗೂ ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದರು.ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಬೋವಿ, ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಗಂಗಯ್ಯ ಕುಲಕರ್ಣಿ, ಖಲಂದರ್ ಅಲ್ಲಿಗೌಡ್ರ, ಸುನೀಲ ಲಮಾಣಿ, ಸ್ವಾತಿ ಕಹಾರ, ಪ್ರಗತಿಪರ ರೈತ ಶೇಖರಗೌಡ ಪಾಟೀಲ ಇತರರು ಇದ್ದರು.