ರಾಮನಗರ: ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸರ್ಕಾರದ ವತಿಯಿಂದ ನೀಡಲಾಗುವ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡುವಂತೆ ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮುಖ್ಯವಾಗಿ ಜಿಲ್ಲೆಯ ಸಾರ್ವಜನಿಕರಿಗೆ ವಿವಿಧ ಇಲಾಖೆಗಳಲ್ಲಿನ ಸರ್ಕಾರಿ ಸೇವೆಗಳು ಹಾಗೂ ಆಡಳಿತಾತ್ಮಕ ಸೌಲಭ್ಯಗಳು ಸಮರ್ಪಕವಾಗಿ ಮತ್ತು ಸಕಾಲದಲ್ಲಿ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಪ್ರತಿ ದಿನ ಮಧ್ಯಾಹ್ನ 3.30 ರಿಂದ ಸಂಜೆ 5.30ರ ವರೆಗೆ ಕಚೇರಿಯಲ್ಲಿ ಕಡ್ಡಾಯವಾಗಿ ತಮ್ಮ ಕಚೇರಿಗಳಲ್ಲಿ ಹಾಜರಿದ್ದು, ಸಾರ್ವಜನಿಕರ ಭೇಟಿಗೆ ಲಭ್ಯವಿರುವಂತೆ ಅವರು ತಿಳಿಸಿದರು.
ಜಿಲ್ಲಾ ಮಟ್ಟ ಸೇರಿ ತಾಲೂಕು ಮಟ್ಟದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಗ್ರಾಮ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಲಭಿಸಬೇಕು, ಸರ್ಕಾರಿ ನೌಕರರು ಹಾಗೂ ಸಿಬ್ಬಂದಿಯು ಸರ್ಕಾರದಿಂದ ನೀಡಲಾಗಿರುವ ಗುರುತಿನ ಚೀಟಿಯನ್ನು ಧರಿಸಬೇಕು ಎಂದು ಹೇಳಿದರು.ಬೆಂಗಳೂರು ದಕ್ಷಿಣ ಜಿಲ್ಲೆ, ಮುಖ್ಯಮಂತ್ರಿಯವರು ಪ್ರತಿನಿಧಿಸುವ ಕ್ಷೇತ್ರವಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿ- ಸಿಬ್ಬಂದಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು, ಪಾರದರ್ಶಕವಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವಂತೆ ಬಾಲಕೃಷ್ಣ ಸೂಚಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ರವಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಜು, ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನ್ಮೋಲ್ ಜೈನ್, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ , ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ರಾಮನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಾಲಕೃಷ್ಣ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಶಾಸಕ ಯೋಗೇಶ್ವರ್, ಎಂಎಲ್ಸಿ ಎಸ್. ರವಿ, ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಜಿಪಂ ಸಿಇಒ ಅನ್ಮೋಲ್ ಜೈನ್ ಇತರರಿದ್ದರು.