ಮಲೇರಿಯಾ ಸೇರಿದಂತೆ ಎಲ್ಲ ರೀತಿಯ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಎಲ್ಲರ ಜವಾಬ್ದಾರಿಯಾಗಿರಲಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
ವಿಶ್ವ ಮಲೇರಿಯಾ ದಿನ
ಚಿತ್ರದುರ್ಗ: ಮಲೇರಿಯಾ ಸೇರಿದಂತೆ ಎಲ್ಲ ರೀತಿಯ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಎಲ್ಲರ ಜವಾಬ್ದಾರಿಯಾಗಿರಲಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
ಇಲ್ಲಿನ ಬುದ್ಧನಗರದ ನಗರ ಆರೋಗ್ಯ ಕೇಂದ್ರದ ಮುಂಭಾಗಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ಹಮ್ಮಿಕೊಂಡ ಜನಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕೀಟಗಳಿಂದ ಹರಡುವ ರೋಗಗಳಲ್ಲಿ ಮಲೇರಿಯಾ ಒಂದಾಗಿದೆ. ಈ ಹಿಂದೆ ಮಲೇರಿಯಾ ರೋಗ ಒಂದು ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿತ್ತು. ಈಗ ಮಲೇರಿಯಾ ನಿರ್ಮೂಲನೆ ಹಂತಕ್ಕೆ ತಲುಪಿದೆ. ಸಾರ್ವಜನಿಕರ ಸಹಕಾರದೊಂದಿಗೆ ಮಲೇರಿಯಾ ಮುಕ್ತ ಜಿಲ್ಲೆಯಾಗಿಸೋಣ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ, ‘ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ. ಮರು ಹೂಡಿಕೆ ಮಾಡಿ. ಮರು ಕಲ್ಪನೆ ಮಾಡಿ. ಮರು ಉತ್ತೇಜನ ನೀಡೋಣ’ ಎಂಬುದು ಈ ಬಾರಿಯ ಧ್ಯೇಯವಾಕ್ಯವಾಗಿದೆ. 2027ರ ವೇಳೆಗೆ ಕರ್ನಾಟಕ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸಿ ಗುರಿಯನ್ನು ಸಾಧಿಸ ಬೇಕಾಗಿರುವುದರಿಂದ ಎಲ್ಲಾ ಹಂತಗಳಲ್ಲಿಯೂ ಮಲೇರಿಯಾ ಚಟುವಟಿಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
ಚಿತ್ರದುರ್ಗ ನಗರದ ಬುದ್ಧ ನಗರದಿಂದ ಪ್ರಾರಂಭವಾದ ಜನ ಜಾಗೃತಿ ಜಾಥಾ ಪ್ರಶಾಂತ ನಗರ, ಶಾಸಕರಾದ ಚಂದ್ರಪ್ಪ ಮನೆ ಹತ್ತಿರದ ಮಾರ್ಗವಾಗಿ ಪರಿಸರ ಕಟ್ಟಡದಿಂದ ಆರೋಗ್ಯ ಕೇಂದ್ರ ಬುದ್ಧ ನಗರದವರೆಗೆ ನಡೆಯಿತು.
ಜಿಲ್ಲಾ ಕೀಟಜನ್ಯ ರೋಗಗಳ ನಿವಾರಣಾಧಿಕಾರಿ ಡಾ.ಕಾಶಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ.ಒ.ಸುಧಾ, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಡಾ.ಸುರೇಂದ್ರ, ಡಾ.ಬಿಲಾಲ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎನ್.ಎಸ್.ಮಂಜುನಾಥ, ಬಿ.ಮೂಗಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸುರೇಶ್ ಬಾಬು, ಶ್ರೀನಿವಾಸ, ನಾಗರಾಜ್, ಮಳಲಿ ಶ್ರೀನಿವಾಸ, ಮಲ್ಲಿಕಾರ್ಜುನ, ಗುರುಮೂರ್ತಿ, ತಾಲೂಕು ಆಶಾ ಬೋಧಕಿ ತಬಿತಾ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.