ಕನ್ನಡಪ್ರಭ ವಾರ್ತೆ ಯಾದಗಿರಿ
ನಗರದ ಸರ್ಕಾರಿ ಪದವಿ ಕಾಲೇಜು ಸಂಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಾಲಿನ್ಯ ನಿಯಂತ್ರಣ ಮಂಡಳಿ, ಯಾದಗಿರಿ ಹಾಗೂ ಶಶಿ ಚಾರಿಟೇಬಲ್ ಮತ್ತು ಎಜುಕೇಷನಲ್ ಟ್ರಸ್ಟ್, ವಿಜಯ ವಿಠಲ ಸೇವಾ ಸಂಸ್ಥೆ, ಲಯನ್ಸ್ ಕ್ಲಬ್ ಆಫ್ ಯಾದಗಿರಿ ರವರ ಸಹಯೋಗದೊಂದಿಗೆ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಕುರಿತು ಜಿಲ್ಲಾ ಮಟ್ಟದ ಜನಜಾಗೃತಿ ಅಭಿಯಾನ ಮನೆ ಮನೆಗೂ ಮಣ್ಣಿನ ಗಣಪ-ಉಚಿತ ಮಣ್ಣಿನ ಗಣಪತಿ ವಿತರಿಸಿ ಮಾತನಾಡಿದರು.
ಸರ್ಕಾರ ತನ್ನದೇ ಆದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಹೊಂದಿದೆ. ಅದೇ ರೀತಿ ಸಾರ್ವಜನಿಕರಲ್ಲಿಯೂ ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಸಾಮಾಜಿಕ ಹೊಣೆಗಾರಿಕೆಗಳ ಕುರಿತು ಜಾಗೃತಿ ಮೂಡಿಸುವುದು ಎಲ್ಲರ ಕರ್ತವ್ಯ. ಸರ್ಕಾರಿ ಸಂಸ್ಥೆಗಳ ಜತೆಗೆ ಖಾಸಗಿ ಹಾಗೂ ಸರ್ಕಾರೇತರ ಸಂಸ್ಥೆಗಳು ಸಾರ್ವಜನಿಕ ಹಿತಾಸಕ್ತಿಯಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ನಾವು ಆಚರಿಸುವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಹಬ್ಬಗಳಲ್ಲಿ ಸಂಭ್ರಮದ ಜತೆಗೆ ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ವಿಶೇಷವಾಗಿ ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದರು.ಪಿಓಪಿ ಗಣಪತಿ ಮೂರ್ತಿಗಳ ಬಳಕೆಗೆ ಈಗಾಗಲೇ ಕಾನೂನಿನ ಮೂಲಕ ನಿಷೇಧವಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಹಾಗೂ ಕ್ರಿಮಿನಲ್ ಪ್ರಕರಣದಂತಹ ಕಾನೂನು ಕ್ರಮಗಳಿಗೆ ಅವಕಾಶವಿದೆ. ಆದ್ದರಿಂದ ಸಾರ್ವಜನಿಕರು ಮಣ್ಣಿನಿಂದ ನಿರ್ಮಿಸಿದ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸಬೇಕು ಎಂದು ಮನವಿ ಮಾಡಿದರು.
ಪರಿಸರ ಮಾಲಿನ್ಯ ತಡೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು. ಯಾದಗಿರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಒಂದು–ಎರಡು ತಿಂಗಳಿಂದ ವಿವಿಧ ತಾಲೂಕು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಹೇಳಿದರು.