ಕನ್ನಡಪ್ರಭ ವಾರ್ತೆ ತುಮಕೂರುತಂಬಾಕು ಉತ್ಪನ್ನಗಳ ಬಳಕೆಯಿಂದ ಪರಿಸರ ವಿಷಮಯವಾಗಿರುತ್ತದೆ. ಪರಿಸರವನ್ನು ರಕ್ಷಿಸಲು ಹಾಗೂ ಜನಸಾಮಾನ್ಯರ ಆರೋಗ್ಯವನ್ನು ಕಾಪಾಡಲು ತಂಬಾಕು ಉತ್ಪನ್ನಗಳ ಬಳಕೆಯನ್ನು ತ್ಯಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಕರೆ ನೀಡಿದರು.
ವಿಶ್ವ ತಂಬಾಕು ರಹಿತ ದಿನಾಚರಣೆ-2025ರ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆಸ್ಪತ್ರೆ, ಭಾರತೀಯ ವೈದ್ಯಕೀಯ ಸಂಘ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತಾಲ್ಲೂಕು ಆಡಳಿತ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಹಯೋಗದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯಲ್ಲಿ ಮಾತನಾಡಿದರುತಂಬಾಕು ಉತ್ಪನ್ನಗಳಲ್ಲಿ ಹಲವಾರು ರೀತಿಯ ವಿಷಯುಕ್ತ ವಸ್ತುಗಳಿದ್ದು, ವಿಷಯುಕ್ತ ತಂಬಾಕು ಪದಾರ್ಥಗಳ ಬಳಕೆ ಮಾಡುವುದರಿಂದ ಪರಿಸರ ನಾಶವಾಗುವುದಲ್ಲದೆ, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ತಿಳಿಸಿದರು.
ಭಾರತದ ತಂಬಾಕು ವ್ಯಸನಿಗಳಲ್ಲಿ ಶೇ.45ರಷ್ಟು ಕ್ಯಾನ್ಸರ್ ಖಾಯಿಲೆಗೆ ಬಲಿಯಾಗುತ್ತಿದ್ದಾರೆ. ಬಹುತೇಕ ಕ್ಯಾನ್ಸರ್ಗಳಲ್ಲಿ ತಂಬಾಕಿನ ಪ್ರಭಾವವಿರುತ್ತದೆ. ತಂಬಾಕು ವ್ಯಸನಕ್ಕೆ ಒಳಗಾದ ವ್ಯಕ್ತಿಯ ಕುಟುಂಬಗಳು ಬೀದಿಗೆ ಬರುತ್ತಿವೆ. ತಂಬಾಕು ವ್ಯಸನಿಗಳನ್ನು ವ್ಯಸನಮುಕ್ತರನ್ನಾಗಿಸಿ ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಕಾರ್ಯಕ್ರಮ ಉದ್ಘಾಟಿಸಿ ಕಾನೂನು ಅರಿವು ಮೂಡಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮೀಕಾಂತ್ ಪ್ರತಿಜ್ಞಾ ವಿಧಿ ಭೋಧಿಸಿದರು.ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಾಕ್ರಮಾಧಿಕಾರಿ ಡಾ. ರಾಮೇಗೌಡ ಪಿ.ಬಿ.ಎಸ್. ಪ್ರಾಸ್ತವಿಕವಾಗಿ ಮಾತನಾಡಿ, ತಂಬಾಕು ನಿಷೇಧ ಕಾಯ್ದೆಯನ್ವಯ ಶಾಲಾ, ಕಾಲೇಜು ಆವರಣದ 100 ಗಜ ಅಂತರದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದವರ ಮೇಲೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಮೋಹನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್, ಜಿಲ್ಲಾ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಜಣ್ಣ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಯಣ್ಣ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳಾದ ರವಿಪ್ರಕಾಶ್, ಹರೀಶ್, ರುಕ್ಮಿಣಿ, ಸುಕನ್ಯ, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.