ಚಳ್ಳಕೆರೆ ತಾಲೂಕು ನಗರಂಗೆರೆ ಗ್ರಾಮದಲ್ಲಿ ಪ್ಲಾಸ್ಟಿಕ್ ಬಳಕೆ ಕುರಿತ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಚಳ್ಳಕೆರೆ ತಾಲೂಕು ನಗರಂಗೆರೆ ಗ್ರಾಮದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನಗರಂಗೆರೆ ಯಂಗ್ ಅಂಡ್ ಯೂತ್ ಅಸೋಸಿಯೇಷನ್ ವತಿಯಿಂದ ಸೆ.12 ಮತ್ತು 13ರಂದು ಶನಿವಾರ ಸಂಜೆ ಮತ್ತು ಭಾನುವಾರ ಬೆಳಗ್ಗೆ ನಗರಂಗೆರೆ ಗ್ರಾಮದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮನೆಗೆ ಒಂದು ಬಟ್ಟೆಯ ಕೈಚೀಲ ಎಂಬ ಅಭಿಯಾನದ ಮೂಲಕ ಗ್ರಾಮದ ಸುಮಾರು 350 ಮನೆಗಳಿಗೆ ತಲಾ ಒಂದು ಬಟ್ಟೆಯ ಕೈಚೀಲವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ನೀರು ಉಳಿಸಿ, ಮರ ಬೆಳೆಸಿ, ಪ್ಲಾಸ್ಟಿಕ್ ತ್ಯಜಿಸಿ ಹಾಗೂ ಇಂದಿನ ನಮ್ಮ ಜವಾಬ್ದಾರಿ – ನಾಳೆಯ ನಮ್ಮ ಭವಿಷ್ಯ ಎಂಬ ಘೋಷವಾಕ್ಯಗಳೊಂದಿಗೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವಂತೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು.
ಮನೆ ಮನೆಗೆ ತೆರಳಿ ಬಟ್ಟೆಯ ಕೈಚೀಲಗಳನ್ನು ವಿತರಿಸಿದ ಯುವಕರು, ದಿನನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕ್ ಚೀಲಗಳಿಗೆ ಪರ್ಯಾಯವಾಗಿ ಬಟ್ಟೆಯ ಕೈಚೀಲಗಳನ್ನು ಬಳಸುವಂತೆ ಗ್ರಾಮಸ್ಥರಿಗೆ ಮನವಿ ಮಾಡಿದರು. ಕಾರ್ಯಕ್ರಮಕ್ಕೆ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಹಲವರು ಇನ್ನು ಮುಂದೆ ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ಕಡಿಮೆ ಮಾಡುವುದಾಗಿ ಹಾಗೂ ಸಾಧ್ಯವಾದಷ್ಟು ಪ್ಲಾಸ್ಟಿಕ್ ತ್ಯಜಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ನೇತೃತ್ವವನ್ನು ನಗರಂಗೆರೆ ಗ್ರಾಮದ ಗ್ರಾಮಸ್ಥರಾದ ಹಾಗೂ ಸಾಫ್ಟ್ವೇರ್ ಎಂಜಿನಿಯರ್ ಕೆ.ಆರ್.ತಿಪ್ಪೇಸ್ವಾಮಿ ಮತ್ತು ನಗರಂಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಮಂಜುನಾಥ ಕಾರ್ಯಕ್ರಮವನ್ನು ಮುನ್ನಡೆಸಿದರು.
ಈ ಕಾರ್ಯಕ್ರಮದಲ್ಲಿ ಊರಿನ ಕೆಲವು ಆಸಕ್ತ ಯುವಕರು ಇವರ ಜೊತೆ ಕೈಜೋಡಿಸಿ ಮನೆ ಮನೆಗೆ ತೆರಳಿ ಬಟ್ಟೆ ಕೈ ಚೀಲಗಳನ್ನು ವಿತರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.