ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪರಿಸರ ಜೀವಂತ, ನಿರ್ಜೀವ ಎಲ್ಲವನ್ನು ಒಳಗೊಳ್ಳುತ್ತದೆ. ನಾವು ವಾಸಿಸುವ ಸುತ್ತಮುತ್ತಲಿನ ಪ್ರದೇಶಗಳು ಮತ್ತು ಎಲ್ಲ ಜೀವಿಗಳ ಮೇಲೆ ಪರಿಣಾಮ ಬೀರುವ ಪರಿಸ್ಥಿತಿಗಳಿವೆ. ಇದರಲ್ಲಿ ಗಾಳಿ, ನೀರು, ಭೂಮಿ, ಸಸ್ಯ, ಪ್ರಾಣಿ, ಮಾನವ ನಿರ್ಮಿತ ಅಂಶಗಳು ಸೇರಿವೆ. ನಾವು ಯಾವುದೇ ಕಾರಣಕ್ಕೂ ಪರಿಸರವನ್ನು ನಾಶ, ಹಾಳು ಮಾಡದಂತೆ ಬಹು ಎಚ್ಚರಿಕೆ ವಹಿಸುವುದು ತುಂಬಾ ಮುಖ್ಯವಾಗಿದೆ. ಪರಿಸರ ಸಂರಕ್ಷಣೆ ಕೇವಲ ಪರಿಸರ ದಿನಾಚರಣೆ ದಿನದಂದು ಮಾತ್ರ ಸೀಮಿತಗೊಳಿಸದೇ ಇದು ನಿರಂತರವಾಗಿ ಇರಬೇಕಾದ ಅಗತ್ಯವಿದೆ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್. ಚಿತ್ತರಗಿ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಪರಿಸರಕ್ಕೆ ಸಂಬಂಧಿಸಿದಂತೆ ದೊಡ್ಡ ಅಂತಾರಾಷ್ಟ್ರೀಯ ದಿನವಾಗಿದೆ. ಪರಿಸರ ಉಳಿಸುವ ಬಗ್ಗೆ ಜಾಗೃತಿ ಮೂಡಿಸುವುದು. ಮಾಲಿನ್ಯದ ವಿರುದ್ಧ ಹೋರಾಡುವುದು. ಭವಿಷ್ಯದ ಹಸಿರ ಪ್ರಕೃತಿ ಸುಸ್ಥಿರಗೊಳಿಸುವ ಉದ್ದೇಶದಿಂದ ಪ್ರತಿವರ್ಷ ಜೂ.೫ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಶಪಥ ಇಂದು ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು. ಪುರಸಭೆಯಿಂದ ವಿವಿಧ ಮಾದರಿಯಲ್ಲಿ ಪರಿಸರಕ್ಕೆ ಹಾನಿಯಾಗದೇ ಇರುವ ರೀತಿಯಲ್ಲಿ ಕಸ ಸಂಗ್ರಹ ಮಾಡಲಾಗುತ್ತಿದೆ ಎಂದು ಹೇಳಿದರು.ಕಾರ್ಯಕ್ರಮಲ್ಲಿ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನಾಯ್ಯಾಧೀಶೆ ಮಂಜುಳಾ ಡಿ., ಹಿರಿಯ ವಕೀಲ ಬಿ.ಆರ್. ಅಡ್ಡೋಡಗಿ, ಉಪ ವಲಯ ಅರಣ್ಯಾಧಿಕಾರಿ ಬಸವರಾಜ ಜಾಧವ ಮಾತನಾಡಿದರು.