ವಸಂತಕುಮಾರ್ ಕತಗಾಲ
ಕಾರವಾರ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಶಿವಮೊಗ್ಗ ಜಿಲ್ಲೆಯ ಕಾರ್ಗಲ್ನಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಸಾರ್ವಜನಿಕರು, ಇತಿಹಾಸ ತಜ್ಞರು, ಪರಿಸರವಾದಿಗಳಿಂದ ವ್ಯಾಪಕ ವಿರೋಧ ವ್ಯಕ್ತವಾಯಿತು.ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ಕಾರ್ಗಲ್ ನ ಭಟ್ಕಳ ವೃತ್ತದಲ್ಲಿರುವ ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿ) ರಿಕ್ರಿಯೇಶನ್ ಕ್ಲಬ್ನ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಆಲಿಕೆ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು.
ಸಾರ್ವಜನಿಕರ ಅಹವಾಲು ಸಭೆಯಲ್ಲಿ ಸುಮಾರು 500 ಸಂಖ್ಯೆಯಲ್ಲಿ ಸ್ಥಳೀಯರು ಸೇರಿದ್ದರು. ಇವರಲ್ಲಿ ಅನೇಕರು, ಪ್ರಸ್ತಾವಿತ ಯೋಜನೆಯ ವಿವರ ಇಂಗ್ಲೀಷಿನಲ್ಲಿದ್ದು ಸ್ಥಳೀಯ ಭಾಷೆಯಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ವಿತರಿಸಬೇಕಾಗಿತ್ತು. ಆದರೆ ಆ ಕೆಲಸವನ್ನು ಸಂಬಂಧಿಸಿದವರು ಮಾಡಲಿಲ್ಲ. ಇನ್ನಾದರೂ ಕನ್ನಡದಲ್ಲಿ ಅನುವಾದಿಸಿ ಸಾರ್ವಜನಿಕರಿಗೆ ತಲುಪಿಸಿ 45 ದಿನ ಸಭೆಯನ್ನು ಮುಂದೂಡಿ ಎಂಬ ಆಗ್ರಹ ಆರಂಭದಲ್ಲೇ ಕೇಳಿಬಂತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪ್ರಸ್ತಾವಿತ ಯೋಜನೆ ಕುರಿತು ವಿವರವಾದ ಪವರ್ ಪಾಯಿಂಟ್ ಪ್ರದರ್ಶಿಸಿ (ಪಿಪಿಟಿ) ಯೋಜನೆಯ ವಿವಿಧ ಆಯಾಮಗಳ ವಿವರ ನೀಡಿದರು. ಆದರೆ ಅದರಲ್ಲಿ ಅನೇಕ ಇಂಗ್ಲಿಷ್ ಭಾಷೆಯಲ್ಲಿರುವುದರಿಂದ ಸಾರ್ವಜನಿಕರಿಗೆ ಏನೂ ಅರ್ಥವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಸ್ತಾವಿತ ಯೋಜನೆಯು ಪರಿಸರ, ಐತಿಹಾಸಿಕ ಸ್ಮಾರಕ, ಜನ ಜಾನುವಾರುಗಳಿಗೆ ಮಾರಕವಾಗಿದೆ. ಯೋಜನೆಯನ್ನು ಸಂಪೂರ್ಣ ಕೈಬಿಡಬೇಕು ಎಂದು ಜನತೆ ಒಕ್ಕೊರಲಿನಿಂದ ಆಗ್ರಹಿಸಿದರು.ಯೋಜನೆಯಲ್ಲಿ ಹೇಳಿದ ವಿಷಯಗಳೆಲ್ಲ ಸುಳ್ಳಿನ ಕಂತೆಯಿಂದ ಕೂಡಿದೆ. ಸಾರ್ವಜನಿಕರಿಗೆ ಮೋಸ ಮಾಡುವ ಹಿಡನ್ ಅಜೆಂಡಾ ಇದರಲ್ಲಿ ಅಡಗಿದೆ. ಈ ಸಾರ್ವಜನಿಕ ಅಹವಾಲು ಸಭೆ ಎನ್ನುವುದು ಕೇವಲ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ. ದಟ್ಟಾರಣ್ಯ ಕತ್ತಲೆ ಕಾನು, ಐತಿಹಾಸಿಕ ಮಹತ್ವದ ಗೇರುಸೊಪ್ಪ, ನಗರಬಸ್ತಿಕೇರಿ ಮೊದಲಾದೆಡೆ ಇರುವ ಐತಿಹಾಸಿಕ ಸ್ಥಳಗಳು ಸಂಪೂರ್ಣ ನಾಶವಾಗುತ್ತದೆ ಎಂದು ಮಾತನಾಡಿದವರು ಯೋಜನೆ ವಿರುದ್ಧ ಹರಿಹಾಯ್ದರು.
ಯಾವುದೇ ಕಾರಣಕ್ಕೂ ಈ ಸಭೆಯನ್ನು ಮುಂದೂಡಲು ಸಾಧ್ಯವಿಲ್ಲ. ನೀವು ಕೊಡುವ ಅಭಿಪ್ರಾಯ, ಸಲಹೆ ಸೂಚನೆಗಳನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ಸಭೆಯಲ್ಲಿ ಭಾಗಿಯಾದ ಅಧಿಕಾರಿಗಳು ಸಮಜಾಯಿಷಿ ನೀಡಲು ಪ್ರಯತ್ನಿಸಿದರೂ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಮಾಜಿ ಶಾಸಕ ಹರತಾಳು ಹಾಲಪ್ಪ, ಪರಿಸರವಾದಿಗಳಾದ ಪ್ರೊ.ಕುಮಾರಸ್ವಾಮಿ, ಅಖಿಲೇಶ್ ಚಿಪ್ಪಳಿ, ಅನಂತ ಹೆಗಡೆ ಅಶೀಸರ, ಡಾ.ಎಲ್.ಕೆ. ಶ್ರೀಪತಿ, ಇತಿಹಾಸತಜ್ಞ ಡಾ.ಬಾಲಕೃಷ್ಣ ಹೆಗಡೆ, ಶಿವಾನಂದ ಕಳವೆ, ತಳಕಳಲೆ, ಹೆನ್ನಿ ಮೊದಲಾದ ಮುಳುಗಡೆ ಸಂತ್ರಸ್ತರು ಮಾತನಾಡಿ ಯೋಜನೆಯನ್ನು ಪ್ರಬಲವಾಗಿ ವಿರೋಧಿಸಿದರು.
ಪರಿಸರ ಚಿಂತಕ, ಬರಹಗಾರ ಶಿವಾನಂದ ಕಳವೆ, ಅಣೆಕಟ್ಟೆಯಿಂದ 14 ಕಿ.ಮೀ. ದೂರದ ಹಾಡಗೇರಿ ಎಂಬಲ್ಲಿ 2010ರಲ್ಲಿ ಭೂಕುಸಿತ ಆಗಿ 40 ಎಕರೆ ಕಾಡು ಮಣ್ಣಿನೊಳಗೆ ಸೇರಿದೆ. ಅದಾದ ಒಂದೂವರೆ ತಿಂಗಳ ನಾನೇ ಇದನ್ನು ಬೆಳಕಿಗೆ ತರಬೇಕಾಯಿತು. ಕಾಡಿನಲ್ಲಿ ಏನಾಗುತ್ತಿದೆ ಎನ್ನುವುದು ಯಾರಿಗೂ ಗೊತ್ತಾಗುವುದಿಲ್ಲ. 1920ರಲ್ಲಿ ಬ್ರಿಟಿಷರು ಕಾಡು ಕಡಿಯಲು ಪರವಾನಗಿ ಕೊಟ್ಟರೂ ಮಹಿಮೆ ಹಾಗೂ ಮಾಗೋಡು ಜನತೆ ಇದು ದೇವರ ಕಾಡು ಎಂದು ಕಾಡನ್ನು ಕಡಿಯದೇ ಕಾಪಾಡಿದರು. ಈಗ ನಾವೇ ಅರಣ್ಯನಾಶಕ್ಕೆ ಮುಂದಾಗುವುದು ಸರಿಯಲ್ಲ. ಇಲ್ಲಿನ ಸಿಂಗಳೀಕ, ರಾಮಪತ್ರೆ ಮತ್ತಿತರ ಜೀವ ವೈವಿಧ್ಯತೆಗಳು ಬೇರೆಡೆ ಕಾಡು ಬೆಳೆಸಿದರೆ ಅಲ್ಲಿ ಕಾಣಸಿಗದು ಎಂದು ಯೋಜನೆಯನ್ನು ತೀವ್ರವಾಗಿ ವಿರೋಧಿಸಿದರು.ಪರಿಸರವಾದಿ ಅನಂತ ಹೆಗಡೆ ಅಶೀಸರ, ಅಮೂಲ್ಯ ಜೀವ ವೈವಿಧ್ಯತೆಯ ನಾಶಕ್ಕೆ ಕಾರಣವಾಗುವ ಈ ಯೋಜನೆ ಜಾರಿಗೊಳಿಸಬಾರದು. ಶರಾವತಿ ಕಣಿವೆಯಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಯೋಜನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ, ಮಾಲಿನ್ಯ ನಿಯಂತ್ರಣ ಮಂಡಳಿ ಹಿರಿಯ ಪರಿಸರ ಅಧಿಕಾರಿ ರಮೇಶ ನಾಯಕ್, ಶಿವಮೊಗ್ಗ ಜಿಲ್ಲಾ ಪರಿಸರ ಅಧಿಕಾರಿ ಶಿಲ್ಪಾ, ಕೆಪಿಸಿಎಲ್ ಅಧಿಕಾರಿ ವಿಜಯ್ ಮತ್ತಿತರರು ಇದ್ದರು.