ಕನ್ನಡಪ್ರಭ ವಾರ್ತೆ, ದಾವಣಗೆರೆ
ರಾಜ್ಯದಲ್ಲಿರುವ 60 ಜನ ಬಿಜೆಪಿ ಶಾಸಕರು 136 ಶಾಸಕರ ನಮ್ಮ ಕಾಂಗ್ರೆಸ್ ಸರ್ಕಾರವನ್ನು ಹೇಗೆ ಕೆಡವುತ್ತಾರೆ? ಅವರಪ್ಪನ ಆಣೆಗೂ ನಮ್ಮ ಸರ್ಕಾರವನ್ನು ಯಾರಿಂದಲೂ ಕೆಡವಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ಸಿನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.ನಗರದಲ್ಲಿ ಸೋಮವಾರ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ನೇತೃತ್ವ ವಹಿಸಿದ್ದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ರಾಜ್ಯದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದು, ಇಡೀ ರಾಜ್ಯವೇ ಇದರಿಂದಾಗಿ ಹೊತ್ತಿ ಉರಿಯುತ್ತಿದೆ ಎಂದರು.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರು ಕಳ್ಳರು. ಅದಕ್ಕೆ ಹಾಗೆಲ್ಲಾ ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ತನ್ನ ಅಧಿಕಾರ, ಪ್ರಭಾವ ಬಳಸಿಕೊಂಡು, ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದೆ. ಜನತೆ ಇದನ್ನೆಲ್ಲಾ ಗಮನಿಸುತ್ತಿದ್ದಾರೆ ಎಂದು ಹೇಳಿದರು.ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಇದ್ದೇವೆ. ಆ.22ರಂದು ಸಿಎಲ್ಪಿ ಮೀಟಿಂಗ್ ಕರೆದಿದ್ದಾರೆ. ನಾನೂ ಸಹ ಸಭೆಗೆ ಹೋಗುತ್ತಿದ್ದೇನೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೊಡುವುದೂ ಇಲ್ಲ. ನಮ್ಮ ಸರ್ಕಾರಕ್ಕೆ ಏನೂ ಆಗೋದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಕೇವಲ 60 ಶಾಸಕರನ್ನು ಹೊಂದಿರುವ ಬಿಜೆಪಿಯವರು ನಮ್ಮ ಸರ್ಕಾರ ಬೀಳಿಸ್ತಾರಾ? ನಾವು 136 ಕಾಂಗ್ರೆಸ್ ಶಾಸಕರಿದ್ದೇವೆ. ನಾವೆಲ್ಲರೂ ಒಗ್ಗಟ್ಟಿನಿಂದಲೇ ಇದ್ದೇವೆ. ಅವರಪ್ಪನಾಣೆಗೂ ನಮ್ಮ ಸರ್ಕಾರವನ್ನು ಕೆಡವಲು ಸಾಧ್ಯವೂ ಇಲ್ಲ. ನಮ್ಮ ಸರ್ಕಾರಕ್ಕೆ ಏನೂ ಆಗುವುದೂ ಇಲ್ಲ ಎಂದು ಶಾಮನೂರು ಶಿವಶಂಕರಪ್ಪ ತಮ್ಮದೇ ಶೈಲಿಯಲ್ಲಿ ವಿಪಕ್ಷ ಬಿಜೆಪಿ ವಿರುದ್ಧ ಹರಿಹಾಯ್ದರು.