ನನ್ನ ಇಲಾಖೆಯಿಂದಲೇ ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆ; ಎಚ್‌ಡಿಕೆ

KannadaprabhaNewsNetwork |  
Published : Jan 24, 2026, 02:30 AM IST
23ಕೆಎಂಎನ್ ಡಿ-6 | Kannada Prabha

ಸಾರಾಂಶ

ಮಂಡ್ಯಕ್ಕೆ ಕೈಗಾರಿಕೆ ತರಲು ಎಷ್ಟು ಶ್ರಮ ಹಾಕುತ್ತಿದ್ದೇನೆ ಅನ್ನುವುದು ನನಗೆ ಮಾತ್ರ ಗೊತ್ತು. ರಾಜಕೀಯವಾಗಿ ಟೀಕೆ ಸಾಮಾನ್ಯ. ಮಂಡ್ಯ ಜಿಲ್ಲೆಗೆ ಒಳ್ಳೆದಾಗಬೇಕು ಎಂದರೆ ಜೆಡಿಎಸ್ ಒದ್ದೊಡಿಸಬೇಕು ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಯಾರು ಯಾರನ್ನು ಒದ್ದೊಡಿಸುತ್ತಾರೆ ಅನ್ನುವುದು ಗೊತ್ತಾಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ । ಕೈಗಾರಿಕೆ ಸ್ಥಾಪನೆ ಬಗ್ಗೆ ರಾಜಕೀಯ ಬೇಡ; ಮಂಡ್ಯಕ್ಕೇನು ಮಾಡಬೇಕೆಂದು ನನಗೆ ಗೊತ್ತು

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ವಾತಾವರಣ ನಿರ್ಮಾಣ ಮಾಡಬೇಕು. ಅದಕ್ಕೆ ಪೂರಕವಾಗಿ ಕೇಂದ್ರದ ಬೃಹತ್ ಕೈಗಾರಿಕೆ ಇಲಾಖೆ ವತಿಯಿಂದಲೇ ಕೈಗಾರಿಕೆ ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮಂಡ್ಯ ಜಿಲ್ಲೆಗೆ ಏನು ಮಾಡಬೇಕೆಂದು ನನಗೆ ಗೊತ್ತಿದೆ. ಈ ಬಗ್ಗೆ ಬೇರೆ ಯಾರ ಸರ್ಟಿಫಿಕೇಟ್ ಬೇಕಿಲ್ಲ. ಮಂಡ್ಯದಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ಆಟೋಮ್ಯಾಟಿವ್ ರೀಸರ್ಚ್ ಅಸೋಸಿಯೆಷನ್ ಆಫ್ ಇಂಡಿಯಾ (ಎಆರ್‌ಎಐ) ಸಂಸ್ಥೆ ಕೈಗಾರಿಕೆ ಸ್ಥಾಪಿಸಲು ಜಾಗ ಕೊಡುವಂತೆ ನನ್ನ ಇಲಾಖೆಯಿಂದಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಶುಕ್ರವಾರ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಇದರಲ್ಲಿ ಅನವಶ್ಯಕ ರಾಜಕೀಯ ಅಗತ್ಯ ಇಲ್ಲ. ಜಿಲ್ಲೆಯ ಅಭಿವೃದ್ಧಿ ಎಲ್ಲರ ಜವಾಬ್ದಾರಿ. ಜಿಲ್ಲಾಧಿಕಾರಿಗಳು ಜಾಗ ಇಲ್ಲ ಎಂದು ಹೇಳಿದ್ದರು. ಶಾಸಕರಿಗೆ ಜಾಗ ಕೊಡುವ ಅಧಿಕಾರ ಇದೆಯೇ. ಇದೇ ವಿಚಾರ ಇಟ್ಟುಕೊಂಡು ಕಾಂಗ್ರೆಸ್ಸಿಗರು ರಾಜಕೀಯ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕದವರಿಗೇ ಇಷ್ಟವಿಲ್ಲ:

ಇತ್ತೀಚೆಗೆ ಅಪರೂಪದ ಆಯಸ್ಕಾಂತ (ರೇರ್ ಅರ್ಥ್ ಮ್ಯಾಗ್ನೆಟಿಕ್) ಕಾರ್ಖಾನೆ ಸ್ಥಾಪಿಸಲು ಕರ್ನಾಟಕದವರೇ ಪ್ರಸ್ತಾವನೆ ಸಲ್ಲಿಸಿದ್ದರು. ಅವರು ನನ್ನಲ್ಲಿಗೆ ಬಂದಿದ್ದರು. ಮಂಡ್ಯದಲ್ಲಿ ಒಂದು ಕೈಗಾರಿಕೆ ಸ್ಥಾಪಿಸುವಂತೆ ಕೇಳಿದರೆ ಕರ್ನಾಟಕದಲ್ಲಿ ಬೇಡ ಅಂತಾರೆ. ಕರ್ನಾಟಕದ ಸರ್ಕಾರ ಬೆಂಬಲ ಕೊಡಲ್ಲ ಎಂದು ದೂರುತ್ತಾರೆ. ವಿಶಾಖಪಟ್ಟಣದಲ್ಲಿ ಜಾಗ ಕೊಡಿಸಿ ಎಂದು ಕೇಳುತ್ತಾರೆ ಎಂದು ಹೇಳಿದರು.

ರಾಜ್ಯದಲ್ಲಿ ಇಂಥ ಕೆಟ್ಟ ಪರಿಸ್ಥಿತಿ ಸೃಷ್ಟಿ ಮಾಡಿದ್ದು ಯಾರು? ಸರ್ಕಾರ ಅಲ್ಲವೇ? ಇದು ದರಿದ್ರ ಸರ್ಕಾರ. ಇವರಿಗೆ ಅಭಿವೃದ್ಧಿ ಬೇಕಿಲ್ಲ. ಈ ಸರ್ಕಾರದ ಯಾವುದೇ ಸಚಿವರು ಅಭಿವೃದ್ಧಿ ವಿಚಾರವಾಗಿ ನನ್ನೊಂದಿಗೆ ಚರ್ಚಿಸಿಲ್ಲ. ಕೈಗಾರಿಕೆ ಅಷ್ಟೇ ಅಲ್ಲ, ಬೇರೆ ಯಾವ ಅಭಿವೃದ್ಧಿ ಕೆಲಸಕ್ಕೆ ಕೂಡ ಯಾರು ನಮ್ಮನ್ನು ಭೇಟಿ ಮಾಡಿ ಚರ್ಚೆ ನಡೆಸಿಲ್ಲ ಎಂದು ಅವರು ಕಿಡಿಕಾರಿದರು.

ಯಾರನ್ನು ಒದ್ದೋಡಿಸುತ್ತಾರೋ ನೋಡ್ತಿರಿ..!

ಮಂಡ್ಯಕ್ಕೆ ಕೈಗಾರಿಕೆ ತರಲು ಎಷ್ಟು ಶ್ರಮ ಹಾಕುತ್ತಿದ್ದೇನೆ ಅನ್ನುವುದು ನನಗೆ ಮಾತ್ರ ಗೊತ್ತು. ರಾಜಕೀಯವಾಗಿ ಟೀಕೆ ಸಾಮಾನ್ಯ. ಮಂಡ್ಯ ಜಿಲ್ಲೆಗೆ ಒಳ್ಳೆದಾಗಬೇಕು ಎಂದರೆ ಜೆಡಿಎಸ್ ಒದ್ದೊಡಿಸಬೇಕು ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಯಾರು ಯಾರನ್ನು ಒದ್ದೊಡಿಸುತ್ತಾರೆ ಅನ್ನುವುದು ಗೊತ್ತಾಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಬ್ರೋಕರ್ ಸರ್ಕಾರ:

ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಪರ ಇಲ್ಲ. ದಲ್ಲಾಳಿಗಳಿಗೆ ಲಾಭ ಮಾಡಿಕೊಡುವ ಬ್ರೋಕರ್ ಸರ್ಕಾರ ಇದಾಗಿದೆ ಎಂದು ಕೇಂದ್ರ ಸಚಿವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.

ರೈತರು ಹೆಚ್ಚು ಬೆಳೆ ಬೆಳೆದಾಗ ಸರ್ಕಾರ ಖರೀದಿ ಕೇಂದ್ರ ತೆರೆಯುವುದಿಲ್ಲ. ಅಂಥ ಸಂದರ್ಭದಲ್ಲಿ ಬೆಲೆ ಕುಸಿತ ಆಗುತ್ತದೆ. ಖಾಸಗಿಯವರು ಬಂದು ಎಲ್ಲಾ ಬೆಳೆಯನ್ನು ಅಗ್ಗದ ಬೆಲೆಗೆ ಖರೀದಿಸಿದ ಮೇಲೆ ಖರೀದಿ ಕೇಂದ್ರಗಳನ್ನು ತೆರೆಯುತ್ತದೆ. ಆಗ ಈ ದಲ್ಲಾಳಿಗಳಿಗೆ ಹೆಚ್ಚಿನ ಬೆಲೆಗೆ ಆ ಬೆಳೆ ಮಾರುತ್ತಾರೆ. ಯಾವಾಗಲೂ ಹೀಗೆಯೇ ಅಗುತ್ತದೆ. ಹಾಗಾಗಿ ಇದೊಂದು ಬ್ರೋಕರ್ ಸರ್ಕಾರ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು ಅವರು ಉಪಸ್ತಿತರಿದ್ದರು.

---------------

23ಕೆಎಂಎನ್ ಡಿ-6

ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಿವಳ್ಳಿಯಲ್ಲಿ ನೂತನ ಶ್ರೀ ಮಾರಮ್ಮ ದೇವಿ ದೇವಾಲಯ ಉದ್ಘಾಟನೆ ನಂತರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಕ್ಕಳು, ಗ್ರಾಮಸ್ಥರಿಗೆ ಹಸ್ತಲಾಘವ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ