- ಅಧಿಕಾರಿಗಳು ಕಟ್ಟುನಿಟ್ಟಾಗಿ ಜವಾಬ್ದಾರಿ ಪಾಲಿಸಬೇಕು । ವಿದ್ಯಾರ್ಥಿಗಳು, ರೈತರು, ಸಾರ್ವಜನಿಕರಿಗೆ ಸಸಿಗಳ ವಿತರಿಸಬೇಕು
ಕನ್ನಡಪ್ರಭ ವಾರ್ತೆ ದಾವಣಗೆರೆ
ಜೂನ್ 5ರಂದು ಪರಿಸರ ಸಂರಕ್ಷಣೆ ಮತ್ತು ಹವಾಮಾನ ವೈಪರೀತ್ಯ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ 2026 ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶನಿವಾರ ವಿಶ್ವ ಪರಿಸರ ದಿನಾಚರಣೆ ಆಚರಿಸುವ ಸಂಬಂಧ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡು, ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರಿಗೆ ವಿತರಿಸಲು ಸಸಿಗಳನ್ನು ಕಾಯ್ದಿರಿಸಬೇಕು. ''''''''ಹಸಿರು ಕರ್ನಾಟಕ'''''''' ಕಾರ್ಯಕ್ರಮದಡಿ ಪ್ರತಿ ತಾಲೂಕಿಗೆ 3,000 ಸಸಿಗಳನ್ನು ನೀಡಲು ಅರಣ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಸೂಚಿಸಿದರು.
ಜಿಲ್ಲಾ ಪರಿಸರ ಅಧಿಕಾರಿ ಶೈಲಜಾ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.2ರಂದು ನಗರದ ಸೇಂಟ್ ಜಾನ್ ಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಹಾಗೂ ಛಾಯಾಚಿತ್ರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜೂನ್ 5 ರಂದು ನಡೆಯಲಿರುವ ಮುಖ್ಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಪ್ಲಾಸ್ಟಿಕ್ ಬಳಕೆ ನಿಷೇಧ:
ಮಾಜಿ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಮಾತನಾಡಿ, ರೈತರಿಗಾಗಿ ಕರಿಬೇವು, ನುಗ್ಗೆ, ನೇರಳೆ ಹಾಗೂ ಸಂಪಿಗೆ ಸಸಿಗಳನ್ನು ಬೆಳೆಸಲಾಗಿದ್ದು, ವಿತರಣೆಗೆ ಸಿದ್ಧಪಡಿಸಲಾಗಿದೆ. ಜೊತೆಗೆ ಹೊಂಗೆ, ಬೇವು ಹಾಗೂ ನೆರಳು ನೀಡುವ ಸಿಂಗಾಪುರ್ ಚೆರ್ರಿ ಸಸಿಗಳೂ ಲಭ್ಯವಿವೆ ಎಂದು ತಿಳಿಸಿದರು.
ವಿಶ್ವ ಪರಿಸರ ದಿನಾಚರಣೆ-2026ರ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೇವಲ ಗಿಡಗಳನ್ನು ನೆಡುವುದಷ್ಟೇ ನಮ್ಮ ಗುರಿಯಾಗಬಾರದು. ಗಿಡಗಳನ್ನು ನೆಟ್ಟ ನಂತರ ಅವುಗಳ ಸಮರ್ಪಕ ಪೋಷಣೆ ಮತ್ತು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಆದ್ದರಿಂದ ಸಸಿಗಳ ಪೋಷಣೆಯ ಉಸ್ತುವಾರಿಯನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಹಾಗೂ ಯಾವುದೇ ಒಂದು ಗಿಡವೂ ಒಣಗದಂತೆ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಬೇಕು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
- - -