ಕೆಎಂಇಆರ್ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಸೂಚನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ (ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆ) ಸಿಇಪಿಎಂಐಝಡ್ ಯೋಜನೆ ಅಡಿಯಲ್ಲಿ ಕೈಗೊಳ್ಳಲಿರುವ ಕಾಮಗಾರಿ, ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಜನರನ್ನು ಕೇಂದ್ರೀಕರಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಉದಾಸೀನ ಬೇಡ ಎಂದರು.
ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಜನರ ಜೀವನೋಪಾಯಕ್ಕಾಗಿ ಯಾವ ರೀತಿಯ ಸುಧಾರಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬುದನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತಾವನೆ ಸಲ್ಲಿಸಬೇಕು. ಪ್ರಸ್ತಾವನೆ ಅನುಮೋದನೆ ನಂತರ ವಿಸ್ತೃತ ಯೋಜನಾ ವರದಿ ತಯಾರಿಸಬೇಕು. ಯಾವುದೇ ಪ್ರಸ್ತಾವನೆ ಸಲ್ಲಿಸುವ ಮುಂಚಿತವಾಗಿ ತಾವುಗಳ ಕೈಗೊಂಡಿರುವ ಕಾಮಗಾರಿಗಳು ಯಾವ ಕಾರಣಕ್ಕಾಗಿ ಅವಶ್ಯಕತೆ ಇದೆ? ಕಾಮಗಾರಿಗಳು, ಯೋಜನೆಗಳು ಗಣಿಬಾಧಿತ ಪ್ರದೇಶಗಳ ಜನರಿಗೆ ಯಾವ ರೀತಿಯ ಲಾಭವಾಗಲಿದೆ ಎಂಬ ಮಾಹಿತಿ ಒಳಗೊಂಡಿರಬೇಕು ಎಂದು ಸೂಚನೆ ನೀಡಿದರು.ಸರ್ಕಾರದ ವತಿಯಿಂದ ರೆಗ್ಯುಲರ್ ಬಜೆಟ್ನಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೂ ಹಾಗೂ ಕೆಎಂಇಆರ್ಸಿ ಅಡಿಯಲ್ಲಿ ತೆಗೆದುಕೊಳ್ಳುವ ಕಾಮಗಾರಿಗಳಿಗೂ ವ್ಯತ್ಯಾಸ ಇದೆ. ರೆಗ್ಯುಲರ್ ಬಜೆಟ್ನಲ್ಲಿ ಪ್ರಸಕ್ತ ವರ್ಷಕ್ಕೆ ಅನುಗುಣವಾಗಿ ನಮ್ಮ ಯೋಜನೆ ತಯಾರಿ ಮಾಡಿಕೊಂಡು ಅನುಷ್ಠಾನ ಮಾಡುತ್ತೇವೆ. ಆದರೆ ಕೆಎಂಇಆರ್ಸಿ ಒಂದು ಯೋಜನೆಯಾಗಿದ್ದು, ಹಲವು ವರ್ಷಗಳಿಗೆ ಒಂದೇ ಯೋಜನೆ ರೂಪಿಸಲಾಗುವುದು ಎಂದರು.
ಕೆಎಂಇಆರ್ಸಿ ಅಡಿಯಲ್ಲಿ ಅನುಮೋದನೆಗೊಂಡಿರುವ ಕಾಮಗಾರಿಗಳಿಗೆ ಶೀಘ್ರವಾಗಿ ಟೆಂಡರ್ ಕರೆದು, ಕಾಮಗಾರಿ ಪ್ರಾರಂಭಿಸಬೇಕು. ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ದಾಖಲೆಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಈ ವೇಳೆ ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಪಶುಸಂಗೋಪನೆ, ರೇಷ್ಮೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಡಾ.ಮಹೇಶ್ ಇದ್ದರು.