ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲಿಯೇ ಆಗಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗಬೇಕು. ನೀರಿನ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳಲ್ಲಿ ಪರ್ಯಾಯ ವ್ಯವಸ್ಥೆ ಮೂಲಕ ನೀರು ಬರಬರಾಜು ಮಾಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ನೀರಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕುಡಿಯುವ ನೀರು ವ್ಯವಸ್ಥೆಯ ಬಗ್ಗೆ ಸಂಪೂರ್ಣವಾಗಿ ನಿಗಾ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.ಲಭ್ಯವಿರುವ ಅನುದಾನದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ, ಮುಂದಿನ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಿಗೆ ಸಮಸ್ಯೆಯಾಗದಂತೆ ನೀರು ಪೂರೈಸುವುದು ಅಧಿಕಾರಿಗಳ ಮುಖ್ಯ ಹೊಣೆಗಾರಿಕೆಯಾಗಿದೆ. ಹೆಚ್ಚು ಸಂಗ್ರಹ ಸಾಮರ್ಥ್ಯದ ಟ್ಯಾಂಕ್ಗಳಲ್ಲಿ ನೀರು ಶೇಖರಣೆ ಮಾಡಬೇಕಿದೆ. ನೀರಿನ ಸರಬರಾಜು ಮಾಡುವ ಸ್ಥಳಗಳಲ್ಲಿ ಯಾವುದೇ ಸೋರಿಕೆ ಆಗದಂತೆ ಎಚ್ಚರವಹಿಸಿ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಇದೇ ವೇಳೆ ಮಾತನಾಡಿದ ಶಾಸಕ ಎ.ಆರ್. ಕೃಷ್ಣಮೂರ್ತಿ, ಜೆಜೆಎಂ ಕಾಮಗಾರಿ ನಿರ್ವಹಿಸಿದ ಕೆಲವು ಕಡೆ ಪೈಪ್ಗಳು ಒಡೆದು ಹೋಗಿ ತೊಂದರೆಯಾಗಿದೆ. ನಿಗದಿತ ಆಳ ಮತ್ತು ನಿರ್ದಿಷ್ಟ ಪೈಪ್ಗಳ ಅಳವಡಿಕೆಯಲ್ಲಿ ಮಾರ್ಗಸೂಚಿ ಪ್ರಕಾರ ಕಾಮಗಾರಿ ನಡೆಯಬೇಕಿದೆ. ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಗುಂಬಳ್ಳಿಯಂತಹ ಪ್ರಕರಣಗಳು ಮರುಕಳಿಸದಂತೆ ನಿಗಾವಹಿಸಬೇಕು ಎಂದರು.
ಕೃಷಿ ಇಲಾಖೆ ಪ್ರಗತಿ ಪರಿಶೀಲಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ಮುಂಬರುವ ಮಳೆಗಾಲದಲ್ಲಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿರುವ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಜಿಲ್ಲೆಗೆ ಅಗತ್ಯಕ್ಕನುಗುಣವಾಗಿ ದಾಸ್ತಾನು ಮಾಡಬೇಕು. ಎಲ್ಲಿಯೂ ಕೊರತೆಯಾಗಬಾರದು. ಜಾನುವಾರುಗಳಿಗೆ ಮೇವು ಸಹ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರಬೇಕು ಎಂದು ಸಚಿವರು ತಿಳಿಸಿದರು.ಹಾಲಿನ ದರ ಹೆಚ್ಚಳ ಸಂಬಂಧ ಪ್ರಸ್ತಾಪಿಸಿದ ಸಚಿವರು, ಹಾಲು ದರ ಏರಿಕೆ ಮಾಡಿದ ಸಂಪೂರ್ಣ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ ಎಂದರು.
ಕೆ.ಎಸ್.ಆರ್.ಟಿ.ಸಿ ಬಸ್ಗಳ ಸೇವೆ ಸಮರ್ಪಕವಾಗಿ ಸಿಗಬೇಕು. ಲಾಭವನ್ನಷ್ಟೇ ನೋಡದೇ ಗ್ರಾಮೀಣ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚು ಬಸ್ಸುಗಳನ್ನು ನಿಯೋಜಿಸಬೇಕು. ಕಳೆದ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದ ಕಳಪೆ ಬೇಳೆ ಪೂರೈಕೆ ಸಂಬಂಧ ವಿವರ ಪಡೆದ ಸಚಿವರು, ಗುಣಮಟ್ಟವಿಲ್ಲದ ಬೇಳೆ ಸರಬರಾಜುದಾರರು ಹಾಗೂ ಬೇಳೆಯ ಗುಣಮಟ್ಟದ ಬಗ್ಗೆ ದೃಢೀಕರಿಸಿದವರಿಗೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಿ, ವಿವಿಧ ಇಲಾಖೆಗಳ ಪ್ರಗತಿಯನ್ನು ವಿವರವಾಗಿ ಪರಿಶೀಲಿಸಿದರು.ಲೋಕಸಭಾ ಸದಸ್ಯ ಸುನೀಲ್ ಬೋಸ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಸ್. ಗಣೇಶ್ ಪ್ರಸಾದ್, ಡಾ. ಡಿ. ತಿಮ್ಮಯ್ಯ, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮೈಸೂರು ವಿಭಾಗದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಚ್.ವಿ. ಚಂದ್ರು, ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಮಹದೇವಣ್ಣ, ಸಯ್ಯದ್ ಮುಸೈಯೀಬ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಎಸ್ಪಿ ಡಾ. ಬಿ.ಟಿ. ಕವಿತಾ, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.